ಬಂಗಾರಪೇಟೆ: ಮಾಜಿ ಶಾಸಕ ಎಂ.ನಾರಾಯಣಸ್ವಾಮಿ ಮತ್ತು ಶಾಸಕ ಎಸ್.ಎನ್ ನಾರಾಯಣಸ್ವಾಮಿ ನಡುವಿನ ಕಾನೂನು ಸಮರಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಶಾಸಕರ ಅನುಯಾಯಿಗಳು ಸುಖಾಸುಮ್ಮನೆ ಬಿಜೆಪಿ ಮೇಲೆ ಆರೋಪ ಮಾಡುವುದನ್ನು ನಿಲ್ಲಿಸಬೇಕು ಎಂದು ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಹೊಸರಾಯಪ್ಪ ತಾಕೀತು ಮಾಡಿದರು.
ಪಟ್ಟಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಎಂ.ನಾರಾಯಣಸ್ವಾಮಿ ಕಾರಣಾಂತರಗಳಿಂದ ಕಣದಿಂದ ಹಿಂದೆ ಸರಿದಿದ್ದಾರೆ. ಇದರ ಬಗ್ಗೆ ಹಾಲಿ ಶಾಸಕರು ತೇಜೋವಧೆ ಮಾಡುವ ಹೇಳಿಕೆ ನೀಡಿದ್ದರಿಂದ ಮಾಜಿ ಶಾಸಕ ಎಂ.ನಾರಾಯಣಸ್ವಾಮಿ ಶಾಸಕ ಎಸ್.ಎನ್ ನಾರಾಯಣಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿ ₹2ಕೋಟಿ ಪರಿಹಾರಕ್ಕೆ ನೋಟಿಸ್ ಕಳುಹಿಸಿದ್ದಾರೆ. ಇದು ಹಾಲಿ ಮತ್ತು ಮಾಜಿ ಶಾಸಕರಿಗೆ ಬಿಟ್ಟ ವಿಚಾರವಾಗಿದೆ. ಆದರೆ, ಶಾಸಕರು ಹಾಗೂ ಅವರ ಅನುಯಾಯಿಗಳು ಬಿಜೆಪಿ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಖಂಡಿಸಿದರು.
ಬೂದಿಕೋಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ವಿ.ನಾಗರಾಜ್ ಮತ್ತು ಇತರ ಮುಖಂಡರು ಸಂಸದ ಎಸ್.ಮುನಿಸ್ವಾಮಿ ಮತ್ತು ಮುಖಂಡ ಕೆ.ಚಂದ್ರಾರೆಡ್ಡಿ ಬಗ್ಗೆ ಹಗುರವಾಗಿ ಮಾತನಾಡಿರುವುದು ಖಂಡನೀಯ. ಬಿಜೆಪಿ ಬಗ್ಗೆ ಮಾತನಾಡುವ ಕೆ.ವಿ.ನಾಗರಾಜ್, ಬೂದಿಕೋಟೆ ಜಿ.ಪಂ ಕ್ಷೇತ್ರದಲ್ಲಿ ಕಾಂಗ್ರೆಸ್ಗೆ ಹೆಚ್ಚಿನ ಮತಗಳಿಸಲು ಆಗದವರು ಮತ್ತೊಂದು ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ತಿರುಗೇಟು ನೀಡಿದರು.
ಮುಖಂಡರಾದ ಶಶಿಕುಮಾರ್,ಬಿ.ಸಿ.ಶ್ರೀನಿವಾಸಮೂರ್ತಿ, ಬಜರಂಗದಳ ಬಿ.ಪಿ.ಮಹೇಶ್,ಬಿಂದು ಮಾಧವ, ಗ್ರಾಪಂ ಸದಸ್ಯ ಪ್ರಸನ್ನ, ಅಮರೇಶ್, ಕರವೇ ಚಲಪತಿ, ಆರ್.ಪಿ.ಮಂಜನಾಥ್, ನರಸಾರೆಡ್ಡಿ,ವಿನೋದ್, ನಾಗೇಂದ್ರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.