ಕೋಲಾರ: ಕೋಚಿಮುಲ್ ನಿರ್ದೇಶಕ ಡಿ.ವಿ.ಹರೀಶ್ ತಾಲ್ಲೂಕಿನ ದಾದಿರೆಡ್ಡಿ ಹಳ್ಳಿಯಲ್ಲಿ ಬುಧವಾರ ನೂತನ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಉದ್ಧಾಟಿಸಿದರು.
‘ಹೈನೋದ್ಯಮವು ರೈತರ ಬೆನ್ನೆಲುಬು. ಬಹುಪಾಲು ರೈತ ಕುಟುಂಬಗಳು ಜೀವನ ನಿರ್ವಹಣೆಗೆ ಹೈನುಗಾರಿಕೆ ಅವಲಂಬಿಸಿವೆ. ಗುಣಮಟ್ಟದ ಹಾಲು ಸರಬರಾಜು ಮಾಡಿದರೆ ಮಾತ್ರ ರೈತರು ಆರ್ಥಿಕವಾಗಿ ಸಬಲರಾಗಲು ಸಾಧ್ಯ. ಆದ ಕಾರಣ ರಾಸುಗಳ ಆರೋಗ್ಯದ ಕಡೆ ಹೆಚ್ಚು ಗಮನಹರಿಸಿ’ ಎಂದು ಹರೀಶ್ ಸಲಹೆ ನೀಡಿದರು.
‘ಮಹಿಳೆಯರು ಒಕ್ಕೂಟದಿಂದ ಸಿಗುವ ತಾಂತ್ರಿಕ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು. ಹೈನೋದ್ಯಮ ಕ್ಷೇತ್ರದಿಂದ ದೂರ ಸರಿಯಬಾರದು. ಗ್ರಾಮೀಣ ಭಾಗದಲ್ಲಿ ಹಾಲು ಸಂಘಗಳನ್ನು ಅಭಿವೃದ್ಧಿಪಡಿಸಬೇಕು. ಒಕ್ಕೂಟದ ವ್ಯಾಪ್ತಿಯಲ್ಲಿ ಮಹಿಳಾ ಸಂಘಗಳನ್ನು ಹೆಚ್ಚಾಗಿ ಸ್ಥಾಪನೆ ಮಾಡಬೇಕು. ನಂದಿನಿ ಸ್ವ-ಸಹಾಯ ಸಂಘಗಳ ಮೂಲಕ ಆರ್ಥಿಕ ಮಟ್ಟ ಉತ್ತಮಪಡಿಸಿ’ ಎಂದರು.
‘ಹಾಲು ಉತ್ಪಾದಕರಿಗೆ ವೈಜ್ಞಾನಿಕ ದರ ಪಟ್ಟಿಯಂತೆ ದರ ನೀಡಬೇಕು. ಒಕ್ಕೂಟದ ಸವಲತ್ತುಗಳು ಹಾಲು ಉತ್ಪಾದಕರಿಗೆ ಸಕಾಲಕ್ಕೆ ತಲುಪಬೇಕು. ಬೇಸಿಗೆಯಲ್ಲಿ ರಾಸುಗಳಿಗೆ ಮೇವಿನ ಸಮಸ್ಯೆ ಎದುರಾಗದಂತೆ ಈಗಿನಿಂದಲೇ ಮೇವು ಬೆಳೆಯಲು ಆರಂಭಿಸಿ. ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿನ ಸಮಸ್ಯೆ ಇಲ್ಲದಿದ್ದರೆ ಹಾಲಿನ ಉತ್ಪಾದನೆ ಹೆಚ್ಚುತ್ತದೆ’ ಎಂದು ಹೇಳಿದರು.
‘ಖಾಸಗಿ ಡೇರಿಗಳು ಹಾಲು ಉತ್ಪಾದಕರನ್ನು ವಂಚಿಸುತ್ತಿವೆ. ಆದ ಕಾರಣ ರೈತರು ಖಾಸಗಿ ಡೇರಿಗಳಿಗೆ ಹಾಲು ಹಾಕಬಾರದು. ಹಾಲು ಕಲಬೆರಕೆ ಮಾಡುವುದು ಆಹಾರ ಸುರಕ್ಷತಾ ಕಾಯ್ದೆ ಪ್ರಕಾರ ಅಪರಾಧ. ರಾಸುಗಳಿಗೆ ವರ್ಷದಲ್ಲಿ 2 ಬಾರಿ ಕಡ್ಡಾಯವಾಗಿ ಕಾಲುಬಾಯಿ ಜ್ವರದ ಲಸಿಕೆ ಹಾಕಿಸಬೇಕು’ ಎಂದು ಕೋಚಿಮುಲ್ ಶಿಬಿರ ಉಪ ವ್ಯವಸ್ಥಾಪಕ ಡಾ.ಎ.ಸಿ.ಶ್ರೀನಿವಾಸಗೌಡ ಕಿವಿಮಾತು ಹೇಳಿದರು.
ದಾದಿರೆಡ್ಡಿ ಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಮುನಿಯಮ್ಮ, ಕಾರ್ಯಕಾರಿ ಮಂಡಳಿ ಸದಸ್ಯರು, ಶಿಬಿರ ಅಧಿಕಾರಿಗಳಾದ ಹಾಜರಿದ್ದರು.