ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯಕರ ಸಮಾಜ ನಿರ್ಮಾಣ ಮಾಡಿ

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನಾಗರಾಜ್ ಕಿವಿಮಾತು
Last Updated 9 ಜುಲೈ 2021, 15:53 IST
ಅಕ್ಷರ ಗಾತ್ರ

ಕೋಲಾರ: ‘ಡೆಂಗಿ ತಡೆಗಟ್ಟುವಿಕೆ ಪ್ರಕ್ರಿಯೆ ಮನೆಯಿಂದಲೇ ಆರಂಭವಾಗಬೇಕು. ಜನರು ಮುನ್ನೆಚ್ಚರಿಕೆ ವಹಿಸುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣ ಮಾಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ್ ಕಿವಿಮಾತು ಹೇಳಿದರು.

ಡೆಂಗಿ ವಿರೋಧಿ ಮಾಸಾಚರಣೆ ಕುರಿತು ಇಲ್ಲಿ ಶುಕ್ರವಾರ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿ, ‘ಮಳೆಗಾಲ ಆರಂಭವಾಗಿರುವುದರಿಂದ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಮಳೆ ನೀರು ನಿಂತು ಸೊಳ್ಳೆ ಉತ್ಪತ್ತಿ ಹೆಚ್ಚಲಿದೆ. ಸೊಳ್ಳೆಗಳಿಂದ ಮಲೇರಿಯಾ, ಡೆಂಗಿ, ಚಿಕೂನ್ ಗುನ್ಯ ಕಾಯಿಲೆ ಬರುತ್ತದೆ’ ಎಂದರು.

‘ಡೆಂಗಿ ಜ್ವರವು ಸಾಂಕ್ರಾಮಿಕ ರೋಗವಾಗಿದ್ದು, ಸಾರ್ವಜನಿಕರು ಮನೆ ಸುತ್ತಮುತ್ತ ಒಳಾಂಗಣದಲ್ಲಿ ಮತ್ತು ಹೊರಾಂಗಣದಲ್ಲಿ ನೀರು ಶೇಖರಣೆಯಾಗದಂತೆ ಎಚ್ಚರ ವಹಿಸಬೇಕು. ವಯೋವೃದ್ಧರು, ಗರ್ಭಿಣಿಯರು ಹಾಗೂ ಮಕ್ಕಳು ಡೆಂಗಿ ತಡೆಗೆ ಕಡ್ಡಾಯವಾಗಿ ಸೊಳ್ಳೆ ಪರದೆ ಬಳಸಬೇಕು. ಸೊಳ್ಳೆ ಕಚ್ಚದಂತೆ ಮೈತುಂಬಾ ಬಟ್ಟೆ ಧರಿಸಬೇಕು. ಸೊಳ್ಳೆ ಬತ್ತಿ ಮತ್ತು ಮುಲಾಮು ದ್ರಾವಣ ಉಪಯೋಗಿಸಬೇಕು’ ಎಂದು ಸಲಹೆ ನೀಡಿದರು.

‘ಒಳಾಂಗಣ ಮತ್ತು ಹೊರಾಂಗಣದ ಸಿಮೆಂಟ್ ತೊಟ್ಟಿಗಳು, ಪ್ಲಾಸ್ಟಿಕ್ ಡ್ರಮ್‌, ಬಕೆಟ್‌, ಬ್ಯಾರಲ್, ಹೂವಿನ ಕುಂಡಗಳು, ಹವಾನಿಯಂತ್ರಿತ ಉಪಕರಣ (ಎ.ಸಿ), ಮಡಿಕೆಗಳು, ಒರಳು ಕಲ್ಲು, ತೆಂಗಿನ ಚಿಪ್ಪುಗಳಲ್ಲಿ ಮಳೆ ನೀರು ಶೇಖರಣೆಯಾಗಿ ಈಡಿಸ್ ಲಾರ್ವಾ ಉತ್ಪತ್ತಿಯಾಗುತ್ತವೆ. ನೀರು ಶೇಖರಣೆ ಮಾಡಿರುವ ತೊಟ್ಟಿ, ಡ್ರಮ್‌ಗಳನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಸ್ವಚ್ಛಗೊಳಿಸಬೇಕು’ ಎಂದು ಸೂಚಿಸಿದರು.

‘ಕೆರೆ, ಕುಂಟೆ, ಕಾಲುವೆ, ತೊಟ್ಟಿಗಳಲ್ಲಿ ಗಪ್ಪಿ ಅಥವಾ ಗ್ಯಾಂಬೂಸಿಯಾ ಮೀನು ಮರಿಗಳನ್ನು ಬಿಡಬೇಕು. ನೀರಿನ ಡ್ರಮ್‌ಗಳಿಗೆ ಮುಚ್ಚಳ ಮುಚ್ಚಬೇಕು ಹಾಗೂ ಬಯಲಿನಲ್ಲಿರುವ ತ್ಯಾಜ್ಯ ವಸ್ತುಗಳಾದ ಬಾಟಲಿ, ಪ್ಲಾಸ್ಟಿಕ್ ಲೋಟಗಳು, ಒರಳು ಕಲ್ಲು, ಚಿಪ್ಪಿನಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರ ವಹಿಸಬೇಕು. ಡೆಂಗಿ ಸಂಶಯಾಸ್ಪದ ಪ್ರಕರಣಗಳ ಬಗ್ಗೆ ಸಮುದಾಯಕ್ಕೆ ಅರಿವು ಮೂಡಿಸಲು ಆರೋಗ್ಯ ಇಲಾಖೆಯಿಂದ ಈಡಿಸ್ ಲಾರ್ವಾ ಸಮೀಕ್ಷೆ ನಡೆಸಬೇಕು’ ಎಂದು ಹೇಳಿದರು.

ಔಷಧ ಲಭ್ಯವಿಲ್ಲ: ‘ಜಿಲ್ಲೆಯಲ್ಲಿ ಜುಲೈ 1ರಿಂದ ಜುಲೈ 31ರವರೆಗೆ ಡೆಂಗಿ ವಿರೋಧಿ ಮಾಸಾಚರಣೆ ನಡೆಸಲಾಗುತ್ತದೆ. ಡೆಂಗಿ ಮತ್ತು ಚಿಕೂನ್ ಗುನ್ಯ ಕಾಯಿಲೆಗೆ ನಿಖರ ಔಷಧ ಲಭ್ಯವಿಲ್ಲ. ಸಮುದಾಯ ಸಹಭಾಗಿತ್ವದಿಂದ ಈ ಕಾಯಿಲೆಗಳನ್ನು ತಡೆಗಟ್ಟಬಹುದು’ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಎಂ.ಕಮಲಾ ವಿವರಿಸಿದರು.

‘ವೈರಸ್‌ ಸೋಂಕು ಹೊಂದಿದ ಈಡೀಸ್ ಈಜಿಪ್ಟೈ ಎಂಬ ಸೊಳ್ಳೆಯ ಕಡಿತದಿಂದ ಒಬ್ಬರಿಂದ ಇನ್ನೊಬ್ಬರಿಗೆ ಡೆಂಗಿ ಜ್ವರ ಹಾಗೂ ಚಿಕೂನ್‌ ಗುನ್ಯ ಕಾಯಿಲೆ ಬರುತ್ತದೆ. ಸ್ವಚ್ಛ ನೀರಿನಲ್ಲಿ ಹುಟ್ಟುವ ಈ ಸೊಳ್ಳೆ ಸಾಧಾರಣವಾಗಿ ಹಗಲಿನಲ್ಲಿ ಕಚ್ಚುತ್ತದೆ. ಈಡೀಸ್ ಈಜಿಪ್ಟೈ ಸೊಳ್ಳೆಯು ತನ್ನ ಜೀವನ ಚಕ್ರ ಪೂರ್ಣಗೊಳಿಸಲು 8ರಿಂದ 10 ದಿನ ತೆಗೆದುಕೊಳ್ಳುತ್ತದೆ. ಮೊದಲ 3 ಹಂತಗಳಾದ ಮೊಟ್ಟೆ, ಲಾರ್ವ ಮತ್ತು ಪ್ಯೂಪ ಪ್ರಕ್ರಿಯೆಯು ನಿಂತ ನೀರಿನಲ್ಲಿ ನಡೆಯುತ್ತದೆ’ ಎಂದು ಮಾಹಿತಿ ನೀಡಿದರು.

ಲಕ್ಷಣಗಳು: ‘ಇದ್ದಕ್ಕಿದ್ದಂತೆ ಬರುವ ಅಧಿಕ ಜ್ವರ, ತೀವ್ರ ತಲೆ ನೋವು, ಕಣ್ಣುಗಳ ಹಿಂಭಾಗದಲ್ಲಿ ತೀವ್ರತರ ನೋವು, ಮೈಕೈ ನೋವು, ವಾಂತಿಯು ಡೆಂಗಿ ಜ್ವರದ ಲಕ್ಷಣಗಳು. ಈ ಕಾಯಿಲೆ ಬಂದವರು ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿ ಸೂಕ್ತ ಚಿಕಿತ್ಸೆ ಪಡೆಯಬೇಕು’ ಎಂದು ಕಿವಿಮಾತು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಗದೀಶ್, ಜಿಲ್ಲಾ ಕುಷ್ಠ ರೋಗ ಮತ್ತು ಅಂಧತ್ವ ನಿರ್ಮೂಲನಾಧಿಕಾರಿ ಡಾ.ನಾರಾಯಣಸ್ವಾಮಿ, ತಾಯಿ ಮತ್ತು ಮಕ್ಕಳ ಆರೋಗ್ಯ ಯೋಜನಾಧಿಕಾರಿ (ಆರ್‌ಸಿಎಚ್‌) ಡಾ.ವಿಜಯಕುಮಾರಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ರೇಣುಕಾದೇವಿ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT