ಕೋಲಾರ: ‘ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಈ ಬಾರಿ ಜಿಲ್ಲೆಯನ್ನು ಪ್ರಥಮ ಸ್ಥಾನಕ್ಕೆ ಕೊಂಡೊಯ್ಯುವ ಜವಾಬ್ದಾರಿ ವಿದ್ಯಾರ್ಥಿಗಳಿಗೆ ಮೇಲಿದೆ’ ಎಂದು ಎಸ್ಸೆಸ್ಸೆಲ್ಸಿ ಪರೀಕ್ಷೆಯ ಜಿಲ್ಲಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರ ಪ್ರಸಾದ್ ತಿಳಿಸಿದರು.
ತಾಲ್ಲೂಕಿನ ನರಸಾಪುರದ ವ್ಯಾಲಿ ಪಬ್ಲಿಕ್ ಶಾಲೆಯ ಸಭಾಂಗಣದಲ್ಲಿ ಶುಕ್ರವಾರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ನಡೆದ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಮಾತನಾಡಿ, ‘ಎಸ್ಸೆಸ್ಸೆಲ್ಸಿ ಪರೀಕ್ಷೆಯೂ ಮುಂದಿನ ಭವಿಷ್ಯ ರೂಪಿಸುತ್ತದೆ. ಸಮಯ ವ್ಯರ್ಥ ಮಾಡದೇ ಆತ್ಮವಿಶ್ವಾಸದಿಂದ ಪರೀಕ್ಷೆಗೆ ಸಿದ್ದರಾಗಬೇಕು’ ಎಂದು ಸಲಹೆ ನೀಡಿದರು.
‘ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯಿಂದ ವಿದ್ಯಾರ್ಥಿಗಳಿಗೆ ಪ್ರತಿ ವಿಷಯದಲ್ಲೂ ಆರು ಪ್ರಶ್ನೆ ಪತ್ರಿಕೆಗಳನ್ನು ತಯಾರಿಸಿ ನೀಡಲಾಗಿದೆ. ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ವಿಶೇಷ ಪ್ರಶ್ನೆಗಳನ್ನು ರೂಪಿಸಲಾಗಿದೆ. ಕೈಪಿಡಿಯ ಮೂಲಕ ಶಿಕ್ಷಕರಿಗೆ ಅಗತ್ಯ ಮಾಹಿತಿ ನೀಡಲಾಗಿದ್ದು, ಇದರ ಪ್ರಯೋಜನೆ ಪಡೆದುಕೊಳ್ಳಲು ಮುಂದಾಗಬೇಕು’ ಎಂದು ತಿಳಿಸಿದರು.
‘ಪರೀಕ್ಷೆ ಬಗ್ಗೆ ಉದಾಸೀನ ಬೇಡ. ಪರೀಕ್ಷೆಗೆ ಕೇವಲ ೨೭ ದಿನ ಬಾಕಿ ಇದೆ. ಪ್ರತಿ ನಿಮಿಷವೂ ಅಮೂಲ್ಯವಾಗಿದ್ದು, ನೀವು ಕಲಿಕೆಯಲ್ಲಿ ಆಸಕ್ತಿ ವಹಿಸಿ ಶ್ರದ್ಧೆಯಿಂದ ಓದಿದ್ದೇ ಆದಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಲು ಸಾಧ್ಯ’ ಎಂದರು.
‘ಏಕಾಗ್ರತೆಯಿಂದ ಕಲಿಕೆಗೆ ಮುಂದದಾಗ ಪರೀಕ್ಷೆಯನ್ನು ಸುಲಭವಾಗಿ ಎದುರಿಸಲು ಸಹಾರಿಯಾಗುತ್ತದೆ. ಪಠಣ, ಮನನ, ಗಹನ ವಿದ್ಯಾರ್ಥಿ ಜೀವನದಲ್ಲಿ ಅತ್ಯಗತ್ಯ, ನಿಮ್ಮ ಆಲೋಚನೆ ಕೇವಲ ಕಲಿಕೆಯ ಕಡೆಯೇ ಇರಬೇಕು’ ಎಂದು ತಿಳಿಸಿದರು.
‘ಈ ಬಾರಿ ಹೊಸ ಮಾದರಿ ಪ್ರಶ್ನೆಪತ್ರಿಕೆಯಾಗಿದ್ದು, ೨ ಅಂಕಗಳ ಪ್ರಶ್ನೆಗಳು ಕಡಿಮೆ ಬರುತ್ತದೆ. ೩ ಅಂಕಗಳ ಪ್ರಶ್ನೆಗಳು ಹೆಚ್ಚಿರುತ್ತವೆ. ವಿಶೇಷವಾಗಿ ೫ ಅಂಕಗಳ ಪ್ರಶ್ನೆ ಇರಲಿದೆ. ಒಟ್ಟಾರೆಯಾಗಿ ಪ್ರಥಮ ಭಾಷೆಗೆ ೪೫ ಪ್ರಶ್ನೆಗಳು ಹಾಗೂ ಇತರೆಲ್ಲಾ ವಿಷಯಗಳಿಗೆ ೩೮ ಪ್ರಶ್ನೆಗಳು ಇರುತ್ತವೆ’ ಎಂದು ವಿವರಿಸಿದರು.
ನರಸಾಪುರ ಪಿಯು ಕಾಲೇಜಿನ ಮುಖ್ಯ ಶಿಕ್ಷಕ ಶಿವಪ್ರಸಾದ್, ವ್ಯಾಲಿ ಪಬ್ಲಿಕ್ ಶಾಲೆ ಪ್ರಾಂಶುಪಾಲೆ ಜಿ.ಸುಮಾ, ಬಸವೇಶ್ವರ ಶಾಲೆಯ ಕಾರ್ಯದರ್ಶಿ ಬಿ.ಎಸ್.ಜಗದೀಶ್, ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಭವಾನಿ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.