ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ | ತನಿಖೆಗೆ ಸಮಿತಿ ರಚಿಸಿ: ಸಂಸದ ಮುನಿಸ್ವಾಮಿ

ಹಾಸ್ಟೆಲ್‌ಗಳಿಗೆ ಮಳೆ ನೀರು ಕೊಯ್ಲು ಅಳವಡಿಕೆಯಲ್ಲಿ ಅಕ್ರಮ
Last Updated 13 ಆಗಸ್ಟ್ 2020, 16:18 IST
ಅಕ್ಷರ ಗಾತ್ರ

ಕೋಲಾರ: ‘ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿನಿಲಯಗಳಿಗೆ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಕೆಯಲ್ಲಿ ಅಕ್ರಮ ನಡೆದಿದ್ದು, ತನಿಖೆಗೆ ಸಮಿತಿ ರಚಿಸಬೇಕು’ ಎಂದು ಸಂಸದ ಎಸ್‌.ಮುನಿಸ್ವಾಮಿ ತಿಳಿಸಿದರು.

ಇಲ್ಲಿ ಗುರುವಾರ ನಡೆದ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಮಾತನಾಡಿ, ‘ಮಳೆ ನೀರು ಕೊಯ್ಲು ಪದ್ಧತಿ ಅಳವಡಿಕೆಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಸಾಕಷ್ಟು ದೂರು ಬಂದಿವೆ. ಅದೇ ರೀತಿ 2017ರಿಂದ ಜಿಲ್ಲೆಯಲ್ಲಿ ಕೊಳವೆ ಬಾವಿ ಕೊರೆದಿರುವುದರಲ್ಲೂ ಅವ್ಯವಹಾರ ನಡೆದಿದೆ’ ಎಂದು ಹೇಳಿದರು.

‘ಬಹುಪಾಲು ಕೊಳವೆ ಬಾವಿಗಳ ಆಳ ಸರಾಸರಿ 1,400 ಅಡಿ ಎಂದು ದಾಖಲೆಪತ್ರ ತೋರಿಸಿ ಬಿಲ್‌ ಮಂಜೂರು ಮಾಡಲಾಗಿದೆ. ಈ ಬಗ್ಗೆ ಅನುಮಾನವಿದೆ. ಮಳೆ ನೀರು ಕೊಯ್ಲು ಪದ್ಧತಿ ಅಳವಡಿಕೆ ಮತ್ತು ಕೊಳವೆ ಬಾವಿಗಳ ಅಕ್ರಮದ ಸಂಬಂಧ ಪಾರದರ್ಶಕ ತನಿಖೆಯಾಗಬೇಕು’ ಎಂದು ಸೂಚನೆ ನೀಡಿದರು.

‘ಮನೆ ಮನೆಗೂ ನೀರು ಕೊಡಲು ಜಲಶಕ್ತಿ ಮತ್ತು ಅಟಲ್‌ ಭೂಜಲ ಯೋಜನೆಯಡಿ ಸಾವಿರಾರು ಕೋಟಿ ಖರ್ಚು ಮಾಡಲಾಗುತ್ತಿದೆ. ಆದರೆ, ಕುಡಿಯುವ ನೀರಿನ ಉದ್ದೇಶಕ್ಕೆ ಕೊಳವೆ ಬಾವಿ ಕೊರೆಸುವುದರಲ್ಲಿ ಅಕ್ರಮ ನಡೆದರೆ ಹೇಗೆ? ಗ್ರಾಮ ಪಂಚಾಯಿತಿಗಳ ವಾಟರ್‌ಮನ್‌ಗಳಿಗೆ ಏಳೆಂಟು ತಿಂಗಳಿಂದ ಸಂಬಳ ಕೊಟ್ಟಿಲ್ಲ. ಅವರಿಗೆ ಶೀಘ್ರವೇ ವೇತನ ಪಾವತಿಸಿ’ ಎಂದು ಅಧಿಕಾರಿಗಳಿಗೆ ಆದೇಶಿಸಿದರು.

ಶಿಷ್ಟಾಚಾರ ಪಾಲಿಸಿ: ‘ಅಧಿಕಾರಿಗಳು ಸರ್ಕಾರಿ ಕಾರ್ಯಕ್ರಮಗಳು, ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮಗಳಿಗೆ ಜನಪ್ರತಿನಿಧಿಗಳನ್ನು ಆಹ್ವಾನಿಸಿ ಶಿಷ್ಟಾಚಾರ ಪಾಲಿಸಬೇಕು’ ಎಂದು ಜಿ.ಪಂ ಅಧ್ಯಕ್ಷ ಸಿ.ಎಸ್.ವೆಂಕಟೇಶ್ ಹೇಳಿದರು.

‘ಜಿ.ಪಂ ಸದಸ್ಯರನ್ನು ಸರ್ಕಾರಿ ಕಾರ್ಯಕ್ರಮಗಳಿಗೆ ಅಹ್ವಾನಿಸದ ಬಗ್ಗೆ ಈಗಾಗಲೇ ಸಾಕಷ್ಟು ಬಾರಿ ಚರ್ಚೆ ಮಾಡಿದ್ದೇವೆ. ಶಿಷ್ಟಾಚಾರ ಪಾಲಿಸುವಂತೆ ಸೂಚಿಸಿದ್ದರೂ ಅಧಿಕಾರಿಗಳು ನಮ್ಮ ಆದೇಶ ಪಾಲಿಸದೆ ನಿರ್ಲಕ್ಷ್ಯ ತೋರುತ್ತಿರುವುದು ಸರಿಯಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಉತ್ತಮ ಫಲಿತಾಂಶ ಬಂದಿದೆ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿ ಹುತಾತ್ಮರಾದ ಯೋಧರಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳಿಗೆ ಸಂಬಂಧಪಟ್ಟ ಕಡತಗಳು ಬಾಕಿಯಿದ್ದು, ಇವುಗಳನ್ನು ಶೀಘ್ರವೇ ವಿಲೇವಾರಿ ಮಾಡಬೇಕು’ ಎಂದು ತಿಳಿಸಿದರು.

ಆನೆ ಕಾರಿಡಾರ್‌: ‘ಜಿಲ್ಲೆಯಲ್ಲಿ ಅರಣ್ಯ ಪ್ರದೇಶದ ಸುತ್ತಮುತ್ತ ಆನೆಗಳ ದಾಳಿಯನ್ನು ಶಾಶ್ವತವಾಗಿ ತಡೆಯಲು ನರೇಗಾ ಯೋಜನೆಯಡಿ ಆನೆ ಕಾರಿಡಾರ್ ನಿರ್ಮಿಸಲಾಗುತ್ತದೆ. ಕೊರೊನಾ ಸೋಂಕಿನ ತಡೆಗೆ ಜನರು ಸಹಕರಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಪ್ರಭಾರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಿ.ಸತ್ಯಭಾಮ ಮನವಿ ಮಾಡಿದರು.

‘ಕೆಆರ್‌ಐಡಿಎಲ್‌ ವತಿಯಿಂದ ಬಂಗಾರಪೇಟೆ ತಾಲ್ಲೂಕಿನ ಕಳ್ಳಿಪುರ- ಶಿಳ್ಳೇಕೆರೆ ರಸ್ತೆಯನ್ನು ಶಾಸಕರ ಅನುದಾನದಲ್ಲಿ ನಿರ್ಮಿಸಲಾಗಿದೆ. ಆ ರಸ್ತೆಯ ಅಕ್ಕಪಕ್ಕದ ಜಮೀನುಗಳಿಗೆ ಮಳೆ ನೀರು ಹರಿದು ಬೆಳೆ ಹಾಳಾಗಿದೆ. ಈ ಸಮಸ್ಯೆಯನ್ನು ಕೆಆರ್‌ಐಡಿಎಲ್‌ ಅಧಿಕಾರಿಗಳ ಗಮನಕ್ಕೆ ತಂದರೂ ಸ್ಪಂದಿಸಲಿಲ್ಲ. ಮುಂದೆ ಈ ರೀತಿ ಆಗಬಾರದು’ ಎಂದು ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಖಡಕ್‌ ಎಚ್ಚರಿಕೆ ನೀಡಿದರು.

ಶಾಸಕ ಕೆ.ಶ್ರೀನಿವಾಸಗೌಡ, ಜಿ.ಪಂ ಉಪಾಧ್ಯಕ್ಷೆ ಯಶೋದಾ, ಕೃಷಿ ಮತ್ತು ಕೈಗಾರಿಕಾ ಸ್ಧಾಯಿ ಸಮಿತಿ ಅಧ್ಯಕ್ಷೆ ಸಿ.ನಿರ್ಮಲಾ, ಸಾಮಾಜಿಕ ನ್ಯಾಯ ಸ್ಧಾಯಿ ಸಮಿತಿ ಅಧ್ಯಕ್ಷ ಸಿ.ಎನ್‌.ಅರುಣ್‌ಪ್ರಸಾದ್‌, ಶಿಕ್ಷಣ ಮತ್ತು ಆರೋಗ್ಯ ಸ್ಧಾಯಿ ಸಮಿತಿ ಅಧ್ಯಕ್ಷ ಚಿನ್ನಸ್ವಾಮಿಗೌಡ, ಸದಸ್ಯರು, ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT