ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಣಮಟ್ಟದ ಹಾಲು ಶೇಖರಣೆಗೆ ಒತ್ತು

Last Updated 17 ಜೂನ್ 2021, 16:54 IST
ಅಕ್ಷರ ಗಾತ್ರ

ಕೋಲಾರ: ‘ತಾಲ್ಲೂಕಿನಲ್ಲಿ ಹೆಚ್ಚು ಬಿಎಂಸಿ ಕೇಂದ್ರಗಳನ್ನು ಸ್ಥಾಪಿಸಿ ಶುದ್ಧ ಮತ್ತು ಗುಣಮಟ್ಟದ ಹಾಲು ಶೇಖರಣೆಗೆ ಒತ್ತು ನೀಡಲಾಗುತ್ತದೆ’ ಎಂದು ಕೋಚಿಮುಲ್‌ ನಿರ್ದೇಶಕ ಡಿ.ವಿ.ಹರೀಶ್‌ ಹೇಳಿದರು.

ತಾಲ್ಲೂಕಿನ ಬಿ.ಗುಟ್ಟಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಗುರುವಾರ 2 ಸಾವಿರ ಲೀಟರ್ ಸಾಮರ್ಥ್ಯದ ಬಿಎಂಸಿ ಘಟಕ ಉದ್ಘಾಟಿಸಿ ಮಾತನಾಡಿ, ‘ಕೋಲಾರ ತಾಲ್ಲೂಕು ಅತಿ ಹೆಚ್ಚು ಹಾಲಿನ ಸಂಘಗಳನ್ನು ಹೊಂದಿದೆ. ತಾಲ್ಲೂಕಿನಾದ್ಯಾಂತ ಬಿಎಂಸಿ ಕೇಂದ್ರಗಳನ್ನು ಅಳವಡಿಸಿ ಕ್ಯಾನ್ ಮುಕ್ತ ಹಾಲು ಶೇಖರಣೆ ವ್ಯವಸ್ಥೆ ಜಾರಿಗೊಳಿಸುತ್ತೇವೆ’ ಎಂದು ಭರವಸೆ ನೀಡಿದರು.

‘ಗುಣಮಟ್ಟದ ಹಾಲು ಸರಬರಾಜು ಮಾಡಿದರೆ ಮಾತ್ರ ರೈತರು ಆರ್ಥಿಕವಾಗಿ ಸಬಲರಾಗಲು ಸಾಧ್ಯ. ಆದ ಕಾರಣ ರಾಸುಗಳ ಆರೋಗ್ಯದ ಕಡೆ ಹೆಚ್ಚು ಗಮನಹರಿಸಬೇಕು. ರೈತರು ಒಕ್ಕೂಟದಿಂದ ಸಿಗುವ ತಾಂತ್ರಿಕ ಸೌಲಭ್ಯ ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು. ಹೈನೋದ್ಯಮ ಕ್ಷೇತ್ರದಿಂದ ದೂರ ಸರಿಯಬಾರದು. ಗ್ರಾಮೀಣ ಭಾಗದಲ್ಲಿ ಹಾಲು ಸಂಘಗಳನ್ನು ಅಭಿವೃದ್ಧಿಪಡಿಸಬೇಕು’ ಎಂದರು.

‘ತಾಲ್ಲೂಕಿನಲ್ಲಿ 264 ಸಂಘಗಳಿಂದ ಪ್ರತಿನಿತ್ಯ ಸುಮಾರು 1.60 ಲಕ್ಷ ಲೀಟರ್ ಹಾಲು ಸಂಗ್ರಹಣೆಯಾಗುತ್ತಿದೆ. ಕೋವಿಡ್‌ ಸಂಕಷ್ಟದಲ್ಲಿ ಜನರ ಜೀವನಕ್ಕೆ ಹೈನೋದ್ಯಮ ಸಹಕಾರಿಯಾಗಿದೆ. ರಾಜ್ಯದ ಹಲವು ಹಾಲು ಒಕ್ಕೂಟಗಳು ಹಾಲು ಖರೀದಿ ದರ ಕಡಿಮೆ ಮಾಡಿವೆ. ಆದರೆ, ಕೋಲಾರ ಒಕ್ಕೂಟ ಮಾತ್ರ ಹಾಲು ಖರೀದಿ ದರ ಇಳಿಸಿಲ್ಲ’ ಎಂದು ವಿವರಿಸಿದರು.

‘ಬಿಎಂಸಿ ಘಟಕ ಸ್ಥಾಪನೆಯಿಂದ ಹಾಲಿನ ಗುಣಮಟ್ಟದ ಜತೆಗೆ ಜೈವಿಕ ಗುಣಮಟ್ಟ ಕಾಪಾಡಲು ಸಹಾಯವಾಗುತ್ತದೆ. ಒಕ್ಕೂಟದ ತುರ್ತು ಕರೆ, ಗುಂಪು ವಿಮೆ ಯೋಜನೆ, ವಿಮಾ ಯೋಜನೆ, ಲಸಿಕೆ ಕಾರ್ಯಕ್ರಮ, ಪಶು ಆಹಾರ ಖನಿಜ ಮಿಶ್ರಣ ಪಡೆಯಬೇಕು. ಒಕ್ಕೂಟದ ತಾಂತ್ರಿಕ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಿ’ ಎಂದು ಕಿವಿಮಾತು ಹೇಳಿದರು.

ಬಿ.ಗುಟ್ಟಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ನಾಗರಾಜ್, ಕೋಚಿಮುಲ್‌ ಶಿಬಿರ ಉಪ ವ್ಯವಸ್ಥಾಪಕ ಶ್ರೀಧರ್‌ಮೂರ್ತಿ, ಅಧಿಕಾರಿಗಳಾದ ಶ್ರೀನಿವಾಸ್, ತಿಪ್ಪಾರೆಡ್ಡಿ, ಗ್ರಾ.ಪಂ ಸದಸ್ಯರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT