ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಕೋವಿಡ್ ಗುಣಮುಖರಾದವರ ಪ್ರಮಾಣದಲ್ಲಿ ದಾಖಲೆ ಏರಿಕೆ

ತಗ್ಗಿದ ಸೋಂಕಿತರ ಸಾವಿನ ಸಂಖ್ಯೆ: ಆರೋಗ್ಯ ಇಲಾಖೆ ಕೊಂಚ ನಿರಾಳ
Last Updated 16 ಆಗಸ್ಟ್ 2020, 15:50 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಗುಣಮುಖರಾಗುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆಯು ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಆರೋಗ್ಯ ಇಲಾಖೆ ಕೊಂಚ ನಿರಾಳವಾಗಿದೆ.

ಹೊಸದಾಗಿ ಪತ್ತೆಯಾಗುತ್ತಿರುವ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖರಾಗುತ್ತಿರುವವರ ಸಂಖ್ಯೆಯು ಹೆಚ್ಚಿದ್ದು, ದಿನದಿಂದ ದಿನಕ್ಕೆ ಜನರಲ್ಲಿ ಕೋವಿಡ್‌ ಬಗೆಗಿನ ಆತಂಕ ದೂರವಾಗುತ್ತಿದೆ. ಮತ್ತೊಂದೆಡೆ ಸೋಂಕಿತರ ಸಾವಿನ ಸಂಖ್ಯೆ ತಗ್ಗಿದೆ. ಈ ಆಶಾದಾಯಕ ಬೆಳವಣಿಗೆಯಿಂದ ಆರೋಗ್ಯ ಇಲಾಖೆ ನಿಟ್ಟುಸಿರು ಬಿಡುವಂತಾಗಿದೆ.

ಜಿಲ್ಲೆಯ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 168 ಮಂದಿ ಗುಣಮುಖರಾಗಿ ಭಾನುವಾರ ಆಸ್ಪತ್ರೆಯಿಂದ ಮನೆಗೆ ಮರಳಿದರು. ಜಿಲ್ಲೆಯಲ್ಲಿ ಮೇ 12ರಂದು ಮೊದಲ ಬಾರಿಗೆ ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾಗಿದ್ದವು. ಆ ನಂತರ ಒಂದೇ ದಿನ ಇಷ್ಟು ದೊಡ್ಡ ಪ್ರಮಾಣದಲ್ಲಿ ಸೋಂಕಿತರು ಗುಣಮುಖರಾಗಿರಲಿಲ್ಲ.

ಕೋಲಾರ ತಾಲ್ಲೂಕಿನ 77 ಮಂದಿ, ಮಾಲೂರು ತಾಲ್ಲೂಕಿನ 20, ಬಂಗಾರಪೇಟೆ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ 22, ಕೆಜಿಎಫ್‌ ತಾಲ್ಲೂಕಿನ 15 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 12 ಮಂದಿಯನ್ನು ಆಸ್ಪತ್ರೆಯಿಂದ ಭಾನುವಾರ ಬೀಳ್ಕೊಡಲಾಯಿತು.

87 ಮಂದಿಗೆ ಸೋಂಕು: ಜಿಲ್ಲೆಯಲ್ಲಿ ಹೊಸದಾಗಿ 87 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಭಾನುವಾರ ದೃಢಪಟ್ಟಿದೆ. ವಿಷಮ ಶೀತ ಜ್ವರ ಹಾಗೂ ಸೋಂಕಿತರ ಸಂಪರ್ಕವು ಅಪಾಯಕಾರಿಯಾಗಿ ಪರಿಣಮಿಸಿದೆ. ವಿಷಮ ಶೀತ ಜ್ವರವಿರುವ 55 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ 27 ಮಂದಿಗೆ ಸೋಂಕು ಬಂದಿರುವುದು ಖಚಿತವಾಗಿದೆ.

ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 54 ಮಂದಿಗೆ ಸೋಂಕು ತಗುಲಿದೆ. ವಿಷಮ ಶೀತ ಜ್ವರದಿಂದ ಬಳಲುತ್ತಿರುವ 32 ಮಂದಿ, ಸೋಂಕಿತರ ಸಂಪರ್ಕದಿಂದ 20 ಮಂದಿಗೆ, ಒಬ್ಬರು ಆರೋಗ್ಯ ಕಾರ್ಯಕರ್ತರಿಗೆ ಹಾಗೂ ತೀವ್ರ ಉಸಿರಾಟ ಸಮಸ್ಯೆಯಿರುವ ಒಬ್ಬರಿಗೆ ಸೋಂಕು ಹರಡಿದೆ.

ಆರೋಗ್ಯ ಕಾರ್ಯರ್ತರಿಗೆ ಸೋಂಕು: ಮಾಲೂರು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರ ಪೀಡಿತರಾಗಿರುವ 4 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ 5 ಮಂದಿಗೆ ಸೋಂಕು ಬಂದಿದೆ. ಬಂಗಾರಪೇಟೆ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಕ್ಕೆ ತುತ್ತಾಗಿರುವ 6 ಮಂದಿಗೆ ಹಾಗೂ ಆರೋಗ್ಯ ಕಾರ್ಯಕರ್ತರೊಬ್ಬರಿಗೆ ಸೋಂಕು ಹರಡಿರುವುದು ಗೊತ್ತಾಗಿದೆ.

ಕೆಜಿಎಫ್‌ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ 3 ಮಂದಿಗೆ ಮತ್ತು ಆರೋಗ್ಯ ಕಾರ್ಯಕರ್ತರೊಬ್ಬರಿಗೆ ಸೋಂಕು ತಗುಲಿದೆ. ಮುಳಬಾಗಿಲು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರವಿರುವ 10 ಮಂದಿಗೆ, ಸೋಂಕಿತರ ಸಂಪರ್ಕದಿಂದ ಇಬ್ಬರಿಗೆ ಹಾಗೂ ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಒಬ್ಬರಿಗೆ ಸೋಂಕು ಹರಡಿದೆ.

ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿದೆ. ಸುರಕ್ಷತಾ ಕ್ರಮವಾಗಿ ಇಡೀ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT