ಕೋಲಾರ: ‘ಮಹಿಳೆಯರು ಕುಟುಂಬ ನಿರ್ವಹಣೆಗೆ ಮಾತ್ರ ಸೀಮಿತವಾಗದೆ, ಆರ್ಥಿಕವಾಗಿ ಸಬಲರಾಗಬೇಕು’ ಎಂದು ಎಸ್ಡಿಸಿ ವಿದ್ಯಾಸಂಸ್ಥೆಯ ಅಧ್ಯಕ್ಷೆ ಉಷಾ ಗಂಗಾಧರ್ ಸಲಹೆ ನೀಡಿದರು.
ನಗರದ ಕರ್ನಾಟಕ ಗ್ರಾಮೀಣ ಬ್ಯಾಂಕಿನ ಪ್ರಾದೇಶಿಕ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಸಾಧನೆ ಮಾಡಿದ್ದಾರೆ. ಗ್ರಾಮೀಣ ಪ್ರದೇಶದ ಮಹಿಳೆಯರು ಕೀಳರಿಮೆ ಬಿಟ್ಟು ಎಲ್ಲ ಕ್ಷೇತ್ರಗಳಲ್ಲೂ ಬೆಳೆಯಬೇಕು’ ಎಂದು ಹೇಳಿದರು.
‘ಹೆಣ್ಣು ಸಮಾಜದಲ್ಲಿ ಗುರುತಿಸಿಕೊಳ್ಳಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ. ಮಹಿಳೆಯರು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬೇಕು. ಸಮಾಜವು ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ ಬಾರದಂತೆ ನೋಡಿಕೊಳ್ಳಬೇಕು’ ಎಂದರು.
ವಿಜ್ಞಾನ ಪರಿಷತ್ ರಾಜ್ಯ ಘಟಕದ ಕಾರ್ಯದರ್ಶಿ ಮಂಜುಳಾ ಭೀಮರಾವ್ ಮಾತನಾಡಿ, ‘ಹೆಣ್ಣು ಮಕ್ಕಳು ವಿದ್ಯಾವಂತರಾದರೆ , ಲಿಂಗತಾರತಮ್ಯ ನಿವಾರಣೆ ಸಾಧ್ಯ’ ಎಂದು ತಿಳಿಸಿದರು.
‘ಪ್ರತಿ ಕ್ಷೇತ್ರದಲ್ಲೂ ಸಾಧಕ ಮಹಿಳೆಯರು ಇದ್ದಾರೆ, ಅವರನ್ನು ಸ್ಪೂರ್ತಿಯಾಗಿಸಿಕೊಂಡು ಗುರಿ ಸಾಧನೆಗೆ ನೀವು ಮುಂದಾಗಬೇಕು. ಬ್ಯಾಂಕಿನಲ್ಲಿ ಪಡೆದುಕೊಂಡ ಸಾಲವನ್ನು ಸದುದ್ದೇಶಕ್ಕೆ ಬಳಕೆ ಮಾಡಿಕೊಂಡರೆ ಆರ್ಥಿಕವಾಗಿ ಸಬಲರಾಗಲು ಸಹಕಾರಿಯಾಗುತ್ತದೆ, ಜತೆಗೆ ಸಾಲ ಮರುಪಾವತಿ ಮಾಡಬಹುದು’ ಎಂದು ಹೇಳಿದರು.
ಬ್ಯಾಂಕಿನ ಪ್ರಾದೇಶಿಕ ವ್ಯವಸ್ಥಾಪಕ ವಿ.ನಾಗರಾಜ್ ಮಾತನಾಡಿ, ‘ಗ್ರಾಮೀಣ ಭಾಗದ ಮಹಿಳೆಯರ ಸಬಲಿಕರಣಕ್ಕೆ ಬ್ಯಾಂಕ್ ಒತ್ತು ನೀಡಿದ್ದು, ದೊರೆಯುವ ಸೌಕರ್ಯಗಳ ಪ್ರಯೋಜನೆ ಪಡೆದುಕೊಳ್ಳಲು ಮುಂದಾಗಬೇಕು’ ಎಂದು ಕೋರಿದರು.
‘ಬ್ಯಾಂಕ್ಗಳು ಆರ್ಥಿಕ ಲಾಭಗಳಿಸಲು ಮಹಿಳೆಯರ ಪಾತ್ರವಹಿಸಿದ್ದಾರೆ. ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳನ್ನು ಅನುಷ್ಟಾನಗೊಳಿಸಲು ಅರ್ಹರಿಗೆ ಸಾಲ ವಿವರಿಸಲಾಗುತ್ತಿದ್ದು, ಆದಾಯೋತ್ಪನ್ನ ಚಟುವಟಿಕೆ ಕೈಗೊಂಡು ಇತರರಿಗೂ ಉದ್ಯೋಗ ಕಲ್ಪಿಸಬೇಕು’ ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಮಹಿಳಾ ಸ್ವ ಸಹಾಯ ಸಂಘಗಳಿಗೆ ಸಾಲ ಹಾಗೂ ಜಂಟಿ ಹೊಣೆಗಾರಿಕೆ ಸಾಲ ವಿತರಿಸಲಾಯಿತು. ಸಕಾಲದಲ್ಲಿ ಸಾಲ ಮರುಪಾವತಿ ಮಾಡಿದ ಮಹಿಳೆಯನ್ನು ಅಭಿನಂದಿಸಲಾಯಿತು.
ಹಿರಿಯ ವ್ಯಸ್ಥಾಪಕ ಸುರೇಶ್, ವ್ಯವಸ್ಥಾಪಕ ಶ್ರೀನಿವಾಸಗೌಡ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.