ಕೋಲಾರ: ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜಗೌಡ ಹಾಗೂ ಕ್ಷೇತ್ರ ಸಂಪನ್ಮೂಲ ಅಧಿಕಾರಿ ರಾಮಕೃಷ್ಣಪ್ಪ ಅವರು ತಾಲ್ಲೂಕಿನ ಹೊಗರಿ ಗೊಲ್ಲಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
‘ಗ್ರಾಮ ಶಿಕ್ಷಣ ಪಡೆ ಮಕ್ಕಳ ಹಕ್ಕುಗಳ ಗ್ರಾಮಸಭೆ, ಗ್ರಾಮ ಪಂಚಾಯಿತಿಗಳಲ್ಲಿ ಓದುವ ಬೆಳಕು ಕಾರ್ಯಕ್ರಮಕ್ಕೆ ಗುರುತಿನ ಚೀಟಿ. ಜಲಜೀವನ್ ಮಿಷನ್ ಅಡಿ ನಲ್ಲಿಗಳಲ್ಲಿ ನೀರಿನ ವ್ಯವಸ್ಥೆ, ಶೌಚಾಲಯ, ಇಂಗು ಗುಂಡಿ, ಉತ್ತಮ ಪರಿಸರ ನಿರ್ಮಾಣ ಮಾಡುವ ಜವಾಬ್ದಾರಿ ಎಲ್ಲರ ಮೇಲಿದೆ’ ಎಂದು ನಾಗರಾಜಗೌಡ ಹೇಳಿದರು.
‘ಶಾಲೆಯ ನಲಿ ಕಲಿ ಕೊಠಡಿಗಳು ಬಹಳ ಅಂದವಾಗಿವೆ. ಶಿಕ್ಷಕರು ಮಕ್ಕಳ ಕಲಿಕೆಗೆ ಪೂರಕ ವಾತಾವರಣ ನಿರ್ಮಿಸಿದ್ದಾರೆ. ಈ ಶಾಲೆಯು ತಾಲ್ಲೂಕಿನ ಇತರೆ ಶಾಲೆಗಳಿಗೆ ಮಾದರಿಯಾಗಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
‘ಕೋವಿಡ್- ಹಿನ್ನೆಲೆಯಲ್ಲಿ ಶಿಕ್ಷಕರು ವೈಯಕ್ತಿಕ ಸುರಕ್ಷತೆ ಬಗ್ಗೆ ಕಾಳಜಿ ವಹಿಸಬೇಕು. ಶಾಲೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿ ಬರಬೇಕು. ಕೈಗಳನ್ನು ಸ್ವಚ್ಛ ಮಾಡಲು ಆಗಾಗ್ಗೆ ಸ್ಯಾನಿಟೈಸರ್ ಬಳಸಬೇಕು. ಕೋವಿಡ್ ಸುರಕ್ಷತಾ ಮಾರ್ಗಸೂಚಿ ಪಾಲಿಸುವಂತೆ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರಿಗೆ ಜಾಗೃತಿ ಮೂಡಿಸಬೇಕು’ ಎಂದು ಸಲಹೆ ನೀಡಿದರು.
ಶಾಲೆಯ ಮುಖ್ಯ ಶಿಕ್ಷಕ ವೆಂಕಟಶಿವಪ್ಪ, ಶಿಕ್ಷಕಿ ಆರ್.ನಿರ್ಮಲಾ ಹಾಜರಿದ್ದರು