ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಪ್ರೇರಣೆಯಿಂದ ಲಸಿಕೆ ಹಾಕಿಸಿಕೊಳ್ಳಿ: ಜಿಲ್ಲಾಧಿಕಾರಿ ಸೆಲ್ವಮಣಿ ಮನವಿ

Last Updated 16 ಸೆಪ್ಟೆಂಬರ್ 2021, 14:41 IST
ಅಕ್ಷರ ಗಾತ್ರ

ಕೋಲಾರ: ‘ಜಿಲ್ಲೆಯಲ್ಲಿ ಶುಕ್ರವಾರ (ಸೆ.17) ಕೋವಿಡ್ ಬೃಹತ್‌ ಲಸಿಕೆ ಮೇಳ ಹಮ್ಮಿಕೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ತಿಳಿಸಿದರು.

ಇಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಶುಕ್ರವಾರ ಬೆಳಿಗ್ಗೆ 7 ಗಂಟೆಯಿಂದ ಸಂಜೆ 7ರವರೆಗೆ ಲಸಿಕೆ ಮೇಳ ನಡೆಯಲಿದೆ. ಕೋವಿಡ್ 3ನೇ ಅಲೆ ನಿಯಂತ್ರಣಕ್ಕೆ 18 ವರ್ಷ ಮೀರಿದ ಎಲ್ಲರೂ ಸ್ವಪ್ರೇರಣೆಯಿಂದ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕು’ ಎಂದು ಮನವಿ ಮಾಡಿದರು.

‘ಗ್ರಾಮ ಮಟ್ಟದ ಆರೋಗ್ಯ ಉಪ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ತಾಲ್ಲೂಕು ಆಸ್ಪತ್ರೆಗಳು, ನಗರ ಪ್ರದೇಶದ ಎಲ್ಲಾ ವಾರ್ಡ್‌ಗಳಲ್ಲಿ ಲಸಿಕೆ ಮೇಳ ನಡೆಯಲಿದೆ. ಗ್ರಾಮೀಣ ಭಾಗದಲ್ಲಿ 320 ಕಡೆ ಮತ್ತು ನಗರ ಪ್ರದೇಶದಲ್ಲಿ 92 ಕಡೆ ಲಸಿಕೆ ಶಿಬಿರಗಳನ್ನು ಆಯೋಜಿಸಲಾಗಿದೆ. ಒಟ್ಟಾರೆ ಜಿಲ್ಲೆಗೆ 75ಸಾವಿರ ಡೋಸ್ ಲಸಿಕೆ ಪೂರೈಸಲಾಗಿದೆ’ ಎಂದು ವಿವರಿಸಿದರು.

‘ಮೇಳದಲ್ಲಿ ಗರ್ಭಿಣಿಯರು, ಬಾಣಂತಿಯರು, 18 ವರ್ಷ ದಾಟಿದ ಎಲ್ಲರಿಗೂ ಲಸಿಕೆ ನೀಡಲಾಗುವುದು. ಸ್ಥಳೀಯ ಸಂಘ ಸಂಸ್ಥೆಗಳು, ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿ ಹಾಗೂ ಇತರೆ ಇಲಾಖೆಗಳ ನೆರವಿನೊಂದಿಗೆ ಮೇಳ ನಡೆಸುತ್ತೇವೆ. ಖಾಸಗಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಯನ್ನು ಮೇಳಕ್ಕೆ ನಿಯೋಜಿಸಲಾಗಿದೆ’ ಎಂದು ಮಾಹಿತಿ ನೀಡಿದರು.

‘ಜಿಲ್ಲೆಯಲ್ಲಿ 18 ವರ್ಷ ದಾಟಿದವರು 11,76,069 ಮಂದಿ ಇದ್ದಾರೆ. ಈರೆಗೂ ಜಿಲ್ಲೆಯಲ್ಲಿ 8,20,337 ಮಂದಿಗೆ ಲಸಿಕೆ ನೀಡಲಾಗಿದೆ. 3,55,732 ಮಂದಿ ಅರ್ಹ ಫಲಾನುಭವಿಗಳು ಲಸಿಕೆ ಪಡೆದಿಲ್ಲ. ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಶೇ 75, ಮಾಲೂರು ಶೇ 81, ಮುಳಬಾಗಿಲು ಶೇ 71, ಕೋಲಾರ ಮತ್ತು ಕೆಜಿಎಫ್‌ ತಾಲ್ಲೂಕಿನಲ್ಲಿ ತಲಾ ಶೇ 66 ಹಾಗೂ ಬಂಗಾರಪೇಟೆ ತಾಲ್ಲೂಕಿನಲ್ಲಿ ಶೇ 65ರಷ್ಟು ಮೊದಲ ಡೋಸ್‌ ಲಸಿಕೆ ನೀಡಿಕೆ ಗುರಿ ಸಾಧನೆಯಾಗಿದೆ’ ಎಂದು ಹೇಳಿದರು.

ಬಹುಮಾನ: ‘ಜಿಲ್ಲೆಯಲ್ಲಿ ಕೋವಿಡ್‌ ಒಂದನೇ ಮತ್ತು 2ನೇ ಅಲೆಯನ್ನು ಸಮರ್ಥವಾಗಿ ಎದುರಿಸಿದ್ದೇವೆ. ಸಂಪೂರ್ಣವಾಗಿ ಕೋವಿಡ್‌ ನಿರ್ಮೂಲನೆ ಮಾಡಲು ಲಸಿಕೆ ಹಾಕಿಸಿಕೊಳ್ಳುವುದು ಅತ್ಯಗತ್ಯ. ಪ್ರತಿ ಅರ್ಹ ಫಲಾನುಭವಿ ತಪ್ಪದೇ ಲಸಿಕೆ ಪಡೆಯಬೇಕು. ಕೋವಿಡ್‌ 3ನೇ ಅಲೆ ಗಂಭೀರವಾಗುವ ಸಾಧ್ಯತೆ ಇರುವುದರಿಂದ ಹೆಚ್ಚು ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಸಲಹೆ ನೀಡಿದರು.

‘ಲಸಿಕೆ ನೀಡಿಕೆ ಗುರಿ ಸಾಧನೆ ಕಡಿಮೆಯಿರುವ ಕಡೆ ಹೆಚ್ಚು ಶಿಬಿರಗಳನ್ನು ನಡೆಸಲು ಉದ್ದೇಶಿಸಲಾಗಿದೆ. ಜತೆಗೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವಂತೆ ಸೂಚಿಸಲಾಗಿದೆ. ಶೇ 100ರಷ್ಟು ಲಸಿಕೆ ಗುರಿ ಸಾಧನೆ ಮಾಡಿದ ಗ್ರಾ.ಪಂಗಳಿಗೆ ಬಹುಮಾನ ನೀಡಲಾಗುವುದು’ ಎಂದು ಘೋಷಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಗದೀಶ್, ತಾಯಿ ಮತ್ತು ಮಕ್ಕಳ ಆರೋಗ್ಯ ಯೋಜನಾಧಿಕಾರಿ (ಆರ್‌ಸಿಎಚ್‌) ಡಾ.ವಿಜಯಕುಮಾರಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದನ್, ಜಿಲ್ಲಾ ಆರೋಗ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರೇಮಾ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT