ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇತ್ರದಾನದಿಂದ ಅಂಧರ ಬಾಳು ಬೆಳಗಿ: ಜಿಲ್ಲಾಧಿಕಾರಿ ಸೆಲ್ವಮಣಿ

Last Updated 13 ಅಕ್ಟೋಬರ್ 2021, 16:37 IST
ಅಕ್ಷರ ಗಾತ್ರ

ಕೋಲಾರ: ‘ಮನುಷ್ಯನ ಪಂಚೇಂದ್ರಿಯಗಳಲ್ಲಿ ಕಣ್ಣು ಪ್ರಮುಖವಾದದ್ದು. ಕಣ್ಣು ದಾನ ಮಾಡುವ ಮೂಲಕ ದೃಷ್ಟಿ ನೀಡಿ ಅಂಧರ ಬಾಳು ಬೆಳಗಬೇಕು. ನೇತ್ರದಾನವು ಜನಾಂದೋಲನದ ರೀತಿ ಆಗಬೇಕು’ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಆಶಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಇಲ್ಲಿ ಬುಧವಾರ ಹಮ್ಮಿಕೊಂಡಿದ್ದ 22ನೇ ವಿಶ್ವ ದೃಷ್ಟಿ ದಿನ ಕಾರ್ಯಕ್ರಮದಲ್ಲಿ ಮಾತನಾಡಿ, ‘ದೃಷ್ಟಿ ದೋಷದಿಂದ ನರಳುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ನೇತ್ರದಾನ ಮಹಾದಾನ. ಮನುಷ್ಯನ ದೇಹದ ಜತೆ ಮಣ್ಣಾಗುವ ಕಣ್ಣುಗಳನ್ನು ದಾನ ಮಾಡುವ ಮೂಲಕ ಅಂಧರ ಬಾಳು ಬೆಳಗಬೇಕು’ ಎಂದರು.

‘ಮನುಷ್ಯನ ದೇಹಕ್ಕೆ ಸಾವು ಬರುತ್ತದೆ. ಆದರೆ, ಕಣ್ಣಿಗೆ ಸಾವಿಲ್ಲ. ಕಣ್ಣುಗಳು ಅಮೂಲ್ಯ ಅಂಗಗಳು. ಕಣ್ಣುಗಳ ಆರೈಕೆಯಷ್ಟೇ ರಕ್ಷಣೆಯೂ ಮುಖ್ಯ. ಇತ್ತೀಚಿನ ವರ್ಷಗಳಲ್ಲಿ ಮೊಬೈಲ್‌ನ ಅತಿಯಾದ ಬಳಕೆಯಿಂದ ಮಕ್ಕಳು ಮತ್ತು ವಯೋವೃದ್ಧರಲ್ಲಿ ದೃಷ್ಟಿ ದೋಷ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿದರು.

‘ಕಣ್ಣು ಇದ್ದವರು ಮಾತ್ರ ಸಮಾಜದಲ್ಲಿ ನಡೆಯುವ ಘಟನೆಗಳನ್ನು ತಿಳಿಯಲು ಮತ್ತು ಪ್ರಕೃತಿ ಸೌಂದರ್ಯ ಸವಿಯಲು ಸಾಧ್ಯ. ಜನರು ಸ್ವಪ್ರೇರಣೆಯಿಂದ ನೇತ್ರದಾನಕ್ಕೆ ಮುಂದಾಗುವ ಜತೆಗೆ ಇತರರನ್ನೂ ಪ್ರೇರೇಪಿಸಿದರೆ ಅಂಧತ್ವ ನಿವಾರಿಸಬಹುದು. ಕಣ್ಣುಗಳ ರಕ್ಷಣೆ ಮತ್ತು ನೇತ್ರದಾನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು’ ಎಂದು ಕಿವಿಮಾತು ಹೇಳಿದರು.

‘ಮನುಷ್ಯನ ಸಾವಿನ ನಂತರ ಕಣ್ಣುಗಳನ್ನು ಸುಡದೆ ಅಥವಾ ಮಣ್ಣು ಮಾಡದೆ ಅಂಧರಿಗೆ ದಾನ ಮಾಡುವ ಮೂಲಕ ಜೀವನ ಸಾರ್ಥಕಪಡಿಸಿಕೊಳ್ಳಿ. ಯಾವುದೇ ವಯೋಮಾನದವರು ನೇತ್ರದಾನ ಮಾಡಬಹುದು. ಸಾವಿನ ನಂತರ 6 ತಾಸಿನೊಳಗೆ ನೇತ್ರದಾನ ಮಾಡಬೇಕು. ಕಣ್ಣುಗಳ ರಕ್ಷಣೆಗೆ ಪೌಷ್ಟಿಕ ಆಹಾರ ಸೇವಿಸಬೇಕು. ಟಿ.ವಿ, ಮೊಬೈಲ್, ಕಂಪ್ಯೂಟರ್‌ ವೀಕ್ಷಣೆ ಕಡಿಮೆ ಮಾಡಬೇಕು’ ಎಂದು ಸಲಹೆ ನೀಡಿದರು.

ದೃಷ್ಟಿ ದೋಷ: ‘ದೇಶದಲ್ಲಿ ಸುಮಾರು 1.50 ಕೋಟಿ ಮಂದಿ, ಕರ್ನಾಟಕದಲ್ಲಿ 1.20 ಲಕ್ಷ ಹಾಗೂ ಜಿಲ್ಲೆಯಲ್ಲಿ 6 ಸಾವಿರ ಮಂದಿ ದೃಷ್ಟಿ ದೋಷದಿಂದ ಬಳಲುತ್ತಿದ್ದಾರೆ. ಕಣ್ಣಿನ ಸೋಂಕು, ವಿಟಮಿನ್ ಎ ಕೊರತೆ, ಅಪೌಷ್ಟಿಕತೆ, ಕಣ್ಣಿಗೆ ಗಾಯವಾದಾಗ, ಅನುವಂಶಿಕ ಕಾಯಿಲೆ, ಪಟಾಕಿ ಸಿಡಿಸುವ ಸಂದರ್ಭದಲ್ಲಿ. ಮೊಬೈಲ್, ಟಿ.ವಿ ಹಾಗೂ ಕಂಪ್ಯೂಟರ್ ಹೆಚ್ಚಾಗಿ ವೀಕ್ಷಿಸುವುದರಿಂದ ದೃಷ್ಟಿ ಹೀನವಾಗುತ್ತದೆ’ ಎಂದು ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ಡಾ ಎನ್.ಸಿ.ನಾರಾಯಣಸ್ವಾಮಿ ಮಾಹಿತಿ ನೀಡಿದರು.

‘ದೃಷ್ಟಿ ದೋಷ ನಿವಾರಣೆಗಾಗಿ 9 ತಿಂಗಳಿಂದ 5 ವರ್ಷದೊಳಗಿನ ಮಕ್ಕಳಿಗೆ ವಿಟಮಿನ್ ಎ ಮಾತ್ರೆ ನೀಡಲಾಗುತ್ತಿದೆ. ಧೂಮಪಾನ ಮಾಡಬಾರದು. ಮಕ್ಕಳು ಪೌಷ್ಟಿಕ ಆಹಾರ ಸೇವಿಸಬೇಕು ಹಾಗೂ ಹಸಿ ತರಕಾರಿ ಹೆಚ್ಚಾಗಿ ಸೇವಿಸಬೇಕು. ಕಂಪ್ಯೂಟರ್‌ ಮುಂದೆ ಕೆಲಸ ಮಾಡುವವರು 20 ನಿಮಿಷಕ್ಕೊಮ್ಮೆ ಕಣ್ಣುಗಳಿಗೆ 20 ಸೆಕೆಂಡ್‌ ವಿಶ್ರಾಂತಿ ನೀಡಬೇಕು. ವರ್ಷಕೊಮ್ಮೆ ಕಡ್ಡಾಯವಾಗಿ ಕಣ್ಣುಗಳ ತಪಾಸಣೆ ಮಾಡಿಸಬೇಕು’ ಎಂದು ಹೇಳಿದರು.

‘ಕಣ್ಣಿನ ಮಹತ್ವ ಹಾಗೂ ಕಣ್ಣುಗಳ ರಕ್ಷಣೆ ಬಗ್ಗೆ ಜನರಿಗೆ ಅರಿವು ಮೂಡಿಸಲಾಗುವುದು. ಗ್ರಾಮೀಣ ಭಾಗದಲ್ಲಿ ಪ್ರತಿ ಮನೆಗೂ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡಿ ಕಣ್ಣಿನ ಸಮಸ್ಯೆ ಇರುವವರನ್ನು ಗುರುತಿಸಿ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ನೀಡಲಾಗುವುದು’ ಎಂದು ವಿವರಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಉಕೇಶ್‌ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಗದೀಶ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದನ್, ತಾಯಿ ಮತ್ತು ಮಕ್ಕಳ ಆರೋಗ್ಯ ಯೋಜನಾಧಿಕಾರಿ (ಆರ್‌ಸಿಎಚ್‌) ಡಾ.ವಿಜಯಕುಮಾರಿ, ಜಿಲ್ಲಾ ಆರೋಗ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರೇಮಾ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT