ನವದೆಹಲಿ: ಸುಪ್ರೀಂ ಕೋರ್ಟ್ನ ನಾಲ್ವರು ಹಿರಿಯ ನ್ಯಾಯಮೂರ್ತಿಗಳು ಜನವರಿ 12ರಂದು ನಡೆಸಿದ್ದ ಮಾಧ್ಯಮಗೋಷ್ಠಿಯನ್ನು ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯನ್ಯಾಯಮೂರ್ತಿ (ಸಿಜೆಐ) ಟಿ.ಎಸ್. ಠಾಕೂರ್ ಟೀಕಿಸಿದ್ದಾರೆ.
‘ಸಾಂಸ್ಥಿಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಹೊರಗಿನವರ ನೆರವು ಕೇಳುವ ಅವಶ್ಯಕತೆ ಇರಲಿಲ್ಲ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
‘ಇದರಿಂದಾಗಿ, ಸುಪ್ರೀಂ ಕೋರ್ಟ್ ವ್ಯಾಪ್ತಿ ಒಳಗೆ ಚರ್ಚಿಸಿ ಪರಿಹರಿಸಿಕೊಳ್ಳಬೇಕಾಗಿದ್ದ ಸಮಸ್ಯೆಗಳ ಕುರಿತು ಮಾಧ್ಯಮ ಮತ್ತು ರಾಜಕಾರಣಿಗಳಿಗೆ ಮಾತನಾಡಲು ಅವಕಾಶ ನೀಡಿದಂತಾಯಿತು’ ಎಂದು ಠಾಕೂರ್ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಕಾರ್ಯವೈಖರಿ ವಿರುದ್ಧ ಹಿರಿಯ ನ್ಯಾಯಮೂರ್ತಿಗಳಾದ ಜೆ. ಚೆಲಮೆಶ್ವರ್, ರಂಜನ್ ಗೊಗೊಯಿ, ಮದನ್ ಬಿ.ಲೋಕೂರ್ ಹಾಗೂ ಕುರಿಯನ್ ಜೋಸೆಫ್ ಬಹಿರಂಗವಾಗಿ ಬಂಡಾಯ ಎದ್ದಿದ್ದರು.