ಕೋಲಾರ: ‘ನಗರಸಭೆ ಚುನಾವಣೆಗೆ ಅಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಗೆಲ್ಲುವ ವಿಶ್ವಾಸವಿರುವ ಅಭ್ಯರ್ಥಿಗಳಿಗೆ ಟಿಕೇಟ್ ನೀಡಲಾಗುವುದು, ಉಳಿದ ಅಕಾಂಕ್ಷಿಗಳು ಭಿನ್ನಾಭಿಪ್ರಾಯ ಬಿಟ್ಟು ಕೆಲಸ ಮಾಡಬೇಕು’ ಎಂದು ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ತಿಳಿಸಿದರು.
ನಗರದ ಕಾಂಗ್ರೆಸ್ ಭವನದಲ್ಲಿ ನಗರಸಭೆ ಚುನಾವಣೆ ಸಂಬಂಧ ಸೋಮವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ‘ನಗರಸಭೆ ವ್ಯಾಪ್ತಿಯಲ್ಲಿ 35 ವಾರ್ಡ್ಗಳಿದ್ದು, ಮೀಸಲಾತಿ ಸಹ ಬದಲಾಗಿದೆ. ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಸ್ಥಳೀಯ ಮುಖಂಡರೊಂದಿಗೆ ಚರ್ಚಿಸಿ ಗೆಲ್ಲುವ ಅಭ್ಯರ್ಥಿಗೆ ಟಿಕೇಟ್ ನೀಡಲಾಗುವುದು’ ಎಂದು ಹೇಳಿದರು.
‘ನಗರದಲ್ಲಿ ಚರಂಡಿ, ರಸ್ತೆ, ಕುಡಿಯುವ, ಕಸ ಸಮಸ್ಯೆ ಸೇರಿದಂತೆ ಅನೇಕ ಸಮಸ್ಯೆಗಳು ಎದುರಾಗಿದೆ. ನಗರಸಭೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದ್ದರೆ ಮಾತ್ರ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಸಾಧ್ಯ. ಹಿಂದೆ ಅಗಿರುವ ತಪ್ಪುಗಳನ್ನು ಮರೆತು ಜನರ ಹಿತದೃಷ್ಟಿಯಿಂದ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಬೇಕಾಗಿದೆ’ ಎಂದರು.
‘ಸ್ಥಳೀಯರು ಇಂತಹ ಅಭ್ಯರ್ಥಿಗೆ ಟಿಕೇಟ್ ನೀಡಿ ಎಂದು ಶಿಫಾರಸ್ಸು ಮಾಡುವುದು ಹೆಚ್ಚಲ್ಲ. ನಮಗೆ ಗೆಲ್ಲುವಂತಹ ವ್ಯಕ್ತಿ ಬೇಕಾಗಿದೆ. ಜತೆಗೆ ಪ್ರತಿದಿನ ಸ್ಥಳೀಯರ ಸಂಪರ್ಕದಲ್ಲಿದ್ದು ಸಮಸ್ಯೆಗಳಿಗೆ ಸ್ಪಂದಿಸಬೇಕು. ಅಯಾ ವಾರ್ಡಿನ ಮುಖಂಡರು ಅಭ್ಯರ್ಥಿಯನ್ನು ಅಂತಿಮ ಮಾಡಿಕೊಂಡು ಗೆಲ್ಲಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.
ಪಕ್ಷದ ಚುನಾವಣಾ ವೀಕ್ಷಕ ಮಂಜುನಾಥ್, ‘ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದಿನ ವಿಧಾನಸಭೆ, ಸಂಸತ್ ಚುನಾವಣೆಗೆ ದಿಕ್ಸೂಚಿ, ಇದರಿಂದ ಈ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರ ತರುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ’ ಎಂದು ಹೇಳಿದರು.
‘ಈಗಿನ ರಾಜಕೀಯ ಪರಸ್ಥಿತಿಯಲ್ಲಿ ಯಾವುದೇ ಚುನಾವಣೆ ಕಾಂಗ್ರೆಸ್ಗೆ ಪ್ರತಿಷ್ಠೆಯಾಗಿದೆ. ಇದರಿಂದ ಕಾರ್ಯಕರ್ತರು ಸೂಕ್ತ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿ ಗೆಲ್ಲಿಸಿಕೊಳ್ಳಬೇಕಾಗಿದೆ. ಅಕಾಂಕ್ಷಿಗಳು ಭಿನ್ನಾಭಿಪರಾಯ ಮರೆತು ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡಬೇಕು’ ಎಂದು ತಿಳಿಸಿದರು.
ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಮಾತನಾಡಿ, ‘ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕೋಮುಗಲಭೆಗಳನ್ನು ಸೃಷ್ಟಿಸಿ, ಶಾಂತಿ ಕದಡುವ ಕೆಲಸ ಮಾಡುತ್ತಿದೆ’ ಎಂದು ಆರೋಪಿಸಿದರು.
‘ರಾಜ್ಯದಲ್ಲಿ ವಾಮಮಾರ್ಗದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ರಾಜ್ಯಯದ ಅಭಿವೃದ್ಧಿಯನ್ನು ಮರೆತು, ಪಕ್ಕ ರಾಜ್ಯಗಳ ಅಭಿವೃದ್ಧಿ ಕಡೆ ಗಮನ ಹರಿಸಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಏನೇ ರಾಜ್ಯದ ಪರ ತೀರ್ಮಾನ ಕೈಗೊಳ್ಳಲು ಮೋದಿ ಅನುಮತಿ ಇಲ್ಲದಿದ್ದು ಸಾಧ್ಯವಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ’ ಎಂದು ದೂರಿದರು.
‘ಜಿಲ್ಲೆಯ 3 ನಗರಸಭೆ ಚುನಾವಣೆಗೆ ಘೋಷಣೆಯಾಗಿದ್ದು, ಅಧಿಕಾರದ ಚುಕ್ಕಾಣಿ ಹಿಡಿಯುವ ಪ್ರಯತ್ನದಿಂದ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೇಟ್ ನೀಡಲಾಗುವುದು. ಇದಕ್ಕೆ ಕಾರ್ಯಕರ್ತರು ಜವಾಬ್ದಾರಿಯಿಂದ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.
ಮಾಜಿ ಸಚಿವ ನಿಸ್ಸಾರ್ ಅಹಮದ್, ಕಾಂಗ್ರೆಸ್ ಜಿಲ್ಲಾ ಘಟಕದ ಖಜಾಂಚಿ ರಾಮ್ಪ್ರಸಾದ್, ನಗರಸಭೆ ಮಾಜಿ ಸದಸ್ಯ ಶ್ರೀನಿವಾಸ್, ವರಿಷ್ಠ ರಾಜೇಶ್ಸಿಂಗ್, ಮುಖಂಡ ಜಮೀರ್ ಪಾಷ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.