ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ ಜಿಲ್ಲೆಯಲ್ಲಿ 64ಕ್ಕೆ ಏರಿದ ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ

ಮತ್ತೆ 2 ಸಾವು: ಜಿಲ್ಲೆಯಲ್ಲಿ 64ಕ್ಕೆ ಏರಿದ ಸೋಂಕಿತರ ಸಾವಿನ ಸಂಖ್ಯೆ
Last Updated 1 ಸೆಪ್ಟೆಂಬರ್ 2020, 15:52 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಮಂಗಳವಾರ ಇಬ್ಬರು ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಸೋಂಕಿತರ ಸಾವಿನ ಸಂಖ್ಯೆ 64ಕ್ಕೆ ಏರಿಕೆಯಾಗಿದೆ.

ಸೋಂಕಿನ ಕಾರಣಕ್ಕೆ ಕೋವಿಡ್‌ ಆಸ್ಪತ್ರೆಗಳಿಗೆ ದಾಖಲಾಗಿದ್ದ ಕೋಲಾರ ಹಾಗೂ ಕೆಜಿಎಫ್‌ ತಾಲ್ಲೂಕಿನ ತಲಾ ಒಬ್ಬರು ಸೋಂಕಿತರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೂರ್ನಾಲ್ಕು ದಿನಗಳಿಂದ ಪ್ರತಿನಿತ್ಯ ಸೋಂಕಿತರ ಸಾವು ಸಂಭವಿಸುತ್ತಿರುವುದು ಆರೋಗ್ಯ ಇಲಾಖೆಯ ಆತಂಕ ಹೆಚ್ಚಿಸಿದೆ.

ಇದರ ಬೆನ್ನಲ್ಲೇ ಜಿಲ್ಲೆಯಲ್ಲಿ ಹೊಸದಾಗಿ 77 ಮಂದಿಗೆ ಸೋಂಕು ಹರಡಿರುವುದು ಮಂಗಳವಾರ ದೃಢಪಟ್ಟಿದ್ದು, ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 756ಕ್ಕೆ ಜಿಗಿದಿದೆ. ಮುಖ್ಯವಾಗಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುತ್ತಿದೆ. ವಿಷಮ ಶೀತ ಜ್ವರವಿರುವ 59 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ 10 ಮಂದಿಗೆ ಸೋಂಕು ತಗುಲಿದೆ.

ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 23 ಮಂದಿಗೆ ಸೋಂಕು ಬಂದಿರುವುದು ಖಚಿತವಾಗಿದೆ. ವಿಷಮ ಶೀತ ಜ್ವರವಿರುವ 17 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ 6 ಮಂದಿಗೆ, ಮಾಲೂರು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಪೀಡಿತ 16 ಮಂದಿಗೆ ಹಾಗೂ ಸೋಂಕಿತರ ಸಂಪರ್ಕದಿಂದ ಒಬ್ಬರಿಗೆ ಸೋಂಕು ಹರಡಿದೆ.

ಕೆಜಿಎಫ್‌ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ 12 ಮಂದಿಗೆ ಹಾಗೂ ಸೋಂಕಿತರ ಸಂಪರ್ಕದಿಂದ 4 ಮಂದಿಗೆ, ಮುಳಬಾಗಿಲು ತಾಲ್ಲೂಕಿನ ವಿಷಮ ಶೀತ ಜ್ವರವಿರುವ 12 ಮಂದಿಗೆ, ಸೋಂಕಿತರ ಸಂಪರ್ಕದಿಂದ 5 ಮಂದಿಗೆ ಮತ್ತು ಹೊರ ಜಿಲ್ಲೆಗೆ ಹೋಗಿದ್ದ ಇಬ್ಬರಿಗೆ ಸೋಂಕು ಬಂದಿರುವುದು ಗೊತ್ತಾಗಿದೆ.

ಬಂಗಾರಪೇಟೆ ಹಾಗೂ ಶ್ರೀನಿವಾಸಪುರ ತಾಲ್ಲೂಕಿನಲ್ಲಿ ತಲಾ ಒಬ್ಬರಿಗೆ ಸೋಂಕು ಹರಡಿದ್ದು, ಇವರಿಬ್ಬರೂ ವಿಷಮ ಶೀತ ಜ್ವರದಿಂದ ಬಳಲುತ್ತಿದ್ದಾರೆ. ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸುರಕ್ಷತಾ ಕ್ರಮವಾಗಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

60 ಮಂದಿ ಗುಣಮುಖ: ಸೋಂಕಿತರ ಗುಣಮುಖ ಪ್ರಮಾಣದಲ್ಲಿ ಕೊಂಚ ಏರಿಕೆಯಾಗಿದ್ದು, ಆರೋಗ್ಯ ಇಲಾಖೆ ತುಸು ನಿರಾಳವಾಗಿದೆ. ನಾಲ್ಕೈದು ದಿನಗಳಿಂದ 50ರ ಆಸುಪಾಸಿನಲ್ಲೇ ಇದ್ದ ಗುಣಮುಖರ ಸಂಖ್ಯೆ ಮಂಗಳವಾರ ಅರ್ಧ ಶತಕದ ಗಡಿ ದಾಟಿತು. ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 60 ಮಂದಿ ಗುಣಮುಖರಾಗಿ ಮಂಗಳವಾರ ಮನೆಗೆ ಮರಳಿದರು.

ಕೋಲಾರ ತಾಲ್ಲೂಕಿನ 26 ಮಂದಿ, ಮಾಲೂರು ತಾಲ್ಲೂಕಿನ 9, ಕೆಜಿಎಫ್‌ ತಾಲ್ಲೂಕಿನ 12, ಮುಳಬಾಗಿಲು ತಾಲ್ಲೂಕಿನ 7, ಶ್ರೀನಿವಾಸಪುರ ತಾಲ್ಲೂಕಿನ 5 ಹಾಗೂ ಬಂಗಾರಪೇಟೆ ತಾಲ್ಲೂಕಿನ ಒಬ್ಬರನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT