ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ | ಕೋವಿಡ್‌: ವೆಂಟಿಲೇಟರ್‌ ಹೆಚ್ಚಳಕ್ಕೆ ಮನವಿ

ವೈದ್ಯರ ಹುದ್ದೆ ಮಾಡಲು ಜಿಲ್ಲಾಧಿಕಾರಿಗೆ ರೈತ ಸಂಘ ಸದಸ್ಯರ ಕೋರಿಕೆ
Last Updated 4 ಡಿಸೆಂಬರ್ 2021, 15:18 IST
ಅಕ್ಷರ ಗಾತ್ರ

ಕೋಲಾರ: ಕೋವಿಡ್‌ 3ನೇ ಅಲೆ ಹಿನ್ನೆಲೆಯಲ್ಲಿ ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ವೆಂಟಿಲೇಟರ್‌ಗಳ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿ ರೈತ ಸಂಘದ ಸದಸ್ಯರು ಇಲ್ಲಿ ಶನಿವಾರ ಜಿಲ್ಲಾಧಿಕಾರಿ ಆರ್‌.ಸೆಲ್ವಮಣಿ ಅವರಿಗೆ ಮನವಿ ಸಲ್ಲಿಸಿದರು.

‘ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಸೋಂಕು ಹರಡುವಿಕೆ ಪ್ರಮಾಣ ಗಣನೀಯ ಏರಿಕೆಯಾಗುತ್ತಿದ್ದು, ಪರಿಸ್ಥಿತಿ ಗಂಭೀರವಾಗುತ್ತಿದೆ. ಜನರ ಜೀವ ರಕ್ಷಣೆ ಉದ್ದೇಶಕ್ಕೆ ಶೀಘ್ರವೇ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಸಭೆ ಕರೆದು ಹೆಚ್ಚಿನ ವೆಂಟಿಲೇಟರ್‌ಗಳ ವ್ಯವಸ್ಥೆ ಮಾಡಬೇಕು’ ಎಂದು ಸಂಘಟನೆ ಸದಸ್ಯರು ಒತ್ತಾಯಿಸಿದರು.

‘ಕೊರೊನಾ ವೈರಾಣುವಿನ ರೂಪಾಂತರಿ ತಳಿ ‘ಓಮೈಕ್ರಾನ್‌’ ಪ್ರಕರಣಗಳು ಬೆಂಗಳೂರಿನಲ್ಲಿ ಪತ್ತೆಯಾಗಿವೆ. ಹೀಗಾಗಿ ಓಮೈಕ್ರಾನ್‌ ವಿರುದ್ಧ ಹೋರಾಡಲು ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್ ಸ್ಥಾಪಿಸಬೇಕು. ಆಸ್ಪತ್ರೆಗಳಲ್ಲಿ ಖಾಲಿಯಿರುವ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯ ಹುದ್ದೆಗಳನ್ನು ಭರ್ತಿ ಮಾಡಬೇಕು’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ಕೋರಿದರು.

‘ಕೋವಿಡ್‌ ಮೊದಲ ಮತ್ತು ಎರಡನೇ ಅಲೆಯಲ್ಲಿ ಸಾಕಷ್ಟು ಮಂದಿ ಮೃತಪಟ್ಟಿದ್ದಾರೆ. 2ನೇ ಅಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಿ ವೆಂಟಿಲೇಟರ್‌ಗಳ ಕೊರತೆ ಎದುರಾಯಿತು. ಹೀಗಾಗಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಬೇಕು. ಸೋಂಕು ಹರಡುವಿಕೆ ತಡೆಗೆ ಹಾಗೂ ಸೋಂಕಿತರ ಸಾವಿನ ಸಂಖ್ಯೆ ತಗ್ಗಿಸಲು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.

ಬಡವರ ಸುಲಿಗೆ: ‘ಕೋವಿಡ್‌ 2ನೇ ಅಲೆ ಸಂದರ್ಭದಲ್ಲಿ ಪರಿಸ್ಥಿತಿ ಕೈ ಮೀರಿ ಹೋಗಿ ಆಸ್ಪತ್ರೆಗಳಲ್ಲಿ ಹಾಸಿಗೆ ಕೊರತೆ ಎದುರಾಗಿತ್ತು. ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೆಪದಲ್ಲಿ ಬಡ ಜನರನ್ನು ಸುಲಿಗೆ ಮಾಡಿದ್ದವು. ಜನಸಾಮಾನ್ಯರಿಗೆ ಲಕ್ಷಾಂತರ ರೂಪಾಯಿ ಹಣ ಕೊಟ್ಟು ಚಿಕಿತ್ಸೆ ಪಡೆಯಲು ಸಾಧ್ಯವಾಗದೆ ಸೋಂಕಿನಿಂದ ನರಳಾಡಿ ಮೃತಪಟ್ಟರು. ಈ ಬಾರಿ ಅಂತಹ ಪರಿಸ್ಥಿತಿ ಮರುಕಳಿಸಬಾರದು’ ಎಂದು ಸಂಘಟನೆ ಸದಸ್ಯರು ಹೇಳಿದರು.

‘ಎಸ್‍ಎನ್‍ಆರ್ ಜಿಲ್ಲಾ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಉಪಕರಣಗಳಿದ್ದರೂ ಅವುಗಳ ನಿರ್ವಹಣೆಗೆ ನುರಿತ ಸಿಬ್ಬಂದಿಯಿಲ್ಲ. ಹೀಗಾಗಿ ವೆಂಟಿಲೇಟರ್‌ಗಳು ಉಪಯೋಗಕ್ಕೆ ಬಾರದಂತಾಗಿವೆ. ನುರಿತ ಸಿಬ್ಬಂದಿಯನ್ನು ನಿಯೋಜಿಸಿ ವೆಂಟಿಲೇಟರ್‌ಗಳನ್ನು ಬಳಕೆ ಮಾಡಬೇಕು’ ಎಂದು ಮನವಿ ಮಾಡಿದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್, ಮಹಿಳಾ ಘಟಕದ ಅಧ್ಯಕ್ಷೆ ಎ.ನಳಿನಿಗೌಡ, ಕೆಜಿಎಫ್‌ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಮಂಜುನಾಥ್, ಉಪಾಧ್ಯಕ್ಷ ನಾಗಭೂಷಣ್, ಕೋಲಾರ ತಾಲ್ಲೂಕು ಘಟಕದ ಅಧ್ಯಕ್ಷ ಇ.ಮಂಜುನಾಥ್ ಹಾರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT