ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸುಸೂತ್ರವಾಗಿ ಎಸ್‌ಎಸ್ಎಲ್‌ಸಿ ಪರೀಕ್ಷೆ ನಡೆಸಿ’

ಶಿಕ್ಷಕರಿಗೆ ಡಿಡಿಪಿಐ ಕೃಷ್ಣಮೂರ್ತಿ ಸೂಚನೆ
Last Updated 9 ಜುಲೈ 2021, 3:47 IST
ಅಕ್ಷರ ಗಾತ್ರ

ಮುಳಬಾಗಿಲು: ‘ಜುಲೈ 19 ಹಾಗೂ 22ರಂದು ನಡೆಯಲಿರುವ ಎಸ್ಎಸ್ಎಲ್‌ಸಿ ಪರೀಕ್ಷೆಯನ್ನು ಮುಖ್ಯಶಿಕ್ಷಕರು, ಪರೀಕ್ಷಾ ಅಧೀಕ್ಷಕರು ಹಾಗೂ ಕಸ್ಟೋಡಿಯನ್‌ಗಳು ಸರ್ಕಾರದ ಮಾರ್ಗಸೂಚಿ ಪಾಲಿಸಿ ಸುಸೂತ್ರವಾಗಿ ನಡೆಸಬೇಕು’ ಎಂದು ಡಿಡಿಪಿಐ ಕೃಷ್ಣಮೂರ್ತಿ ಹೇಳಿದರು.

ನಗರದ ಅಗ್ರಹಾರದಲ್ಲಿರುವ ಸರ್ಕಾರಿ ಅನುದಾನಿತ ಮಾರುತಿ ಪ್ರೌಢಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಎಸ್ಎಸ್ಎಲ್‌ಸಿ ಪರೀಕ್ಷೆ ನಡೆಸುವ ಸಂಬಂಧ ಪ್ರೌಢಶಾಲೆಯ ಮುಖ್ಯಶಿಕ್ಷಕರು, ಕಸ್ಟೋಡಿಯನ್‌ಗಳಿಗೆ ಏರ್ಪಡಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ಜು. 19ರಂದು ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, 22ರಂದು ಕನ್ನಡ, ಇಂಗ್ಲಿಷ್, ಹಿಂದಿ ವಿಷಯದ ಪರೀಕ್ಷೆ ಮೂರು ಗಂಟೆ ಅವಧಿಯಲ್ಲಿ ನಡೆಯಲಿದೆ. ಈ ಬಾರಿ ಪರೀಕ್ಷೆ ಬರೆಯುವ ವಿಧಾನ ಬದಲಾಗಿದ್ದು, ವಸ್ತುನಿಷ್ಟ ಪ್ರಶ್ನೆಗಳಿಗೆ ಉತ್ತರಿಸಬೇಕಾಗುತ್ತದೆ ಎಂದರು.

ಒಎಂಆರ್ ಶೀಟ್‌ಗಳಲ್ಲಿ ವಿದ್ಯಾರ್ಥಿಗಳು ಸರಿಯಾಗಿ ಉತ್ತರ ಶೇಡ್ ಮಾಡಬೇಕಾಗಿದೆ. ಈ ಬಗ್ಗೆ ಮುಖ್ಯಶಿಕ್ಷಕರು ವಿದ್ಯಾರ್ಥಿಗಳಿಗೆ ತಿಳಿವಳಿಕೆ ನೀಡಬೇಕು. ಕೋವಿಡ್ ಇರುವುದರಿಂದ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಗಮನಿಸಬೇಕು. ಅವರಲ್ಲಿ ಆತ್ಮಸ್ಥೈರ್ಯ ತುಂಬಬೇಕು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಬೇಕು ಎಂದು ತಿಳಿಸಿದರು.

ಪ್ರತಿ ಕೊಠಡಿಯಲ್ಲಿ ಗರಿಷ್ಠ 12 ಮಕ್ಕಳಿರಬೇಕು. ಒಂದು ಡೆಸ್ಕ್‌ಗೆ ಒಬ್ಬ ವಿದ್ಯಾರ್ಥಿಯಂತೆ ವಿದ್ಯಾರ್ಥಿಗಳ ನಡುವೆ 6 ಅಡಿ ಅಂತರವಿರಬೇಕು. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಆಸನ ವ್ಯವಸ್ಥೆ ಸರಿಯಾಗಿರಬೇಕು. ಯಾವ ವಿದ್ಯಾರ್ಥಿ ಯಾವ ಕೊಠಡಿಯಲ್ಲಿ ಬರೆಯುತ್ತಾನೆ ಎಂಬುದನ್ನು ಮುಂಚಿತವಾಗಿಯೇ ತಿಳಿಸುವ ವ್ಯವಸ್ಥೆ ಮಾಡಬೇಕು ಎಂದರು.

ವಿದ್ಯಾರ್ಥಿಗಳು ದೈಹಿಕ ಅಂತರ ಕಾಯ್ದುಕೊಂಡು ಒಳಬರಲು ಮತ್ತು ಹೊರಹೋಗಲು ಕ್ರಮ ತೆಗೆದುಕೊಳ್ಳಬೇಕು. ಪರೀಕ್ಷೆಗೆ ಬರುವ ವಿದ್ಯಾರ್ಥಿಗಳು ಹಾಗೂ ಮೇಲ್ವಿಚಾರಕರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಸಾಮಾಜಿಕ ಅಂತರ ಕಾಪಾಡಿಕೊಂಡಿರಬೇಕು. ಆಗಾಗ್ಗೆ ಸ್ಯಾನಿಟೈಸರ್‌ನಿಂದ ಕೈಗಳನ್ನು ತೊಳೆದುಕೊಳ್ಳಬೇಕು ಎಂದು ಹೇಳಿದರು.

ಪರೀಕ್ಷಾ ನೋಡಲ್ ಅಧಿಕಾರಿ ನಾಗೇಂದ್ರಪ್ರಸಾದ್ ಮಾತನಾಡಿ, ನೋಂದಣಿ ಮಾಡಿಕೊಂಡಿರುವ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಕಡ್ಡಾಯವಾಗಿ ಹಾಜರಾಗುವಂತೆ ಮುಖ್ಯಶಿಕ್ಷಕರು ಸೂಚಿಸಬೇಕು. ಯಾವುದೇ ಕಾರಣಕ್ಕೂ ಮಕ್ಕಳು ಪರೀಕ್ಷೆಯಿಂದ ವಂಚಿತರಾಗಬಾರದು. ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಛತೆಗೆ ಆದ್ಯತೆ ಕೊಡಬೇಕು. ಪರೀಕ್ಷಾ ಮಂಡಳಿಯ ನಿಯಮಗಳನ್ನು ಪರೀಕ್ಷಾ ಅಧೀಕ್ಷಕರು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದರು.

ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಆನಂದ್, ವಿಷಯ ಪರಿವೀಕ್ಷಕರಾದ ವಿ. ಕೃಷ್ಣಪ್ಪ, ಗಾಯತ್ರಿ, ಶಶಿವದನ, ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಎಂ. ಚಂಗಲರಾಯಪ್ಪ, ಮಾರುತಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಎಂ.ಆರ್. ಶ್ರೀಧರ್‌ ಬಾಬು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT