ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಜಿಲ್ಲೆಯಲ್ಲಿ ಕೋವಿಡ್‌ ರುದ್ರ ತಾಂಡವ

24 ತಾಸಿನಲ್ಲಿ 10 ಮಂದಿ ಕೊನೆಯುಸಿರು
Last Updated 23 ಏಪ್ರಿಲ್ 2021, 15:39 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಕೋವಿಡ್‌ ರುದ್ರ ತಾಂಡವ ಮುಂದುವರಿದಿದ್ದು, ಕಳೆದ 24 ತಾಸಿನಲ್ಲಿ 10 ಮಂದಿ ಕೊರೊನಾ ಸೋಂಕಿತರು ಕೊನೆಯುಸಿರೆಳೆದಿದ್ದಾರೆ.

ಸೋಂಕಿತರ ಸಾವಿನ ನಾಗಲೋಟಕ್ಕೆ ಆರೋಗ್ಯ ಇಲಾಖೆ ಬೆಚ್ಚಿ ಬಿದ್ದಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ. ಸೋಂಕಿತರ ಸರಣಿ ಸಂಭವಿಸುತ್ತಿದ್ದು, ಗುರುವಾರವಷ್ಟೇ ಇಬ್ಬರು ಸೋಂಕಿತರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ 10 ಸೋಂಕಿತರು ಮೃತಪಟ್ಟಿದ್ದು, ಒಟ್ಟಾರೆ ಸಾವಿನ ಸಂಖ್ಯೆ ದ್ವಿಶತಕದ ಗಡಿ ದಾಟಿದೆ.

ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 5 ಮಂದಿ ಸೋಂಕಿತರು ಅಸುನೀಗಿದ್ದಾರೆ. ಉಳಿದಂತೆ ಮುಳಬಾಗಿಲು ತಾಲ್ಲೂಕಿನ 3 ಮಂದಿ, ಮಾಲೂರು ಮತ್ತು ಬಂಗಾರಪೇಟೆ ತಾಲ್ಲೂಕಿನ ತಲಾ ಒಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕಳೆದೊಂದು ವರ್ಷದಲ್ಲಿ ಒಂದೇ ದಿನ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಕೊರೊನಾ ಸೋಂಕಿತರ ಮೃತಪಟ್ಟ ನಿದರ್ಶನವಿಲ್ಲ.

ಕೊರೊನಾ ಸೋಂಕಿನ ಅಟ್ಟಹಾಸ ಮೇರೆ ಮೀರಿದ್ದು, ಹೊಸದಾಗಿ 516 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೋಲಾರ ತಾಲ್ಲೂಕಿನ 287 ಮಂದಿಗೆ, ಮಾಲೂರು ತಾಲ್ಲೂಕಿನ 72 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 16 ಮಂದಿಗೆ, ಕೆಜಿಎಫ್‌ ತಾಲ್ಲೂಕಿನ 56 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 59 ಮಂದಿಗೆ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 26 ಮಂದಿಗೆ ಸೋಂಕು ಬಂದಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ. ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 146 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ಕೋಲಾರ ತಾಲ್ಲೂಕಿನ 92 ಮಂದಿ, ಮಾಲೂರು ತಾಲ್ಲೂಕಿನ 8, ಬಂಗಾರಪೇಟೆ ತಾಲ್ಲೂಕಿನ 11, ಕೆಜಿಎಫ್‌ ತಾಲ್ಲೂಕಿನ 6, ಮುಳಬಾಗಿಲು ತಾಲ್ಲೂಕಿನ 16 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 13 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT