ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಂಟೆ ಪುನಶ್ಚೇತನಕ್ಕೆ ₹ 7.50 ಲಕ್ಷ ನೆರವು: ಶಾಸಕ ಕೆ.ಶ್ರೀನಿವಾಸಗೌಡ

Last Updated 15 ಜನವರಿ 2021, 14:52 IST
ಅಕ್ಷರ ಗಾತ್ರ

ಕೋಲಾರ: ‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆಯು ಜನಪರವಾಗಿ ಕೆಲಸ ಮಾಡುತ್ತಿದೆ’ ಎಂದು ಶಾಸಕ ಕೆ.ಶ್ರೀನಿವಾಸಗೌಡ ಮೆಚ್ಚುಗೆ ವ್ಯಕ್ತಪಡಿಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ತಾಲ್ಲೂಕಿನ ಮಾರ್ಜೇನಹಳ್ಳಿ ಗ್ರಾಮದಲ್ಲಿ ಕೈಗೆತ್ತಿಕೊಂಡಿರುವ ಪುರಾತನ ಕುಂಟೆಯ ಹೂಳೆತ್ತುವ ಕಾಮಗಾರಿಗೆ ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ‘ಸಂಸ್ಥೆಯು ನಮ್ಮ ಊರು ನಮ್ಮ ಕೆರೆ ಕಾರ್ಯಕ್ರಮದಡಿ ಜಿಲ್ಲೆಯ ಹಲವು ಕೆರೆಗಳನ್ನು ಪುನಶ್ಚೇತನಗೊಳಿಸಿದೆ. ಮಾರ್ಜೇನಹಳ್ಳಿ ಕುಂಟೆಯ ಹೂಳೆತ್ತಲು ಸಂಸ್ಥೆಯು ₹ 7.50 ಲಕ್ಷ ನೀಡಿದೆ’ ಎಂದರು.

‘ಗ್ರಾಮದ ಜನರನ್ನು ಒಗ್ಗೂಡಿಸಿ ಕೆರೆ ಸಮಿತಿ ರಚನೆ ಮಾಡಿ ಮಂಜೂರಾದ ಹಣವನ್ನು ಕೆರೆ ಕಾಮಗಾರಿಗೆ ಸಮರ್ಪಕವಾಗಿ ಬಳಸುತ್ತಿರುವುದು ಉತ್ತಮ ಬೆಳವಣಿಗೆ. ಕುಂಟೆ ಪುನಶ್ಚೇತನದ ನಂತರ ಗ್ರಾಮಸ್ಥರು ಸ್ವಚ್ಛತೆ ಕಾಪಾಡಿಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.

‘ಜಿಲ್ಲೆಯಲ್ಲಿ ತಾಲ್ಲೂಕಿಗೆ ಒಂದರಂತೆ ಕೆರೆ ಹೂಳೆತ್ತುವ ಕಾಮಗಾರಿ ನಡೆಸಲಾಗುತ್ತಿದೆ. ಮಾರ್ಜೇನಹಳ್ಳಿ ಗ್ರಾಮದ ಕುಂಟೆಯನ್ನು ಮಾದರಿಯಾಗಿಸುವ ಸಂಕಲ್ಪ ಮಾಡಿದ್ದೇವೆ’ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಎಂಜಿನಿಯರ್‌ ಅರುಣ್ ಮಾಹಿತಿ ನೀಡಿದರು.

‘ರಾಜ್ಯದಲ್ಲಿ ಸಂಸ್ಥೆ ವತಿಯಿಂದ ಪುನಶ್ಚೇತನಗೊಳಿಸುತ್ತಿರುವ 243ನೇ ಕುಂಟೆ ಇದಾಗಿದೆ. ನೀರಿನ ಸಮಸ್ಯೆ ಅರಿತು ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಅನುಷ್ಠಾನಗೊಳಿಸಿದ್ದೇವೆ’ ಎಂದು ಸಂಸ್ಥೆಯ ತಾಲ್ಲೂಕು ಯೋಜನಾಧಿಕಾರಿ ಎಸ್‌.ಚಂದ್ರಶೇಖರ್ ವಿವರಿಸಿದರು.

ಗ್ರಾಮ ಪಂಚಾಯಿತಿ ಸದಸ್ಯರಾದ ಹೇಮಾವತಿ, ಗಾಯಿತ್ರಿ, ಕುಂಟೆ ಸಮಿತಿ ಅಧ್ಯಕ್ಷ ರಾಮಚಂದ್ರಗೌಡ, ತಾಲ್ಲೂಕು ಕೃಷಿ ಮೇಲ್ವಿಚಾರಕ ವಿಜಯ್‌ಕುಮಾತ್‌, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯೆ ಗೌರಮ್ಮ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT