ಕೋಲಾರ: ‘ಕೋವಿಡ್–19 ಆತಂಕದ ಹಿನ್ನೆಲೆಯಲ್ಲಿ ರಾಜ್ಯದ ರಕ್ತನಿಧಿ ಕೇಂದ್ರಗಳಲ್ಲಿ ರಕ್ತ ಸಂಗ್ರಹಣೆ ಪ್ರಮಾಣ ಗಣನೀಯವಾಗಿ ಕುಸಿದಿದೆ. ರಕ್ತದಾನವು ಕರ್ತವ್ಯವಾಗಬೇಕು’ ಎಂದು ಜಿಲ್ಲಾ ಪೊಲೀಸ್ ಇಲಾಖೆಯ ಬೆರಳಚ್ಚು ವಿಭಾಗದ ಎಸ್ಐ ಸೋಮಶಂಕರ್ ಅಭಿಪ್ರಾಯಪಟ್ಟರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಕೇಶವ ಕೃಪಾ ಸಂವರ್ಧನಾ ಸಮಿತಿ ಹಾಗೂ ರಾಷ್ಟ್ರೋತ್ಥಾನ ಪರಿಷತ್ ರಕ್ತನಿಧಿ ಸಹಯೋಗದಲ್ಲಿ ಇಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿ, ‘ರಕ್ತದಾನವು ಜೀವದಾನವಾಗಿದೆ. ರಕ್ತದ ಅಗತ್ಯತೆ ಯಾರಿಗಾದರೂ ಬರಬಹುದು. ರಕ್ತದ ಕೊರತೆಯಿಂದಾಗಿ ಗರ್ಭಿಣಿಯರು, ಅಪಘಾತದ ಗಾಯಾಳುಗಳ ಚಿಕಿತ್ಸೆಗೆ ದೊಡ್ಡ ಸಮಸ್ಯೆಯಾಗಿದೆ’ ಎಂದರು.
‘ರಾಜ್ಯದಲ್ಲಿ ರಕ್ತ ಸಂಗ್ರಹಣೆ ಪ್ರಮಾಣ ಕಡಿಮೆಯಾಗಿರುವ ಸಂಬಂಧ ಸರ್ಕಾರದಿಂದ ಮಾಹಿತಿ ಬಂದಿದೆ. ರಕ್ತ ಮಾರುಕಟ್ಟೆಯಲ್ಲಿ ಸಿಗುವುದಿಲ್ಲ. ರಕ್ತವು ಜೀವ ಉಳಿಸಲು ನೀಡುವ ಉಡುಗೊರೆ. ತ್ಯಾಗ ಎಂಬುದು ಅಕ್ಕಪಕ್ಕದವರು ಮಾಡಲಿ, ಬಲಿದಾನ ಎಂಬುದು ಪ್ರಾಣಿ ಪಕ್ಷಿಗಳಿಗೆ ಸೀಮಿತವಲ್ಲ. ಸ್ವತಃ ತ್ಯಾಗ ಬಲಿದಾನಕ್ಕೆ ಸಿದ್ಧರಾಗಬೇಕು’ ಎಂದು ಸಲಹೆ ನೀಡಿದರು.
‘ಕೋವಿಡ್–19ರ ಸಂಕಷ್ಟದ ಸಂದರ್ಭದಲ್ಲಿ ರಕ್ತದ ಕೊರತೆ ಕಾರಣಕ್ಕೆ ಸಾಕಷ್ಟು ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆ ಮುಂದೂಡಲಾಗುತ್ತಿದೆ. ಕೊರೊನಾ ಸಮಯದಲ್ಲಿ ರಕ್ತ ನೀಡುವವರ ಅವಶ್ಯಕತೆ ಹೆಚ್ಚಿದೆ. ಆರೋಗ್ಯವಂತರು ರಕ್ತದಾನ ಮಾಡುವ ಜೀವ ರಕ್ಷಣೆಗೆ ಮುಂದಾಗಬೇಕು’ ಎಂದು ಮನವಿ ಮಾಡಿದರು.
ಜೀವ ರಕ್ಷಕರು: ‘ರಕ್ತದಾನ ಮಾಡುವುದರಿಂದ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುವುದಿಲ್ಲ. ರಕ್ತದಾನಿಗಳು ಜೀವ ರಕ್ಷಕರು’ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಸಿ.ಕೆ.ಶಿವಣ್ಣ ಅಭಿಪ್ರಾಯಪಟ್ಟರು.
‘ಮನುಷ್ಯ ರಕ್ತ ನೀಡುವುದರಿಂದ ಸಣ್ಣಗಾಗುತ್ತಾನೆ ಎಂಬ ತಪ್ಪು ಭಾವನೆ ಬಿಡಬೇಕು. ಯುವಕ ಯುವತಿಯರು ರಕ್ತದಾನದ ಮಹತ್ವ ಅರಿಯಬೇಕು. ವರ್ಷಕ್ಕೆ 2 ಬಾರಿ ರಕ್ತದಾನ ಮಾಡಿ ಆರೋಗ್ಯವಂತರಾಗಿರಬೇಕು. ರಕ್ತದಾನದ ಸಂಬಂಧ ಜಾಗೃತಿ ಮೂಡಿಸಬೇಕು. ಎಲ್ಲರೂ ರಕ್ತದಾನ ಮಾಡಲು ಪಣ ತೊಡಬೇಕು’ ಎಂದು ಕಿವಿಮಾತು ಹೇಳಿದರು.
ಶಿಬಿರದಲ್ಲಿ 80 ಯುನಿಟ್ ರಕ್ತ ಸಂಗ್ರಹವಾಯಿತು. ರಾಷ್ಟ್ರೋತ್ಥಾನ ಪರಿಷತ್ ರಕ್ತನಿಧಿ ಸದಸ್ಯರಾದ ಡಾ.ನವೀನ್, ಈಶ್ವರ್, ಸಿದ್ದಲಿಂಗಪ್ಪ, ಬಿಜೆಪಿ ನಗರ ಘಟಕದ ಅಧ್ಯಕ್ಷ ತಿಮ್ಮರಾಯಪ್ಪ, ವೈದ್ಯ ಡಾ.ಬಾಲಸುಂದರ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.