ಕೋಲಾರ: ಕೋವಿಡ್ ಆತಂಕದ ನಡುವೆಯೂ ಜಿಲ್ಲೆಯಲ್ಲಿ ಭಾನುವಾರ ರಾಷ್ಟ್ರೀಯ ಹಬ್ಬ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಕಳೆಗಟ್ಟಿತು.
ಜಿಲ್ಲಾ ಕೇಂದ್ರದ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಾಕಷ್ಟು ಸುರಕ್ಷತಾ ಕ್ರಮಗಳೊಂದಿಗೆ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ಮತ್ತು ಸ್ಯಾನಿಟೈಸರ್ ಬಳಕೆ ಮಾಡಿ ಸರಳವಾಗಿ ಸ್ವಾತಂತ್ರ್ಯ ದಿನ ಆಚರಿಸಲಾಯಿತು.
ಸರ್ಕಾರಿ ಕಚೇರಿಗಳು, ಬ್ಯಾಂಕ್ ಹಾಗೂ ನ್ಯಾಯಾಲಯ ಕಟ್ಟಡಗಳಲ್ಲಿ ರಾಷ್ಟ್ರಧ್ವಜ ಹಾರಿಸಿ ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪ್ರಮುಖ ರಾಜಕೀಯ ಪಕ್ಷಗಳ ಕಚೇರಿಗಳಲ್ಲಿ ತ್ರಿವರ್ಣ ಧ್ವಜ ಹಾರಿಸಿ, ರಾಷ್ಟ್ರಗೀತೆ ಹಾಡಿ ಗೌರವ ಸೂಚಿಸಲಾಯಿತು.
ಕೋವಿಡ್ ಕಾರಣಕ್ಕೆ ಶಾಲಾ ಕಾಲೇಜುಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಕಂಡುಬರಲಿಲ್ಲ. ಶಾಲೆ ಮುಖ್ಯ ಶಿಕ್ಷಕರು ಬೆರಳೆಣಿಕೆ ಸಿಬ್ಬಂದಿಯೊಂದಿಗೆ ಧ್ವಜಾರೋಹಣ ನೆರವೇರಿಸಿದರು. ಸಂಘ ಸಂಸ್ಥೆಗಳು ಸೇವಾ ಕಾರ್ಯಗಳ ಮೂಲಕ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿಸಿದರು.
ಪೊಲೀಸ್ ಬಂದೋಬಸ್ತ್: ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಪೊಲೀಸ್ ಸಿಬ್ಬಂದಿ ಪ್ರತಿ ವ್ಯಕ್ತಿಯನ್ನು ತಪಾಸಣೆ ಮಾಡಿ ಕ್ರೀಡಾಂಗಣದ ಒಳ ಹೋಗಲು ಬಿಟ್ಟರು. ಜಿಲ್ಲಾ ಉಸ್ತುವಾರಿ ಸಚಿವ ಎನ್.ಮುನಿರತ್ನ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿ ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು.
ಪೊಲೀಸ್ ಸಿಬ್ಬಂದಿಯು ಆಕರ್ಷಕ ಪಥಸಂಚಲನದ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ, ಕೋಲಾರ ಉಪ ವಿಭಾಗದ ಪೊಲೀಸ್ ಪಡೆ, ಮುಳಬಾಗಿಲು ಉಪ ವಿಭಾಗದ ಪೊಲೀಸ್ ಪಡೆ, ಜಿಲ್ಲಾ ಮಹಿಳಾ ಪೊಲೀಸ್ ಪಡೆ, ಗೃಹರಕ್ಷಕ ದಳ ಸಿಬ್ಬಂದಿ ಪಥ ಸಂಚಲನದಲ್ಲಿ ಭಾಗವಹಿಸಿದರು. ಸಚಿವರು, ಸಂಸದರು, ಶಾಸಕರು ಹಾಗೂ ಗಣ್ಯರು ಪಥಸಂಚಲನ ವೀಕ್ಷಿಸಿದರು.
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಉತ್ತಮ ಸಾಧನೆ ಮಾಡಿದ ಆಸ್ಪತ್ರೆಗಳ ವೈದ್ಯಕೀಯ ಸಿಬ್ಬಂದಿಗೆ ಸಚಿವರು ಪ್ರಶಸ್ತಿ ಮತ್ತು ಪ್ರಮಾಣಪತ್ರ ನೀಡಿದರು. ಕೋವಿಡ್ ಸಂದರ್ಭದಲ್ಲಿ ಉತ್ತಮ ಸೇವೆ ಸಲ್ಲಿಸಿದ ಆರೋಗ್ಯ ಇಲಾಖೆ ಸಿಬ್ಬಂದಿ, ಪೌರ ಕಾರ್ಮಿಕರು, ಪೊಲೀಸರು, ಗೃಹರಕ್ಷಕ ದಳ ಸಿಬ್ಬಂದಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ರಾಜ್ಯ ಪುರಸ್ಕಾರ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಗಳಿಸಿದ ವಿದ್ಯಾರ್ಥಿಗಳು ಹಾಗೂ ಕೊರೊನಾ ಸೋಂಕಿನಿಂದ ಗುಣಮುಖರಾದ ಹಿರಿಯರನ್ನು ಗೌರವಿಸಲಾಯಿತು. ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಗಳಿಸಿ ಜಿಲ್ಲೆಗೆ ಕೀರ್ತಿ ತಂದ ಇಬ್ಬರು ವಿದ್ಯಾರ್ಥಿಗಳಿಗೆ ಲಾಪ್ಟಾಪ್ ಕೊಡುವುದಾಗಿ ಉಸ್ತುವಾರಿ ಸಚಿವರು ಭರವಸೆ ನೀಡಿದರು.
ಅಂತರಗಂಗೆ ರಸ್ತೆಯ ಪ್ರವೇಶ ಭಾಗದಲ್ಲಿ ಬೃಹತ್ ಸ್ವಾಗತ ಕಮಾನು ಹಾಕಲಾಗಿತ್ತು. ರಸ್ತೆಯ ಇಕ್ಕೆಲಗಳಲ್ಲಿ ರಾಷ್ಟ್ರಧ್ವಜಗಳು ರಾರಾಜಿಸುತ್ತಿದ್ದವು. ಆಟೊ ಚಾಲಕರು, ಬಸ್ ಚಾಲಕರು ಹಾಗೂ ಬೈಕ್ ಸವಾರರು ವಾಹನಗಳ ಮೇಲೆ ರಾಷ್ಟ್ರಧ್ವಜ ಹಾಕಿಕೊಂಡು ಓಡಾಡುತ್ತಿದ್ದ ದೃಶ್ಯ ಎಲ್ಲೆಡೆ ಸಾಮಾನ್ಯವಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.