ಶ್ರೀನಿವಾಸಪುರ: ಪಟ್ಟಣದ ತಾಲ್ಲೂಕು ಕಚೇರಿ ಎದುರು ಮಂಗಳವಾರ ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ, ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರ ಸಂಘದ ಸದಸ್ಯರು ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ವಿ.ಶಿವಕುಮಾರ್ ಮಾತನಾಡಿ, ‘ಸರ್ಕಾರ ಈ ನೌಕರರ ಸೇವಾ ಭದ್ರತೆ ಸೇರಿದಂತೆ 14 ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದರೆ ಪ್ರತಿಭಟನೆಯನ್ನು ಅನಿರ್ದಿಷ್ಟ ಅವಧಿಗೆ ಮುಂದುವರಿಸಲಾಗುವುದು. ಸೇವೆಯಲ್ಲಿ ಉಂಟಾಗುವ ವ್ಯತ್ಯಯಕ್ಕೆ ಸರ್ಕಾರವೇ ಹೊಣೆಯಾಗುತ್ತದೆ ಎಂದು ಹೇಳಿದರು.
ಕೋವಿಡ್–19 ಸಂಕಷ್ಟದ ನಡುವೆ ಈ ಸಂಘಟನೆಯ ನೌಕರರು ಜೀವದ ಮೇಲೆ ಹಂಗು ತೊರೆದು ರೋಗಿಗಳ ಸೇವೆಯಲ್ಲಿ ತೊಡಗಿದ್ದಾರೆ. ಸೋಂಕು ತಡೆಯಲು ಪೂರಕವಾಗಿ ಶ್ರಮಿಸುತ್ತಿದ್ದಾರೆ. ಆದರೂ ಸರ್ಕಾರ ಇವರ ನ್ಯಾಯಯುತ ಬೇಡಿಕೆಗಳ ಬಗ್ಗೆ ಗಮನ ಹರಿಸದಿರುವುದು ವಿಪರ್ಯಾಸ ಎಂದು ಹೇಳಿದರು.
ಪ್ರತಿಭಟನೆ ಸಂದರ್ಭದಲ್ಲಿ ತಾಲ್ಲೂಕು ಕಚೇರಿ ಎದುರು ಉದ್ಯಾನದಲ್ಲಿನ ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಬೇಡಿಕೆಗಳ ಮನವಿಯನ್ನು ತಹಶೀಲ್ದಾರ್ಗೆ ನೀಡಲಾಯಿತು.