ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದುವರಿದ ಸಾರಿಗೆ ನೌಕರರ ಮುಷ್ಕರ

ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸೇವೆ ಸ್ಥಗಿತ: ನಿಲ್ದಾಣ ಭಣಭಣ
Last Updated 12 ಡಿಸೆಂಬರ್ 2020, 15:33 IST
ಅಕ್ಷರ ಗಾತ್ರ

ಕೋಲಾರ: ಸಾರಿಗೆ ನೌಕರರನ್ನು ಸರ್ಕಾರಿ ನೌಕರರಾಗಿ ಪರಿಗಣಿಸುವಂತೆ ಒತ್ತಾಯಿಸಿ ಕೆಎಸ್‌ಆರ್‌ಟಿಸಿ ನೌಕರರು ನಡೆಸುತ್ತಿರುವ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಜಿಲ್ಲೆಯಲ್ಲಿ ಶನಿವಾರ ಜನಜೀವನಕ್ಕೆ ಹೆಚ್ಚಿನ ತೊಂದರೆಯಾಯಿತು.

ಜಿಲ್ಲೆಯ ಕೆಎಸ್‌ಆರ್‌ಟಿಸಿ ಡಿಪೊಗಳಲ್ಲೂ ಬಸ್‌ಗಳು ನಿಂತಲ್ಲೇ ನಿಂತಿದ್ದು, ಸಿಬ್ಬಂದಿ ಶನಿವಾರ ಸಹ ಕೆಲಸಕ್ಕೆ ಹಾಜರಾಗಲಿಲ್ಲ. ಮುಷ್ಕರದ ಸಂಗತಿ ತಿಳಿದಿದ್ದ ಸಾರ್ವಜನಿಕರು ಖಾಸಗಿ ಬಸ್‌ ಹಾಗೂ ವಾಹನಗಳ ಮೊರೆ ಹೋದರು.

ಖಾಸಗಿ ಬಸ್‌ ನಿಲ್ದಾಣಗಳಲ್ಲಿ ಎಂದಿಗಿಂತ ಹೆಚ್ಚಿನ ಜನಸಂದಣಿ ಕಂಡುಬಂತು. ಖಾಸಗಿ ವಾಹನಗಳ ಮಾಲೀಕರು ಮುಷ್ಕರದ ಲಾಭ ಪಡೆದು ಸಾರ್ವಜನಿಕರಿಂದ ದುಪ್ಪಟ್ಟು ಪ್ರಯಾಣ ದರ ವಸೂಲಿ ಮಾಡುತ್ತಿದ್ದುದ್ದು ಎಲ್ಲೆಡೆ ಸಾಮಾನ್ಯವಾಗಿತ್ತು.

ಬಹುಪಾಲು ಪ್ರಯಾಣಿಕರು ಮುಷ್ಕರದ ಕಾರಣಕ್ಕೆ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಗಳತ್ತ ಸುಳಿಯಲಿಲ್ಲ. ಮುಷ್ಕರ ಮುಂದುವರಿದಿರುವ ಸಂಗತಿ ತಿಳಿಯದ ಗ್ರಾಮೀಣ ಭಾಗದ ಜನ ನಿಲ್ದಾಣದಲ್ಲಿ ಗಂಟೆಗಟ್ಟಲೇ ಕಾಯುತ್ತಾ ಕುಳಿತಿದ್ದ ದೃಶ್ಯ ಕಂಡುಬಂತು. ರೋಗಿಗಳು ಹಾಗೂ ಅವರ ಸಂಬಂಧಿಕರು ಅನ್ಯ ಮಾರ್ಗವಿಲ್ಲದೆ ಆಟೊಗಳಲ್ಲಿ ಪ್ರಯಾಣಿಸಿದರು. ಗ್ರಾಮೀಣ ಭಾಗದ ಜನ ಸರಕು ಸಾಗಣೆ ವಾಹನ, ಟೆಂಪೊಗಳನ್ನು ಆಶ್ರಯಿಸಿದರು.

ಸದಾ ಪ್ರಯಾಣಿಕರಿಂದ ಗಿಜಿಗುಡುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಗಳು ಮುಷ್ಕರದ ಕಾರಣದಿಂದ ಭಣಗುಡುತ್ತಿದ್ದವು. ಮಕ್ಕಳು ನಿಲ್ದಾಣಗಳಲ್ಲಿ ಕ್ರಿಕೆಟ್‌ ಆಡಿ ಸಂಭ್ರಮಿಸಿದರು. ಮತ್ತೆ ಕೆಲ ಮಕ್ಕಳು ನಿಲ್ದಾಣದಲ್ಲಿ ಸೈಕಲ್‌ ಹೊಡೆಯುತ್ತಿದ್ದ ದೃಶ್ಯ ಕಂಡುಬಂತು. ನಿಲ್ದಾಣದಲ್ಲಿನ ಅಂಗಡಿಗಳು ಹಾಗೂ ಹೋಟೆಲ್‌ಗಳು ಮುಚ್ಚಿದ್ದವು.

ಆದಾಯ ಖೋತಾ: ಸಿಬ್ಬಂದಿಯ ಮನೆಗಳಿಗೆ ಹೋಗಿ ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಿದ್ದೆವು. ಕೆಲ ಸಿಬ್ಬಂದಿ ಶನಿವಾರ ಕೆಲಸಕ್ಕೆ ಬರುವುದಾಗಿ ಭರವಸೆ ಸಹ ನೀಡಿದ್ದರು. ಆದರೆ, ಯಾವುದೇ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿಲ್ಲ. 2 ದಿನದ ಮುಷ್ಕರದಿಂದ ಸಂಸ್ಥೆಗೆ ಆದಾಯ ಖೋತಾ ಆಗಿದೆ’ ಎಂದು ಕೆಎಸ್‌ಆರ್‌ಟಿಸಿ ಹಿರಿಯ ಅಧಿಕಾರಿಗಳು ತಿಳಿಸಿದರು.

ಬಸ್‌ ಡಿಪೊ ಹಾಗೂ ನಿಲ್ದಾಣಗಳ ಬಳಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್‌ ಬಂದೋಬಸ್ತ್‌ ಮುಂದುವರಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆದಿರುವ ಬಗ್ಗೆ ವರದಿಯಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT