ಕೋಲಾರ: ‘ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಫೆಬ್ರುವರಿ ಮೊದಲ ವಾರದಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಮಹಿಳಾ ನೌಕರರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಹೇಳಿದರು.
ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಬಂಧ ಇಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ‘ಒಟ್ಟಾರೆ 2 ದಿನ ನಡೆಯುವ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ನೌಕರರು, ಶಿಕ್ಷಕರಿಗೆ ಆಯಾ ಇಲಾಖೆಯ ಅಧಿಕಾರಿಗಳು ಅನ್ಯಕಾರ್ಯ ನಿಮಿತ್ತ (ಒಒಡಿ) ರಜೆ ನೀಡಬೇಕು’ ಎಂದು ಸೂಚಿಸಿದರು.
‘ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ನೌಕರರಿಗೆ ಪ್ರಶಸ್ತಿಪತ್ರ ಹಾಗೂ ಸ್ಮರಣಿಕೆ ಕೊಡುಗೆಯಾಗಿ ನೀಡುತ್ತೇನೆ. ಕ್ರೀಡಾಕೂಟಕ್ಕೆ ಜಿಲ್ಲಾ ಪಂಚಾಯಿತಿಯಿಂದ ₹ 5 ಲಕ್ಷ ನೀಡಬೇಕು. ಕ್ರೀಡಾಕೂಟಕ್ಕೆ ಬರುವ ನೌಕರರಿಗೆ ಟೀಪ್, ಟಿ-ಶರ್ಟ್ ಕೊಡಬೇಕು. ನೌಕರರು ಎರಡೂ ದಿನ ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಬೇಕು’ ಎಂದು ಸಲಹೆ ನೀಡಿದರು.
‘ಕ್ರೀಡಾಕೂಟದ ಯಶಸ್ಸಿಗೆ ಎಲ್ಲಾ ಇಲಾಖೆಗಳು ಸ್ಪಂದಿಸಬೇಕು. ನಗರಸಭೆ ವತಿಯಿಂದ ಪೆಂಡಾಲ್, ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಮತ್ತು ಸ್ವಚ್ಛತಾ ಕಾರ್ಯ ನಿರ್ವಹಿಸಬೇಕು. ಸಾಂಸ್ಕೃತಿಕ ಸ್ಪರ್ಧೆ ನಡೆಯುವ ಟಿ.ಚನ್ನಯ್ಯ ರಂಗಮಂದಿರದಲ್ಲಿ ಧ್ವನಿವರ್ಧಕ, ಬೆಳಕಿನ ವ್ಯವಸ್ಥೆ ಸರಿಯಿರಬೇಕು’ ಎಂದು ಕನ್ನಡ ಸಂಸ್ಕೃತಿಕ ಇಲಾಖೆ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು.
ಅಗತ್ಯ ಸಿದ್ಧತೆ: ‘ಕ್ರೀಡಾಕೂಟಕ್ಕೆ ಇಲಾಖೆಯಿಂದ ಅಗತ್ಯ ಸಿದ್ಧತೆ ಮಾಡುತ್ತೇವೆ. ಜತೆಗೆ ಕ್ರೀಡಾ ಸಾಮಗ್ರಿಗಳನ್ನು ಒದಗಿಸುತ್ತೇವೆ’ ಎಂದು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಕೆ.ಎನ್.ಮಂಜುನಾಥ್ ತಿಳಿಸಿದರು.
‘ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳಿಗೆ ಊಟ, ಕುಡಿಯುವ ನೀರು ಒದಗಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ನೌಕರರು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಇಲಾಖೆಗಳ ವೃಂದ ಸಂಘಗಳ ಮೂಲಕ ಮನವಿ ಮಾಡುತ್ತೇವೆ. ದೈಹಿಕ ಶಿಕ್ಷಕರನ್ನು ಕ್ರೀಡಾಕೂಟಕ್ಕೆ ನಿಯೋಜಿಸಿ ಯಶಸ್ವಿಗೊಳಿಸಬೇಕು’ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್ಬಾಬು ಮನವಿ ಮಾಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೃಷ್ಣಮೂರ್ತಿ, ಕನ್ನಡ ಸಂಸ್ಕೃತಿಕ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್, ನಗರಸಭೆ ಆಯುಕ್ತ ಶ್ರೀಕಾಂತ್, ಆರೋಗ್ಯ ಶಿಕ್ಷಣಾಧಿಕಾರಿ ಪ್ರೇಮಾ, ಜಿಲ್ಲಾ ದೈಹಿಕ ಶಿಕ್ಷಕ ಅಧೀಕ್ಷಕ ಮಂಜುನಾಥ್ ಪಾಲ್ಗೊಂಡರು.