ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಣ್ಣು ಮಕ್ಕಳ ಬಗ್ಗೆ ಕೀಳರಿಮೆ ಬೇಡ

ವಿಶ್ವಕರ್ಮ ಜಯಂತಿಯಲ್ಲಿ ಜಿಲ್ಲಾಧಿಕಾರಿ ಸತ್ಯಭಾಮ ಹೇಳಿಕೆ
Last Updated 21 ಸೆಪ್ಟೆಂಬರ್ 2020, 16:02 IST
ಅಕ್ಷರ ಗಾತ್ರ

ಕೋಲಾರ: ‘ಹೆಣ್ಣು ಮಕ್ಕಳ ಬಗ್ಗೆ ಕೀಳರಿಮೆ ಬೇಡ. ಪೋಷಕರು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿ ಸುಶಿಕ್ಷಿತರಾಗಿ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಸಲಹೆ ನೀಡಿದರು.

ಇಲ್ಲಿ ಸೋಮವಾರ ನಡೆದ ವಿಶ್ವಕರ್ಮ ಜಯಂತಿಯಲ್ಲಿ ಮಾತನಾಡಿ, ‘ವಿಶ್ವಕರ್ಮ ಸಮುದಾಯದವರ ಕುಲ ಕಸುಬು ನಶಿಸುತ್ತಿದೆ. ಈ ಬಗ್ಗೆ ಸಮುದಾಯ ಜಾಗೃತಗೊಳ್ಳಬೇಕು. ಕುಲ ಕಸುಬು ಮುಂದುವರಿಸಿ ಸಮಾಜದ ಮುಖ್ಯವಾಹಿನಿಗೆ ಬರಬೇಕು’ ಎಂದು ಆಶಿಸಿದರು.

‘ವಿಶ್ವಕರ್ಮರನ್ನು ದೇವ ಶಿಲ್ಪಿ ಎಂತಲೂ ಕರೆಯುತ್ತಾರೆ. ರಾಜ್ಯದ ಬೇಲೂರು, ಹಳೇಬೀಡು, ಹಂಪಿಯಲ್ಲಿರುವ ವಾಸ್ತುಶಿಲ್ಪಕ್ಕೆ ವಿಶ್ವಕರ್ಮ ಸಮುದಾಯದವರು ಮೂಲ ಕಾರಣ. ಸಮುದಾಯದವರು ಪಂಚ ಕಸುಬು ಮಾಡುವ ಮೂಲಕ ಸಮಾಜದ ಅವಿಭಾಜ್ಯ ಅಂಗವಾಗಿ ಬೆಳೆಯುತ್ತಿದ್ದಾರೆ. ಸಣ್ಣ ಸಮುದಾಯ ಈಗ ಬೆಳಕಿಗೆ ಬರುತ್ತಿದೆ’ ಎಂದು ಹೇಳಿದರು.

‘ಜಾಗತಿಕ ಯುಗದಲ್ಲಿ ಪೋಷಕರು ತುಲನಾತ್ಮಕ ನೋಟ ಇಟ್ಟುಕೊಂಡು ಮಕ್ಕಳಿಗೆ ಶಿಕ್ಷಣ ನೀಡಬೇಕು. ಇಲ್ಲವಾದರೆ ಮಕ್ಕಳು ಉತ್ತಮ ಪ್ರಜೆಗಳಾಗಿ ಬೆಳೆಯಲು ಸಾಧ್ಯವಿಲ್ಲ. ಮಕ್ಕಳು ಉದ್ಯೋಗಸ್ಥರಾದರೆ ಜೀವನ ರೂಪಿಸಿಕೊಂಡು ಸಮಾಜದಲ್ಲಿ ಗುರುತಿಸಿಕೊಳ್ಳುತ್ತಾರೆ. ಹೆಣ್ಣು ಮಕ್ಕಳಿಗೆ ಮದುವೆ ಮಾಡಿದರೆ ಜವಾಬ್ದಾರಿ ಮುಗಿಯಿತೆಂಬ ಭಾವನೆಯಿಂದ ಪೋಷಕರು ಹೊರ ಬರಬೇಕು’ ಎಂದು ಕಿವಿಮಾತು ಹೇಳಿದರು.

‘ವಿಶ್ವಕರ್ಮ ಸಮುದಾಯದ ಬಡ ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡಬೇಕು. ಸಮುದಾಯದಲ್ಲಿನ ಸ್ಥಿತಿವಂತರು ಬಡವರಿಗೆ ನೆರವಾಗಬೇಕು. ಸಮುದಾಯದವರು ಸರ್ಕಾರದ ಯೋಜನೆಗಳು ಹಾಗೂ ಸವಲತ್ತುಗಳ ಸದುಪಯೋಗ ಪಡೆಯಬೇಕು. ಸಮುದಾಯದ ಕೌಶಲ ಮುಂದುವರಿಸಬೇಕು’ ಎಂದರು.

ಸ್ವಾಗತಾರ್ಹ: ‘ಜಿಲ್ಲಾಡಳಿತದಿಂದ ವಿಶ್ವಕರ್ಮ ಜಯಂತಿ ಆಚರಿಸುತ್ತಿರುವುದು ಸ್ವಾಗತಾರ್ಹ. ಜಿಲ್ಲೆಯಲ್ಲಿ ವಿಶ್ವಕರ್ಮ ಸಮುದಾಯದ ಜನಸಂಖ್ಯೆ ಸುಮಾರು 60 ಸಾವಿರವಿದೆ. ಪಂಚ ಕಸುಬುಗಳಾದ ಚಿನ್ನ ಮತ್ತು ಬೆಳ್ಳಿ ವ್ಯಾಪಾರ, ಶಿಲ್ಪಕಲೆ, ಬಡಗಿ, ಕಮ್ಮಾರಿಕೆ ಕಸಬುಗಳನ್ನು ಸಮುದಾಯವು ಸಮಾಜಕ್ಕೆ ಕೊಡುಗೆಯಾಗಿ ನೀಡಿದೆ’ ಎಂದು ವಿಶ್ವಕರ್ಮ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ವಿಷ್ಣು ವಿವರಿಸಿದರು.

‘ಕೋವಿಡ್- ಸಂಕಷ್ಟದ ಹಿನ್ನೆಲೆಯಲ್ಲಿ ಸಮುದಾಯದ ವೃತ್ತಿಗಳು ನೆಲಕಚ್ಚಿವೆ. ಆದ ಕಾರಣ ಪರ್ಯಾಯ ಉದ್ಯೋಗಾವಕಾಶ ಸೃಷ್ಟಿಸಬೇಕು. ಸಮುದಾಯವು ಎಲ್ಲಾ ಕ್ಷೇತ್ರಗಳಲ್ಲೂ ಹಿಂದುಳಿದಿದೆ. ವಿವಿಧ ಇಲಾಖೆಗಳ ಸಹಯೋಗದಲ್ಲಿ ತರಬೇತಿ ಶಿಬಿರ ಆಯೋಜಿಸುವ ಮೂಲಕ ಸಮುದಾಯದವರಿಗೆ ಉದ್ಯೋಗ ಕಲ್ಪಿಸಬೇಕು’ ಎಂದು ಮನವಿ ಮಾಡಿದರು.

‘ರಾಜರ ಕಾಲವು ವಿಶ್ವಕರ್ಮ ಸಮುದಾಯದವರಿಗೆ ಸುವರ್ಣ ಯುಗವಾಗಿತ್ತು. ಆದರೆ, ಈಗಿನ ಪರಿಸ್ಥಿತಿ ನೆನದರೆ ನೋವಾಗುತ್ತದೆ. ಸಮುದಾಯದವರು 800 ಶತಮಾನದಿಂದ ಜಗತ್ತಿಗೆ ದೇವರ ಮೂರ್ತಿಗಳನ್ನು ನೀಡುತ್ತಾ ಬಂದಿದ್ದಾರೆ. ದೇವರು ಇರುವವರೆಗೂ ಸಮುದಾಯವಿರುತ್ತದೆ’ ಎಂದು ಹೇಳಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರಾಜಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್ ಹಾಗೂ ವಿಶ್ವಕರ್ಮ ಸಮುದಾಯದ ಮುಖಂಡರು ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT