ಕೋಲಾರ: ‘ಸಮಾಜದಲ್ಲಿನ ಪ್ರತಿಯೊಬ್ಬರಿಗೂ ಸಮಾನ ಅವಕಾಶ ಕಲ್ಪಿಸುವುದೆ ಸಂವಿಧಾನ ಮೂಲಕ ಆಶಯ’ ಎಂದು ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಚ್.ಗಂಗಾಧರ್ ಅಭಿಪ್ರಾಯಪಟ್ಟರು.
ಇಲ್ಲಿನ ಸರ್ಕಾರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಂವಿಧಾನದ ೭೦ನೇ ವರ್ಷಾಚರಣೆ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಸಂವಿಧಾನದ ಕರ್ತವ್ಯಗಳ ಬಗ್ಗೆ ವಿದ್ಯಾರ್ಥಿಗಳಗೆ ಜಾಗೃತಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
‘ಹಕ್ಕುಗಳ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಲು ಪಠ್ಯ ಪುಸ್ತಕದಲ್ಲಿ ಸಂವಿಧಾನದ ಬಗ್ಗೆ ಅಳವಡಿಸಲಾಗಿದೆ. ವಿದ್ಯಾರ್ಥಿಗಳು ಸಂವಿಧಾನವನ್ನು ಅಧ್ಯಯನ ಮಾಡಿ ಸಮ ಸಮಾಜ ನಿರ್ಮಾಣದಲ್ಲಿ ಪಾಲ್ಗೊಳ್ಳಬೇಕು’ ಎಂದು ತಿಳಿಸಿದರು.
‘ಭಾರತ ದೇಶ ಭವ್ಯ ಪರಂಪರೆಯ ಸ್ವಾತಂತ್ರವಾದ ಸಾರ್ವಭೌಮ ರಾಷ್ಟ್ರ. ವಿಭಿನ್ನ ಭಾಷೆ, ಧರ್ಮ, ಸಂಸ್ಕೃತಿಯನ್ನು ಒಳಗೊಂಡಿದ್ದರೂ, ಪ್ರತಿಯೊಬ್ಬರೂ ತಮ್ಮ ಧರ್ಮಾಚರಣೆಗೆ ಸ್ವಾತಂತ್ರ್ಯವಿದೆ’ ಎಂದರು.
‘ಜಾತಿ, ಧರ್ಮದ ಎಲ್ಲೇ ಮೀರಿ ಎಲ್ಲರೊಂದಿಗೂ ನೆಮ್ಮದಿಯಿಂದ ಬದುಕುವ ಗುಣ ಮಕ್ಕಳು ಬೆಳೆಸಿಕೊಳ್ಳಬೇಕು. ಮೊದಲಿಗೆ ನಾವು ಭಾರತೀಯರು ಎಂಬ ಭಾವನೆ ಬಲಗೊಳ್ಳಬೇಕು’ ಎಂದು ಸಲಹೆ ನೀಡಿದರು.
ಸಂವಿಧಾನದ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ವಕೀಲ ಎಂ.ವಿ.ರತ್ನಮ್ಮ, ಸಂವಿಧಾನದ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದ ಕಾರ್ಯವ್ಯಾಪ್ತಿಗಳ ಬಗ್ಗೆ ವಕೀಲ ಕೆ.ಆರ್.ಧನರಾಜ್ ಹಾಗೂ ಸಂವಿಧಾನದ ಇತಿಹಾಸದ ಬಗ್ಗೆ ವಕೀಲರ ಸಂಘದ ಕಾರ್ಯದರ್ಶಿ ಎನ್.ಡಿ.ಶ್ರಿನಿವಾಸ ಉಪನ್ಯಾಸ ನೀಡಿದರು.