ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಮಾರುಕಟ್ಟೆಯಲ್ಲಿ ಜನಜಾತ್ರೆ, ಭರ್ಜರಿ ವಹಿವಾಟು

ಆಯುಧ ಪೂಜೆ– ವಿಜಯದಶಮಿ ಆಚರಣೆಗೆ ಸಿದ್ಧತೆ: ತುಂತುರು ಮಳೆ ನಡುವೆಯೂ ಖರೀದಿ
Last Updated 24 ಅಕ್ಟೋಬರ್ 2020, 16:35 IST
ಅಕ್ಷರ ಗಾತ್ರ

ಕೋಲಾರ: ಆಯುಧ ಪೂಜೆ ಹಾಗೂ ವಿಜಯದಶಮಿ ಹಿನ್ನೆಲೆಯಲ್ಲಿ ಗ್ರಾಹಕರು ಪೂಜಾ ಸಾಮಗ್ರಿ ಖರೀದಿಗಾಗಿ ನಗರದ ಮಾರುಕಟ್ಟೆಗಳಿಗೆ ಶನಿವಾರ ಮುಗಿಬಿದ್ದರು. ವಸ್ತುಗಳ ಬೆಲೆ ಏರಿಕೆ ನಡುವೆಯೂ ಮಾರುಕಟ್ಟೆಯಲ್ಲಿ ವಹಿವಾಟು ಜೋರಾಗಿತ್ತು.

ಹಳೆ ಬಸ್‌ ನಿಲ್ದಾಣ, ಎಂ.ಜಿ.ರಸ್ತೆ, ಎಂ.ಬಿ.ರಸ್ತೆ, ಟೇಕಲ್‌ ರಸ್ತೆ, ದೊಡ್ಡಪೇಟೆ, ವಾಸವಿ ದೇವಸ್ಥಾನ ರಸ್ತೆ, ಕಾಳಮ್ಮ ಗುಡಿ ರಸ್ತೆ, ಅಮ್ಮವಾರಿಪೇಟೆ ಸೇರಿದಂತೆ ಪ್ರಮುಖ ವಾಣಿಜ್ಯ ಸ್ಥಳಗಳ ಸುತ್ತಮುತ್ತ ಜನಜಂಗುಳಿಯೇ ಕಂಡುಬಂತು. ಬೆಳಿಗ್ಗೆಯಿಂದ ರಾತ್ರಿವರೆಗೂ ವಹಿವಾಟು ಭರ್ಜರಿಯಾಗಿ ನಡೆಯಿತು.

ಹಣ್ಣು, ತರಕಾರಿ, ದಿನಸಿ ಹಾಗೂ ಸಿಹಿ ತಿನಿಸು ಅಂಗಡಿಗಳು ಗ್ರಾಹಕರಿಂದ ತುಂಬಿ ಹೋಗಿದ್ದವು. ಪ್ರಮುಖ ರಸ್ತೆಗಳ ಬದಿಯಲ್ಲಿ ಹಾಗೂ ಪಾದಚಾರಿ ಮಾರ್ಗದಲ್ಲಿ ವರ್ತಕರು ಹೂವು, ಹಣ್ಣು, ಬಾಳೆಕಂದು, ಮಾವಿನ ಸೊಪ್ಪು, ನಿಂಬೆ ಹಣ್ಣು, ಬೂದ ಕುಂಬಳಕಾಯಿ, ಸಿಹಿ ತಿನಿಸುಗಳನ್ನು ಮಾರುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಕೆಲ ವ್ಯಾಪಾರಿಗಳು ತಳ್ಳು ಗಾಡಿಗಳಲ್ಲಿ ಹಬ್ಬದ ಸಾಮಗ್ರಿ ಮಾರುತ್ತಿದ್ದ ದೃಶ್ಯ ಬಡಾವಣೆಗಳಲ್ಲಿ ಕಂಡುಬಂತು. ಟಿ.ಚನ್ನಯ್ಯ ರಂಗಮಂದಿರ ಮುಂಭಾಗದ ರಸ್ತೆ ಬದಿಯ ಹಣ್ಣಿನ ಅಂಗಡಿಗಳು ಗ್ರಾಹಕರಿಂದ ಗಿಜಿಗುಡುತ್ತಿದ್ದವು.

ಗಗನಕ್ಕೇರಿದ ಬೆಲೆ: ಹಬ್ಬದ ಹಿನ್ನೆಲೆಯಲ್ಲಿ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದವು. ಏಲಕ್ಕಿ ಬಾಳೆ ಕೆ.ಜಿಗೆ ₹ 70, ಪಚ್ಚ ಬಾಳೆ ₹ 30, ಕಿತ್ತಳೆ ಹಾಗೂ ಮೋಸಂಬಿ ₹ 100, ದ್ರಾಕ್ಷಿ ₹ 120, ಸೀಬೆ ಹಣ್ಣು ₹ 80, ಸೇಬು ಹಾಗೂ ದಾಳಿಂಬೆ ₹ 140, ದ್ರಾಕ್ಷಿ ₹ 130, ಸಪೋಟ ₹ 60 ಇತ್ತು. ಬೂದ ಕುಂಬಳಕಾಯಿ ಕೆ.ಜಿಗೆ ₹ 40, ತೆಂಗಿನಕಾಯಿ ಒಂದಕ್ಕೆ ₹ 30, ಮಾವಿನ ಸೊಪ್ಪು ಕಟ್ಟಿಗೆ ₹ 15 ಹಾಗೂ ಬಾಳೆಕಂದು ಎರಡಕ್ಕೆ ₹ 60 ಬೆಲೆ ಇತ್ತು.

ಮಲ್ಲಿಗೆ ಬಿಡಿ ಹೂವು ಕೆ.ಜಿಗೆ ₹ 600, ಕನಕಾಂಬರ ₹ 1,500, ಸೇವಂತಿ ಮತ್ತು ಗುಲಾಬಿ ₹ 280, ಮಾರಿ ಗೋಲ್ಡ್‌ ₹ 240, ಚೆಂಡು ಹೂವು ₹ 80, ರುದ್ರಾಕ್ಷಿ ಹೂವು ₹ 90 ಇತ್ತು. ಹೂವು, ಹಣ್ಣಿನ ಜತೆಗೆ ದಿನಸಿ ಪದಾರ್ಥಗಳ ಬೆಲೆಗಳು ಏರಿಕೆಯಾಗಿದ್ದವು. ಪೂಜಾ ಸಾಮಗ್ರಿ ಖರೀದಿಗಾಗಿ ಮಾರುಕಟ್ಟೆಗೆ ಬಂದಿದ್ದ ಗ್ರಾಹಕರಿಗೆ ವಸ್ತುಗಳ ಬೆಲೆ ಏರಿಕೆ ಬಿಸಿ ತಟ್ಟಿತು.

ವಾಹನಗಳಿಗೆ ಪೂಜೆ: ಭಾನುವಾರ (ಅ.25) ಸಾರ್ವತ್ರಿಕ ರಜೆ ಇರುವ ಕಾರಣ ಸರ್ಕಾರಿ ಕಚೇರಿಗಳಲ್ಲಿ ಶನಿವಾರವೇ ಆಯುಧ ಪೂಜೆ ಆಚರಿಸಲಾಯಿತು. ಕಚೇರಿ ಬಾಗಿಲುಗಳಿಗೆ ಬಾಳೆ ಕಂದು, ಮಾವಿನ ತೋರಣ ಕಟ್ಟಿ ಹೂವಿನ ಅಲಂಕಾರ ಮಾಡಲಾಗಿತ್ತು. ಸರ್ಕಾರಿ ವಾಹನಗಳನ್ನು ತೊಳೆದು ಪೂಜೆ ಸಲ್ಲಿಸಲಾಯಿತು. ಇನ್ನು ಸಾರ್ವಜನಿಕರು ವಾಹನಗಳನ್ನು ತೊಳೆಸಲು ಗ್ಯಾರೇಜ್‌ಗಳ ಬಳಿ ಸಾಲುಗಟ್ಟಿ ನಿಂತಿದ್ದರು.

ವಾಹನ ದಟ್ಟಣೆ: ಸಂಜೆಯಾದಂತೆ ಮಾರುಕಟ್ಟೆಗೆ ಬರುವ ಗ್ರಾಹಕರ ಸಂಖ್ಯೆ ಹೆಚ್ಚುತ್ತಾ ಹೋಯಿತು. ಇದರಿಂದ ಪ್ರಮುಖ ವಾಣಿಜ್ಯ ಸ್ಥಳಗಳಲ್ಲಿ ವಾಹನ ದಟ್ಟಣೆ ಉಂಟಾಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ಮತ್ತು ಭಾರಿ ವಾಹನಗಳ ಓಡಾಟ ನಿರ್ಬಂಧಿಸಲಾಗಿತ್ತು.

ಮಾರುಕಟ್ಟೆ ಪ್ರದೇಶದ ಸುತ್ತಮುತ್ತ ಸಂಚಾರ ನಿರ್ವಹಣೆಗೆ ಹೆಚ್ಚಿನ ಪೊಲೀಸರು ಹಾಗೂ ಗೃಹರಕ್ಷಕ ದಳ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಪರಸ್ಥಳದ ಸಾರ್ವಜನಿಕರು ಹಬ್ಬದ ಆಚರಣೆಗಾಗಿ ಸ್ವಂತ ಊರುಗಳಿಗೆ ಹೋಗಲು ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಬಸ್‌ಗೆ ಕಾಯುತ್ತಾ ನಿಂತಿದ್ದ ದೃಶ್ಯ ಕಂಡುಬಂತು. ರಾತ್ರಿ ವೇಳೆಗೆ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಪ್ರಯಾಣಿಕರ ದೊಡ್ಡ ದಂಡೇ ಇತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT