ಕೋಲಾರ: ‘ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಅನುಮೋದನೆಯೊಂದಿಗೆ ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಎಸ್.ಚೌಡಪ್ಪ ಅವರನ್ನು ನೇಮಕ ಮಾಡಲಾಗಿದೆ’ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿ.ಸುರೇಶ್ಬಾಬು ತಿಳಿಸಿದರು.
ಇಲ್ಲಿ ಮಂಗಳವಾರ ಚೌಡಪ್ಪ ಅವರಿಗೆ ನೇಮಕ ಪ್ರಮಾಣಪತ್ರ ವಿತರಿಸಿ ಮಾತನಾಡಿ, ‘ರಾಜ್ಯ ಸರ್ಕಾರಿ ನೌಕರರ ಸಂಘದ ಉಪವಿಧಿಗಳು-2020 ಮತ್ತು ನಿಯಮ 22(ಎ)(7)ರ ಉಪವಿಧಿಯಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಚೌಡಪ್ಪ ಅವರನ್ನು ಬೈಲಾ ನಿಯಮ 12(ಬಿ) ಅನ್ವಯ ರಾಜ್ಯಾಧ್ಯಕ್ಷರ ಅನುಮೋದನೆ ಪಡೆದು ನೇಮಕ ಮಾಡಲಾಗಿದೆ’ ಎಂದು ವಿವರಿಸಿದರು.
ನಿಕಟಪೂರ್ವ ಪ್ರಧಾನ ಕಾರ್ಯದರ್ಶಿಯಾಗಿದ್ದ ಚೌಡಪ್ಪ ಇತ್ತೀಚೆಗೆ ರಾಜ್ಯ ಸಂಘದ ಬೈಲಾ ತಿದ್ದುಪಡಿ ನಿಯಮದನ್ವಯ ನಾಮನಿರ್ದೇಶನಗೊಂಡವರ ಹುದ್ದೆ ರದ್ದಾದ ಹಿನ್ನೆಲೆಯಲ್ಲಿ ತಮ್ಮ ಸ್ಥಾನ ಕಳೆದುಕೊಂಡಿದ್ದರು. ಸಂಘಟನೆಯಲ್ಲಿ ಹೆಚ್ಚು ಸಕ್ರಿಯರಾಗಿರುವ ಚೌಡಪ್ಪ ಇತ್ತೀಚೆಗೆ ನಡೆದ ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟದ ಯಶಸ್ಸಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.
‘ಸಂಘವನ್ನು ಬಲಗೊಳಿಸುವ ನಿಟ್ಟಿನಲ್ಲಿ ಎಲ್ಲರನ್ನೂ ಒಗ್ಗೂಡಿಸಿಕೊಂಡು ಕರೆದೊಯ್ಯುವುದರ ಜತೆಗೆ ಸಂಘದ ಗೌರವ, ಘನತೆಗೆ ಕುತ್ತು ಬಾರದಂತೆ ನಡೆದುಕೊಳ್ಳುತ್ತೇನೆ’ ಎಂದು ಚೌಡಪ್ಪ ಹೇಳಿದರು.
ಜಿಲ್ಲಾ ಸರ್ಕಾರಿ ನೌಕರರ ಸಂಘದ ಖಜಾಂಚಿ ವಿಜಯ್, ನಿಕಟಪೂರ್ವ ಪದಾಧಿಕಾರಿಗಳಾದ ಶ್ರೀನಿವಾಸರೆಡ್ಡಿ, ಸುಬ್ರಮಣಿ, ಪುರುಷೋತ್ತಮ್, ಶಿವಕುಮಾರ್, ಮಂಜುನಾಥ್, ನಾರಾಯಣಸ್ವಾಮಿ ಹಾಜರಿದ್ದರು.