ಕೋಲಾರ: ‘ವಿದ್ಯಾರ್ಥಿಗಳು ಜೀವನದಲ್ಲಿ ಸೇವಾ ಮನೋಭಾವ ಬೆಳೆಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ’ ಎಂದು ಮುದುವಾಡಿ ಗ್ರಾಂ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ್ ತಿಳಿಸಿದರು.
ತಾಲ್ಲೂಕಿನ ವಾನರಾಶಿ ಗ್ರಾಮದಲ್ಲಿ ಗೋಕುಲ ಕಾಲೇಜಿನಿಂದ ಸೋಮವಾರ ಆರಂಭವಾದ ರಾಷ್ಟ್ರೀಯ ಸೇವಾ ಯೋಜನೆಯ (ಎನ್ಎಸ್ಎಸ್) ಶಿಬಿರ ಉದ್ಘಾಟಿಸಿ ಮಾತನಾಡಿ, ‘ವಿದ್ಯಾರ್ಥಿಗಳಲ್ಲಿ ಪರಿಸರ, ಸೇವಾ ಮನೋಭಾವದ ಪ್ರಜ್ಞೆ ಮೂಡಿಸಲು ಶಿಬಿರಗಳು ಪೂರಕವಾಗಿವೆ’ ಎಂದರು.
‘ದೇಶದ ಭವಿಷ್ಯ ಯುವಕರ ಮೇಲಿದೆ. ದುಶ್ಚಟಗಳಿಗೆ ಬಲಿಯಾಗಬಅರದು. ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಬೇಕು. ಗ್ರಾಮೀಣ ಭಾಗದ ಅಭಿವೃದ್ಧಿಗಾಗಿ ಬಿಡುಗಡೆಯಾಗುವ ಸೌಕರ್ಯಗಳ ಬಗ್ಗೆ ಜನರಿಗೆ ತಿಳಿಸಿಕೊಡಬೇಕು’ ಎಂದು ಸಲಹೆ ನೀಡಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ್ ಪ್ರಸಾದ್ ಮಾತನಾಡಿ, ‘ಬದುಕನ್ನು ಸಾರ್ಥಕ ಪಡಿಸಿಕೊಳ್ಳಲು ಎನ್ಎಸ್ಎಸ್ ಶಿಬಿರಗಳು ಉತ್ತಮ ಅವಕಾಶ ಒದಗಿಸಿಕೊಡಲಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನೆ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.
‘ಗ್ರಾಮಗಳಲ್ಲಿ ಹಿಂದೆ ಜನ ಸ್ವಯಂ ಪ್ರೇರಿತರಾಗಿ ಸ್ವಚ್ಛತಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದರು. ಬದಲಾವಣೆಗಳಿಂದ ಜನ ಐಷರಾಮಿ ಜೀವನದತ್ತ ಮುಖಮಾಡಿದ್ದು, ಸಮಾಜದ ಅಭಿವೃದ್ಧಿಯ ಮೇಲೆ ಪರಿಣಾಮ ಬೀರುತ್ತಿದೆ’ ಎಂದು ವಿಷಾದಿಸಿದರು.
ಗೋಕುಲ ಕಾಲೇಜಿನ ಪ್ರಾಂಶುಪಾಲ ಎಚ್.ಬಿ.ಮಹೇಶ್ ಮಾತನಾಡಿ, ‘ಎನ್ಎಸ್ಎಸ್ ಶಿಬಿರ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಗೊಳಿಸುವುದರ ಜತೆಗೆ ನಾಯಕತ್ವದ ಗುಣಗಳನ್ನು ಬೆಳೆಸುತ್ತದೆ, ಶಿಬಿರದ ಯಶಸ್ಸಿಗೆ ವಿದ್ಯಾರ್ಥಿಗಳು ಸಹಕಾರ ನೀಡಬೇಕು’ ಎಂದರು.
ವಾನರಾಶಿ ಗ್ರಾಮ ಪಂಚಾಯಿತಿ ಸದಸ್ಯ ರವೀಂದ್ರ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪದ್ಮವತಮ್ಮ ಹಾಜರಿದ್ದರು.