ಕೋಲಾರ: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹೋದರರ ಮನೆ ಮೇಲಿನ ಸಿಬಿಐ ದಾಳಿಗೂ ಬಿಜೆಪಿಗೂ ಸಂಬಂಧವಿಲ್ಲ. ಕಾಂಗ್ರೆಸ್ ಮುಖಂಡರು ಇದಕ್ಕೆ ರಾಜಕೀಯ ಬಣ್ಣ ಕಟ್ಟಬಾರದು’ ಎಂದು ಸಂಸದ ಎಸ್.ಮುನಿಸ್ವಾಮಿ ಗುಡುಗಿದರು.
ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಡಿ.ಕೆ.ಶಿವಕುಮಾರ್ ಸಹೋದರರು ಮತ್ತು ಅವರ ಆಪ್ತರ ಮನೆ, ಕಚೇರಿಗಳ ಮೇಲೆ ಸಿಬಿಐ ದಾಳಿ ನಡೆದಿರುವುದರ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಕಾಂಗ್ರೆಸ್ ಮುಖಂಡರು ಸುಳ್ಳು ಆರೋಪ ಮಾಡುತ್ತಿದ್ದಾರೆ’ ಎಂದು ದೂರಿದರು.
‘ಸ್ವಾಯತ್ತ ಸಂಸ್ಥೆಗಳಾದ ಸಿಬಿಐ, ಜಾರಿ ನಿರ್ದೇಶನಾಲಯ ಹಾಗೂ ಆದಾಯ ತೆರಿಗೆ ಇಲಾಖೆಯು ಯಾವುದೇ ಸರ್ಕಾರದ ನಿಯಂತ್ರಣದಲ್ಲಿ ಇರುವುದಿಲ್ಲ. ಈ ಸ್ವಾಯತ್ತ ಸಂಸ್ಥೆಗಳನ್ನು ರಾಜಕೀಯ ಲಾಭಕ್ಕೆ ದುರ್ಬಳಕೆ ಮಾಡಿಕೊಳ್ಳುವಷ್ಟು ದುರ್ಗತಿ ಬಿಜೆಪಿಗೆ ಬಂದಿಲ್ಲ. ಸಿಬಿಐ ದಾಳಿ ವಿಚಾರವಾಗಿ ಕಾಂಗ್ರೆಸ್ ನಾಯಕರು ಬಿಜೆಪಿ ಮೇಲೆ ಗೂಬೆ ಕೂರಿಸಬಾರದು’ ಎಂದು ಹೇಳಿದರು.
‘ಕಾನೂನು ಎಲ್ಲರಿಗೂ ಒಂದೇ. ದೇಶದಲ್ಲಿ ಹುಟ್ಟಿದ ಪ್ರತಿ ಪ್ರಜೆಯೂ ಕಾನೂನಿಗೆ ತಲೆ ಬಾಗಬೇಕು. ಡಿ.ಕೆ.ಶಿವಕುಮಾರ್ ಮತ್ತು ಅವರ ಸಹೋದರ ಯಾವುದೇ ತಪ್ಪು ಮಾಡಿರದಿದ್ದರೆ ಹೆದರುವ ಅಗತ್ಯವಿಲ್ಲ. ಅವರು ನ್ಯಾಯಯುತವಾಗಿ ಹಣ, ಆಸ್ತಿ ಸಂಪಾದಿಸಿದ್ದಾರೆಯೇ ಎಂಬ ಸತ್ಯ ಸಿಬಿಐ ತನಿಖೆ ನಂತರ ಹೊರ ಬರುತ್ತದೆ’ ಎಂದು ತಿಳಿಸಿದರು.
‘ಶಿರಾ ಮತ್ತು ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಖಂಡಿತ ಜಯ ಗಳಿಸುತ್ತಾರೆ. ಈ ಬಗ್ಗೆ ಯಾವುದೇ ಅನುಮಾನ ಬೇಡ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಪರ ಅಲೆಯಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.