ಕೋಲಾರ: ತ್ಯಾಗ, ಬಲಿದಾನ, ಸೋದರತ್ವದ ಪವಿತ್ರ ಸಂಕೇತವಾದ ಬಕ್ರೀದ್ ಹಬ್ಬವನ್ನು ಜಿಲ್ಲೆಯಲ್ಲಿ ಬುಧವಾರ ಸರಳವಾಗಿ ಆಚರಿಸಲಾಯಿತು. ಕೋವಿಡ್ ಭೀತಿ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯದವರು ಮನೆಗಳಲ್ಲೇ ಶ್ರದ್ಧಾ ಭಕ್ತಿಯಿಂದ ಹಬ್ಬ ಆಚರಿಸಿದರು.
ಕೊರೊನಾ ಸೋಂಕಿನ ಆತಂಕದ ಕಾರಣಕ್ಕೆ ಮಸೀದಿಗಳಲ್ಲಿ ಒಂದು ಬಾರಿಗೆ ತಲಾ 50 ಮಂದಿಗೆ ಮಾತ್ರ ಪ್ರವೇಶ ನೀಡಿ ಪ್ರತ್ಯೇಕವಾಗಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಲಾಯಿತು. ಮಾಸ್ಕ್ ಧರಿಸಿದ್ದ ಮುಸ್ಲಿಂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರದೆ ಅಂತರ ಕಾಯ್ದುಕೊಂಡು ಪ್ರಾರ್ಥನೆ ಸಲ್ಲಿಸಿದರು.
‘ಕೋವಿಡ್ ಕಾರಣಕ್ಕೆ ಇಡೀ ವಿಶ್ವ ಸಂಕಷ್ಟದಲ್ಲಿರುವಾಗ ಸಂಭ್ರಮಪಡಬಾರದು’ ಎಂದು ಧಾರ್ಮಿಕ ಗುರುಗಳು ಹಾಗೂ ವಕ್ಫ್ ಮಂಡಳಿ ಅಧ್ಯಕ್ಷರು ಮುಂಚೆಯೇ ಸೂಚನೆ ನೀಡಿದ್ದರು. ಹೀಗಾಗಿ ಧರ್ಮ ಗುರು, ಮೌಲ್ವಿ, ಪೇಶ್ಇಮಾಮ್, ಮೌಝಿನ್ ಸಿಬ್ಬಂದಿ ಹಾಗೂ ಸಮುದಾಯದ ಮುಖಂಡರು ಸೇರಿದಂತೆ ಕೆಲವೇ ಮಂದಿ ಮಾತ್ರ ಮಸೀದಿಗಳಲ್ಲಿ ಪ್ರಾರ್ಥನೆ ಮಾಡಿದರು.
ಹಿರಿಯರು, ಮಕ್ಕಳು ಮಸೀದಿಗಳಿಗೆ ಬರಲಿಲ್ಲ. ಬದಲಿಗೆ ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಿದರು. ಕೊರೊನಾ ಸೋಂಕಿನ ಸಂಕಷ್ಟ ನಿವಾರಣೆಗಾಗಿ ದೇವರಲ್ಲಿ ಮೊರೆಯಿಟ್ಟರು. ಮಸೀದಿಯೊಳಗೆ ಮುಸ್ಲಿಮರು ದೂರದಿಂದಲೇ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಮಹಿಳೆಯರು ಮನೆಗಳಲ್ಲೇ ಪ್ರಾರ್ಥನೆ ಮಾಡಿ ಅಲ್ಲಾಹುವನ್ನು ಸ್ಮರಿಸಿದರು.
ಮೈದಾನದಲ್ಲಿ ಸಡಗರವಿಲ್ಲ: ಬಕ್ರೀದ್ ಹಬ್ಬದ ದಿನ ಶ್ವೇತ ವರ್ಣದ ಹೊಸ ಬಟ್ಟೆ ಧರಿಸಿ, ರಂಗು ರಂಗಿನ ಟೋಪಿಗಳನ್ನು ತೊಟ್ಟು ಸಾವಿರಾರು ಮಂದಿ ಏಕಕಾಲಕ್ಕೆ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವುದು ವಾಡಿಕೆ. ಮೌಲ್ವಿ, ಧರ್ಮ ಗುರುಗಳ ಧಾರ್ಮಿಕ ಸಂದೇಶ ಆಲಿಸಿ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳುತ್ತಿದ್ದರು.
ಆದರೆ, ಈ ಬಾರಿ ಕೊರೊನಾ ಸೋಂಕಿನ ಕಾರಣಕ್ಕೆ ಜಿಲ್ಲಾಡಳಿತವು ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧ ವಿಧಿಸಿದ್ದರಿಂದ ಸಮುದಾಯದವರು ಮಸೀದಿಗಳಲ್ಲೇ ಧಾರ್ಮಿಕ ವಿಧಿವಿಧಾನ ಪೂರೈಸಿದರು. ಹಬ್ಬದ ಅಂಗವಾಗಿ ಪ್ರತಿ ವರ್ಷ ಮೆರುಗು ಪಡೆಯುತ್ತಿದ್ದ ಈದ್ಗಾ ಮೈದಾನದಲ್ಲಿ ಈ ಬಾರಿ ಸಡಗರವಿರಲಿಲ್ಲ. ಹೊಸ ಬಟ್ಟೆ ಧರಿಸಿ ನೆರೆಹೊರೆಯವರನ್ನು ಆಲಂಗಿಸಿ ಸಂಭ್ರಮಿಸುವ ವಾತಾವರಣ ಸಹ ಕಂಡುಬರಲಿಲ್ಲ.
ಪೊಲೀಸ್ ಬಂದೋಬಸ್ತ್: ಹಬ್ಬದ ಹಿನ್ನೆಲೆಯಲ್ಲಿ ಪ್ರಮುಖ ವಾಣಿಜ್ಯ ಸ್ಥಳಗಳಲ್ಲಿ ಮುಸ್ಲಿಂ ಸಮುದಾಯದವರ ಅಂಗಡಿಗಳು ಮುಚ್ಚಿದ್ದವು. ಆಟೊ ಸಂಚಾರ ವಿರಳವಾಗಿತ್ತು. ಬಸ್ ನಿಲ್ದಾಣ ಹಾಗೂ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಮುನ್ನೆಚ್ಚರಿಕೆ ಕ್ರಮವಾಗಿ ದರ್ಗಾಗಳು, ಮುಸ್ಲಿಂ ಜನವಸತಿ ಇರುವ ಬಡಾವಣೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.