ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಳ ಮತ್ತು ಸೋಂಕಿತರ ಸಾವಿನ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆ ಸದಸ್ಯರು ಇಲ್ಲಿ ಸೋಮವಾರ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರಿಗೆ ಮನವಿ ಸಲ್ಲಿಸಿದರು.
‘ಕೋವಿಡ್ ಮೊದಲನೇ ಅಲೆ ಸಂದರ್ಭದಲ್ಲಿ ಸರ್ಕಾರ ಮತ್ತು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ನೀಡಿದ ಸಲಹೆ -ಸೂಚನೆಗಳನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಪಾಲಿಸಿದ್ದರಿಂದ ಹೆಚ್ಚಿನ ಸಮಸ್ಯೆ ಆಗಿರಲಿಲ್ಲ’ ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಆರ್.ತ್ಯಾಗರಾಜ್ ಅಭಿಪ್ರಾಯಪಟ್ಟರು.
‘ಜಿಲ್ಲೆಯಲ್ಲಿ ಇದೀಗ ಕೋವಿಡ್ 2ನೇ ಅಲೆ ಆರ್ಭಟ ಜೋರಾಗಿದ್ದು, ಪ್ರತಿನಿತ್ಯ ಸೋಂಕಿತರ ಸಾವು ಸಂಭವಿಸುತ್ತಿದೆ. ಜತೆಗೆ ಸೋಂಕು ಹರಡುವಿಕೆ ಪ್ರಮಾಣ ಹೆಚ್ಚಳವಾಗಿದೆ. ಜನರು ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸದ ಕಾರಣ ಸಮಸ್ಯೆ ಗಂಭೀರವಾಗುತ್ತಿದೆ. ಆದ್ದರಿಂದ ಜಿಲ್ಲೆಯಲ್ಲಿ ಲಾಕ್ಡೌನ್ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು’ ಎಂದು ಕೋರಿದರು.
‘ಆಶಾ ಕಾರ್ಯಕರ್ತೆಯರನ್ನು ಮನೆ ಮನೆಗೆ ಕಳುಹಿಸಿ ಪ್ರತಿಯೊಬ್ಬರ ಕೋವಿಡ್ ಪರೀಕ್ಷೆ ಮಾಡಿಸಬೇಕು. ಕೊರೊನಾ ಸೋಂಕಿತರನ್ನು ಶೀಘ್ರವೇ ಪತ್ತೆ ಹಚ್ಚಿ ಚಿಕಿತ್ಸೆ ಆರಂಭಿಸಬೇಕು. ಸೋಂಕಿತರನ್ನು ಮನೆಗಳಲ್ಲಿ ಕ್ವಾರಂಟೈನ್ ಮಾಡದೆ ಸರ್ಕಾರಿ ಹಾಸ್ಟೆಲ್ಗಳಿಗೆ ಕರೆತಂದು ಚಿಕಿತ್ಸೆ ನೀಡಬೇಕು. ಜಿಲ್ಲೆಯ ಎಲ್ಲಾ ತಾಲ್ಲೂಕು ಸರ್ಕಾರಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪಿಸಬೇಕು’ ಎಂದು ಮನವಿ ಮಾಡಿದರು.
ಆತ್ಮವಿಶ್ವಾಸ ಮೂಡಿಸಿ: ‘ಕೋವಿಡ್ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಪೌಷ್ಟಿಕ ಆಹಾರ ಮತ್ತು ಬಿಸಿ ನೀರಿನ ವ್ಯವಸ್ಥೆ ಮಾಡಬೇಕು. ಕೋವಿಡ್ ವಾರ್ಡ್ಗಳಲ್ಲಿ ಸಿ.ಸಿ ಕ್ಯಾಮೆರಾ ಅಳವಡಿಸಿ ಚಿಕಿತ್ಸೆಯ ಗುಣಮಟ್ಟದ ಮೇಲೆ ಕಣ್ಗಾವಲು ಇಡಬೇಕು. ಸೋಂಕಿತರಲ್ಲಿ ಆತ್ಮವಿಶ್ವಾಸ ಮೂಡಿಸಬೇಕು. ರೆಮ್ಡಿಸಿವರ್ ಮತ್ತು ಕೋವಿಡ್ ಲಸಿಕೆ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕು’ ಎಂದು ಸಂಘಟನೆ ಸದಸ್ಯರು ಹೇಳಿದರು.
ಸಂಘಟನೆಯ ಜಿಲ್ಲಾ ಸಂಚಾಲಕ ಕೆ.ಎನ್.ಪ್ರಕಾಶ್, ಕಾರ್ಯಕಾರಿ ಸಮಿತಿ ಸದಸ್ಯರಾದ ಕೆ.ಎಂ.ಗೋವಿಂದರಾಜ್, ರಾಜಣ್ಣ, ವಿ.ಜಗದೀಶ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.