ಮಂಡಿ ಮಾಲೀಕರಿಂದ ಕಮಿಷನ್; ಶೋಷಣೆ ನಿಲ್ಲಿಸಿ

ಮುಳಬಾಗಿಲು: ಮಂಡಿ ಮಾಲೀಕರು ರೈತರಿಂದ ಯಾವುದೇ ಕಮಿಷನ್ ಪಡೆಯಬಾರದೆಂದು ಆದೇಶವಿದ್ದರೂ ಅದನ್ನು ಉಲ್ಲಂಘನೆ ಮಾಡಿ ರೈತರಿಗೆ ವಂಚನೆ ಮಾಡುತ್ತಿದ್ದಾರೆ ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಕೋರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಗೊಲ್ಲಹಳ್ಳಿ ವೆಂಕಟೇಶ್ ಅವರಿಗೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಬುಧವಾರ ಮನವಿ ನೀಡಿದರು.
ಮಾರುಕಟ್ಟೆಯಲ್ಲಿ ರೈತರಿಗೆ ವಿಶ್ರಾಂತಿ ಭವನ ನಿರ್ಮಿಸಬೇಕು ಹಾಗೂ ಎಪಿಎಂಸಿಯಲ್ಲಿರುವ ಕೊರತೆಗಳನ್ನು ನೀಗಿಸಬೇಕು ಎಂದು ಒತ್ತಾಯಿಸಿದರು.
ರೈತರು ಕಷ್ಟಪಟ್ಟು ತರಕಾರಿಗಳನ್ನು ಬೆಳೆದು ಮಾರುಕಟ್ಟೆಗೆ ತಂದಾಗ ಅಲ್ಲಿ ಮೂಲ ಸೌಕರ್ಯಗಳು ಇರುವುದಿಲ್ಲ. ಮಂಡಿ ಮಾಲೀಕರು ರೈತರಿಗೆ ರಸೀದಿ ಕೊಡದೆ ಬಿಳಿ ಹಾಳೆಯಲ್ಲಿ ಬಿಲ್ ಬರೆದು ಕೊಡುತ್ತಾರೆ. ಟೊಮೆಟೊ ಮಂಡಿ ಮಾಲೀಕರು ರೈತರಿಂದ ಶೇ 9ರಿಂದ ಶೇ10 ಕಮಿಷನ್ ಪಡೆಯುತ್ತಾರೆ. ಇದನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.
ರೈತರಿಂದ ಕಮಿಷನ್ ಪಡೆದಿರುವ ಮಂಡಿ ಮಾಲೀಕರ ಪರವಾನಗಿ ರದ್ದುಗೊಳಿಸಬೇಕು. ಏಪ್ರಿಲ್, ಮೇ, ಜೂನ್ ತಿಂಗಳಲ್ಲಿ ಒಂದು ಬಾಕ್ಸ್ ಟೊಮೆಟೊ ಬೆಲೆ ₹40ರಿಂದ ₹80ರವರೆಗೆ ಮಾರಾಟ ಮಾಡಿದ್ದಾರೆ. ರೈತರಿಗೆ ಕಮಿಷನ್ ಹಣವನ್ನು ಹಿಂತಿರುಗಿಸಬೇಕೆಂದು ಆದೇಶಿಸಬೇಕು. ಮಾರುಕಟ್ಟೆ ಸುತ್ತಲೂ ಕಾಂಪೌಂಡ್ ನಿರ್ಮಿಸಬೇಕು. ಮಾರುಕಟ್ಟೆಯಲ್ಲಿ ಸುಸಜ್ಜಿತ ಶೌಚಾಲಯ ಮತ್ತು ಕುಡಿಯುವ ನೀರಿನ ಘಟಕವನ್ನು ನಿರ್ಮಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಘಟಕದ ಅಧ್ಯಕ್ಷ ಕಲ್ವಮಂಜಲಿ ರಾಮುಶಿವಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ನಾರಾಯಣಸ್ವಾಮಿ, ಜಿಲ್ಲಾ ಘಟಕದ ಉಪಾಧ್ಯಕ್ಷ ನಂದಕುಮಾರ್, ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಪ್ರೆಸ್ಗಣೇಶ್, ತಾಲ್ಲೂಕು ಘಟಕದ ಅಧ್ಯಕ್ಷ ಎಲ್.ಎನ್.ಬಾಬು, ಕಾರ್ಯದರ್ಶಿ ವಿನೋದ್ಕುಮಾರ್, ಸಂಘಟನಾ ಕಾರ್ಯದರ್ಶಿ ಸಿ.ವಿ.ಸುರೇಶ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.