ಶ್ರೀನಿವಾಸಪುರ: ‘ಕೆರೆ ಗ್ರಾಮೀಣ ಜನರ ಜೀವನಾಡಿಯಾಗಿದ್ದು, ಯಾವುದೇ ಒತ್ತಡಕ್ಕೆ ಮಣಿಯದೆ ಒತ್ತುವರಿ ತೆರವುಗೊಳಿಸಲಾಗುವುದು’ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ತಾಲ್ಲೂಕಿನ ಅರಿಕೆರೆ ಗ್ರಾಮದ ಸಮೀಪ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸ್ಥಳೀಯ ಕೆರೆ ಬಳಗ ಸಂಘದಿಂದ ಶುಕ್ರವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಚೌಡೇಶ್ವರಿ ಅಮ್ಮನವರ ಕೆರೆ ಹೂಳೆತ್ತುವ ಹಾಗೂ ಕಟ್ಟೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಬದಲಾದ ಪರಿಸ್ಥಿತಿಯಲ್ಲಿ ಕೆರೆ ಹೂಳು ತೆಗೆಯುವ ಹಾಗೂ ಕಟ್ಟೆ ದುರಸ್ತಿ ಕಾರ್ಯಕ್ಕೆ ಆದ್ಯತೆ ನೀಡಲಾಗುವುದು. ಗ್ರಾಮದ ಕೆರೆ ಅಭಿವೃದ್ಧಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ₹14 ಲಕ್ಷ ವೆಚ್ಚ ಮಾಡುತ್ತಿದೆ.ಸಂಬಂಧಪಟ್ಟ ಇಲಾಖೆಯಿಂದ ಇನ್ನಷ್ಟು ನೆರವು ಕೊಡಿಸಲಾಗುವುದು. ಕೆರೆಗೆ ನೀರು ಬರಲು ಇರುವ ಅಡ್ಡಿ ನಿವಾರಿಸಲಾಗುವುದು ಎಂದರು.
ಗ್ರಾಮ ಪಂಚಾಯಿತಿ ಚುನಾವಣೆ ಮುಗಿದಿದೆ. ರಾಜಕೀಯ ಚುನಾವಣೆ ಸಂದರ್ಭಕ್ಕೆ ಮಾತ್ರ ಮೀಸಲಿರಬೇಕು. ಅನಂತರ ಎಲ್ಲರೂ ಒಂದೇ ತಾಯಿಯ ಮಕ್ಕಳಂತೆ ನಡೆದುಕೊಳ್ಳಬೇಕು. ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಯ್ಕೆ ಮುಗಿದ ನಂತರ, ಕ್ಷೇತ್ರದ ಎಲ್ಲಗ್ರಾಮಗಳಿಗೂ ಭೇಟಿ ನೀಡಿ ಕುಂದು ಕೊರತೆ ವಿಚಾರಿಸಲಾಗುವುದು. ಸಮಸ್ಯೆ ಕಂಡುಬಂದಲ್ಲಿ ನಿವಾರಿಸಲಾಗುವುದು ಎಂದು ಹೇಳಿದರು.
ಯೋಜನೆಯ ಜಿಲ್ಲಾ ನಿರ್ದೇಶಕ ಜೆ.ಚಂದ್ರಶೇಖರ್ ಮಾತನಾಡಿ, ರಾಜ್ಯದಲ್ಲಿ ನಮ್ಮ ಊರು ನಮ್ಮ ಕೆರೆ ಯೋಜನೆಯಡಿ 262 ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಜಿಲ್ಲೆಯಲ್ಲಿ 21 ಕೆರೆಗಳ ಅಭಿವೃದ್ಧಿ ಕೈಗೊಳ್ಳಲಾಗಿದೆ. ಆ ಪೈಕಿ ತಾಲ್ಲೂಕಿನಲ್ಲಿ 4 ಕೆರೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಇಒ ಎಸ್.ಆನಂದ್, ಪಿಡಿಒ ಜಗದೀಶ್ ಕುಮಾರ್, ಸುರೇಶ ಬಾಬು, ಜಗದೀಶ್, ಹರೀಶ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸುಧಾಕರ್, ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎ.ವಿ.ರಾಮನಾಥ್, ಮುಖಂಡ ಅರುಣ್ ಕುಮರ್, ಅಶೋಕ್, ರಮೇಶ್, ವೆಂಕಟರವಣಪ್ಪ ಇದ್ದರು.