ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಮುಂದುವರಿದ ಸೋಂಕಿತರ ಸಾವಿನ ಸರಣಿ

ಜಿಲ್ಲೆಯಲ್ಲಿ 4 ಮಂದಿ ಕೊನೆಯುಸಿರು: ಹೆಚ್ಚಿದ ಆತಂಕ
Last Updated 7 ಅಕ್ಟೋಬರ್ 2020, 14:57 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಸರಣಿ ಮುಂದುವರಿದಿದ್ದು, ಬುಧವಾರ 4 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಮಂಗಳವಾರ ಒಂದೇ ದಿನ 5 ಸೋಂಕಿತರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಮತ್ತೆ 4 ಮಂದಿ ಮೃತಪಟ್ಟಿರುವುದು ಆರೋಗ್ಯ ಇಲಾಖೆಯ ನಿದ್ದೆಗೆಡಿಸಿದೆ. ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಿಗೆ ದಾಖಲಾಗಿರುವ ಸೋಂಕಿತರ ಪೈಕಿ ಬಂಗಾರಪೇಟೆ, ಕೆಜಿಎಫ್‌, ಮುಳಬಾಗಿಲು ಹಾಗೂ ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರು ಸೋಂಕಿತರು ಕೊನೆಯುಸಿರೆಳೆದಿದ್ದಾರೆ.

ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟಾರೆ ಸೋಂಕಿತರ ಸಾವಿನ ಸಂಖ್ಯೆ ಶತಕ ಪೂರೈಸಿದೆ. ಕಳೆದೆರಡು ದಿನಗಳಿಂದ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ದಿಢೀರ್‌ ಏರಿಕೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಮತ್ತೊಂದೆಡೆ ಕೊರೊನಾ ಸೋಂಕು ಹರಡುವಿಕೆ ಪ್ರಮಾಣವು ಗಣನೀಯವಾಗಿ ಹೆಚ್ಚಳವಾಗಿದೆ.

ಹೊಸದಾಗಿ 85 ಮಂದಿಗೆ ಸೋಂಕು ತಗುಲಿರುವುದು ಬುಧವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 1,184ಕ್ಕೆ ಜಿಗಿದಿದೆ. ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ. ಜತೆಗೆ ಸೋಂಕಿತರ ಸಂಪರ್ಕದಿಂದ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹರಡುತ್ತಿದೆ.

ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 47 ಮಂದಿಗೆ ಸೋಂಕು ಬಂದಿರುವುದು ಖಚಿತವಾಗಿದೆ. ಮಾಲೂರು ತಾಲ್ಲೂಕಿನ 16, ಬಂಗಾರಪೇಟೆ ತಾಲ್ಲೂಕಿನ 4, ಕೆಜಿಎಫ್‌ ತಾಲ್ಲೂಕಿನ 9, ಮುಳಬಾಗಿಲು ತಾಲ್ಲೂಕಿನ 6 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 3 ಮಂದಿಗೆ ಸೋಂಕು ತಗುಲಿದೆ.

ಹೊಸದಾಗಿ ಪತ್ತೆಯಾದ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಯಿತು.

104 ಮಂದಿ ಗುಣಮುಖ: ಸೋಂಕಿತರ ಗುಣಮುಖ ಪ್ರಮಾಣದಲ್ಲಿ ದಾಖಲೆಯ ಏರಿಕೆಯಾಗಿದ್ದು, ಆರೋಗ್ಯ ಇಲಾಖೆಯು ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಕೋಲಾರ ತಾಲ್ಲೂಕಿನ 57 ಮಂದಿ, ಮಾಲೂರು ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ 9 ಮಂದಿ, ಬಂಗಾರಪೇಟೆ ತಾಲ್ಲೂಕಿನ 3, ಕೆಜಿಎಫ್‌ ತಾಲ್ಲೂಕಿನ 14 ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 12 ಮಂದಿ ಗುಣಮುಖರಾಗಿ ಬುಧವಾರ ಆಸ್ಪತ್ರೆಯಿಂದ ಮನೆಗೆ ಮರಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT