ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಕ್ತದಾನ ಜೀವ ಉಳಿಸುವ ಉಡುಗೊರೆ

Last Updated 20 ಅಕ್ಟೋಬರ್ 2020, 15:20 IST
ಅಕ್ಷರ ಗಾತ್ರ

ಕೋಲಾರ: ಕೋವಿಡ್–19 ಆತಂಕದ ಹಿನ್ನೆಲೆಯಲ್ಲಿ ರಾಜ್ಯದ ರಕ್ತನಿಧಿ ಕೇಂದ್ರಗಳಲ್ಲಿ ರಕ್ತ ಸಂಗ್ರಹಣೆ ಪ್ರಮಾಣ ಗಣನೀಯವಾಗಿ ಕುಸಿದಿದೆ. ರಕ್ತದಾನವು ಕರ್ತವ್ಯವಾಗಬೇಕು’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಮ್ಯಾ ಅಭಿಪ್ರಾಯಪಟ್ಟರು.

ತಾಲ್ಲೂಕಿನ ವೇಮಗಲ್‌ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, ‘ರಕ್ತದಾನವು ಜೀವದಾನವಾಗಿದೆ. ರಕ್ತದ ಅಗತ್ಯತೆ ಯಾರಿಗಾದರೂ ಬರಬಹುದು. ರಕ್ತದ ಕೊರತೆಯಿಂದಾಗಿ ಗರ್ಭಿಣಿಯರು, ಅಪಘಾತದ ಗಾಯಾಳುಗಳ ಚಿಕಿತ್ಸೆಗೆ ದೊಡ್ಡ ಸಮಸ್ಯೆಯಾಗಿದೆ’ ಎಂದರು.

‘ರಾಜ್ಯದಲ್ಲಿ ರಕ್ತ ಸಂಗ್ರಹಣೆ ಪ್ರಮಾಣ ಕಡಿಮೆಯಾಗಿರುವ ಸಂಬಂಧ ಸರ್ಕಾರದಿಂದ ಮಾಹಿತಿ ಬಂದಿದೆ. ರಕ್ತ ಮಾರುಕಟ್ಟೆಯಲ್ಲಿ ಸಿಗುವುದಿಲ್ಲ. ರಕ್ತವು ಜೀವ ಉಳಿಸಲು ನೀಡುವ ಉಡುಗೊರೆ. ತ್ಯಾಗ ಎಂಬುದು ಅಕ್ಕಪಕ್ಕದವರು ಮಾಡಲಿ, ಬಲಿದಾನ ಎಂಬುದು ಪ್ರಾಣಿ ಪಕ್ಷಿಗಳಿಗೆ ಸೀಮಿತವಲ್ಲ. ಸ್ವತಃ ತ್ಯಾಗ ಬಲಿದಾನಕ್ಕೆ ಸಿದ್ಧರಾಗಬೇಕು’ ಎಂದು ಸಲಹೆ ನೀಡಿದರು.

‘ಕೋವಿಡ್‌–19ರ ಸಂಕಷ್ಟದ ಸಂದರ್ಭದಲ್ಲಿ ರಕ್ತದ ಕೊರತೆ ಕಾರಣಕ್ಕೆ ಸಾಕಷ್ಟು ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆ ಮುಂದೂಡಲಾಗುತ್ತಿದೆ. ಕೊರೊನಾ ಸಮಯದಲ್ಲಿ ರಕ್ತ ನೀಡುವವರ ಅವಶ್ಯಕತೆ ಹೆಚ್ಚಿದೆ. ಆರೋಗ್ಯವಂತರು ರಕ್ತದಾನ ಮಾಡುವ ಜೀವ ರಕ್ಷಣೆಗೆ ಮುಂದಾಗಬೇಕು’ ಎಂದು ಮನವಿ ಮಾಡಿದರು.

ಜಾಗೃತಿ ಮೂಡಿಸಿ: ‘ರಕ್ತದಾನ ಮಾಡುವುದರಿಂದ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುವುದಿಲ್ಲ. ರಕ್ತದಾನಿಗಳು ಜೀವ ರಕ್ಷಕರು. ಮನುಷ್ಯ ರಕ್ತ ನೀಡುವುದರಿಂದ ಸಣ್ಣಗಾಗುತ್ತಾನೆ ಎಂಬ ತಪ್ಪು ಭಾವನೆ ಬಿಡಬೇಕು. ವರ್ಷಕ್ಕೆ 2 ಬಾರಿ ರಕ್ತದಾನ ಮಾಡಿ ಆರೋಗ್ಯವಂತರಾಗಿರಬೇಕು. ರಕ್ತದಾನದ ಸಂಬಂಧ ಜಾಗೃತಿ ಮೂಡಿಸಬೇಕು. ಎಲ್ಲರೂ ರಕ್ತದಾನ ಮಾಡಲು ಪಣ ತೊಡಬೇಕು’ ಎಂದು ಕಿವಿಮಾತು ಹೇಳಿದರು.

ಆಸ್ಪತ್ರೆ ವೈದ್ಯರಾದ ಡಾ.ರವಿಕಿರಣ್, ಡಾ.ರೇವತಿ, ಶುಶ್ರೂಷಕಿಯರಾದ ರೂಪಾ, ಪುಷ್ಪಾ, ನಿರ್ಮಲಾ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT