ಕೋಲಾರ: ‘ಕೋವಿಡ್ ಸಂಕಷ್ಟ ಹಾಗೂ ಬರಗಾಲದಲ್ಲೂ ಹೈನೋದ್ಯಮವು ಜಿಲ್ಲೆಯ ರೈತರ ಆರ್ಥಿಕತೆಗೆ ಆಸರೆಯಾಗಿದೆ’ ಎಂದು ಕೋಚಿಮುಲ್ ನಿರ್ದೇಶಕ ಡಿ.ವಿ.ಹರೀಶ್ ಅಭಿಪ್ರಾಯಪಟ್ಟರು.
ಇಲ್ಲಿ ಗುರುವಾರ ಗುಂಪು ವಿಮೆ ಯೋಜನೆಯ ಚೆಕ್ ಹಾಗೂ ಕೃತಕ ಗರ್ಭಧಾರಣೆ ಕಿಟ್ ವಿತರಿಸಿ ಮಾತನಾಡಿ, ‘ಕೋಚಿಮುಲ್ ರೈತರ ಹಿತ ರಕ್ಷಣೆಗೆ ಬದ್ಧವಾಗಿದೆ. ಹಸು ವಿಮೆ ಮೂಲಕ ಹೈನುಗಾರರನ್ನು ರಕ್ಷಿಸುವ ಕೆಲಸ ಮಾಡಲಾಗಿದೆ. ಸಂಕಷ್ಟದಲ್ಲಿರುವವರಿಗೆ ಒಕ್ಕೂಟ ನೆರವಾಗಲಿದೆ’ ಎಂದು ಭರವಸೆ ನೀಡಿದರು.
‘ತಾಲ್ಲೂಕನ್ನು ಕ್ಯಾನ್ರಹಿತ ಹಾಲು ಸಂಗ್ರಹ ತಾಲ್ಲೂಕಾಗಿ ಮಾಡುತ್ತೇವೆ. ಎಲ್ಲಾ ಎಂಪಿಸಿಎಸ್ಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ಒಕ್ಕೂಟದಿಂದ ಹಣಕಾಸು ನೆರವು ನೀಡಲಾಗುತ್ತದೆ. ₹ 567 ಪಾವತಿಸಿ ರಾಸುಗಳಿಗೆ ವಿಮೆ ಮಾಡಿಸಬೇಕು. ರಾಸುಗಳಿಗೆ ಆಕಸ್ಮಿಕವಾಗಿ ಮೃತಪಟ್ಟರೆ ಪ್ರತಿ ರಾಸಿಗೆ ₹ 70 ಸಾವಿರ ಪರಿಹಾರ ಸಿಗಲಿದೆ. ಹಾಲು ಉತ್ಪಾದಕರು ಇದರ ಸದುಪಯೋಗ ಪಡೆಯಬೇಕು’ ಎಂದು ಕಿವಿಮಾತು ಹೇಳಿದರು.
‘ಕೋವಿಡ್ ಕಾರಣಕ್ಕೆ ಹಾಲು ಮತ್ತು ಹಾಲಿನ ಉತ್ಪನ್ನಗಳಿಗೆ ಬೇಡಿಕೆ ಕುಸಿದಿದೆ. ಇದರಿಂದ ಒಕ್ಕೂಟಕ್ಕೆ ಪ್ರತಿ ತಿಂಗಳು ನಷ್ಟವಾಗುತ್ತಿದ್ದು, ತಾತ್ಕಾಲಿಕವಾಗಿ ಹಾಲು ಖರೀದಿ ದರ ಕಡಿಮೆ ಮಾಡಲಾಗಿದೆ. ಮುಂದೆ ವಹಿವಾಟು ಸುಧಾರಿಸಿದಾಗ ಹಾಲು ಖರೀದಿ ದರ ಹೆಚ್ಚಿಸುತ್ತೇವೆ. ಈಗ ದರ ಕಡಿಮೆ ಮಾಡಿರುವುದಕ್ಕೆ ರೈತಾಪಿ ವರ್ಗ ಧೃತಿಗೆಡಬಾರದು’ ಎಂದು ತಿಳಿಸಿದರು.
‘ಪ್ರತಿ ರೈತರು ಕಡ್ಡಾಯವಾಗಿ ರಾಸುಗಳ ಗುಂಪು ವಿಮೆ ಮಾಡಸಬೇಕು. ರಾಸುಗಳ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕು. ಒಕ್ಕೂಟದಿಂದ ಸಿಗುವ ತಾಂತ್ರಿಕ ಸೌಲಭ್ಯ ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು. ಹೈನೋದ್ಯಮದಿಂದ ದೂರ ಸರಿಯಬಾರದು. ಗ್ರಾಮೀಣ ಭಾಗದಲ್ಲಿ ಹಾಲು ಸಂಘಗಳನ್ನು ಅಭಿವೃದ್ಧಿಪಡಿಸಬೇಕು’ ಎಂದರು.
ಕೋಚಿಮುಲ್ ಶಿಬಿರ ಉಪ ವ್ಯವಸ್ಥಾಪಕ ಶ್ರೀಧರಮೂರ್ತಿ, ವಿಸ್ತರಣಾಧಿಕಾರಿಗಳಾದ ಶ್ರೀನಿವಾಸ್, ವಿ.ರಾಜಬಾಬು, ಎಸ್.ಎನ್.ನಾಗಪ್ಪ, ವಿವಿಧ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಜರಿದ್ದರು.