ಕೋಲಾರ: ‘ಆಗ್ನೇಯ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಮತದಾರರು ಬೆಂಬಲ ನೀಡಿ ನನ್ನನ್ನು ಗೆಲ್ಲಿಸಬೇಕು’ ಎಂದು ಅಭ್ಯರ್ಥಿಯಾದ ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ವಸಂತ್ಕುಮಾರ್ ಮನವಿ ಮಾಡಿದರು.
ಇಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘2020ರಲ್ಲಿ ಚುನಾವಣೆ ನಡೆಯಲಿದ್ದು, ಸ್ಪರ್ಧೆ ಮಾಡಲು ನಿರ್ಧರಿಸಿದ್ದೇನೆ. ಈ ಭಾಗದಲ್ಲಿ ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ಸಮಸ್ಯೆ ಪರಿಹಾರಕ್ಕೆ ಸಾಕಷ್ಟು ಹೋರಾಟ ನಡೆಸಿದ್ದೇನೆ’ ಎಂದರು.
‘ಪದವೀಧರರು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಬೇಕು. ಹಿಂದಿನ ಚುನಾವಣೆ ವೇಳೆ 87 ಸಾವಿರ ಮತದಾರರು ಆಗ್ನೇಯ ಕ್ಷೇತ್ರದಲ್ಲಿ ಹೆಸರು ನೋಂದಾಯಿಸಿದ್ದರು. ಮುಂದಿನ ಚುನಾವಣೆಯಲ್ಲಿ ಸುಮಾರು 1 ಲಕ್ಷ ಮತದಾರರ ನೋಂದಣಿಯಾಗುವ ಸಾಧ್ಯತೆಯಿದೆ’ ಎಂದು ಹೇಳಿದರು.
‘ಆಗ್ನೇಯ ಪದವೀಧರರ ಕ್ಷೇತ್ರದ ವ್ಯಾಪ್ತಿಯಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಿವೆ. ಈಗಾಗಲೇ ಚುನಾವಣಾ ಪ್ರಚಾರ ಆರಂಭಿಸಿದ್ದು, ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ’ ಎಂದು ತಿಳಿಸಿದರು.
‘ಸಿಂಡಿಕೇಟ್ ಸದಸ್ಯನಾದ ನಂತರ ಹಲವು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಿದ್ದೇನೆ. ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕೇಂದ್ರ ಆರಂಭ, ಜಿಲ್ಲಾ ಕೇಂದ್ರಗಳಲ್ಲಿ ಉದ್ಯೋಗ ಮೇಳ, ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸುವುದು, ಸಮಾನ ವೇತನ ಸೇರಿದಂತೆ ಹಲವು ಬೇಡಿಕೆ ಈಡೇರಿಸಲು ಶ್ರಮಿಸುತ್ತೇನೆ’ ಎಂದು ಭರವಸೆ ನೀಡಿದರು.