ಕೋಲಾರ: ‘ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜನರು ಸ್ವಪ್ರೇರಣೆಯಿಂದ ಕೋವಿಡ್ ಲಸಿಕೆ ಹಾಕಿಸಿಕೊಂಡು ಸೋಂಕು ತಡೆಗೆ ಸಹಕರಿಸಬೇಕು’ ಎಂದು ನಗರಸಭೆ ಅಧ್ಯಕ್ಷೆ ಶ್ವೇತಾ ಮನವಿ ಮಾಡಿದರು.
ನಗರದ 2ನೇ ವಾರ್ಡ್ ವ್ಯಾಪ್ತಿಯ ಗಾಂಧಿನಗರದಲ್ಲಿ ಶುಕ್ರವಾರ ಸ್ಯಾನಿಟೈಸರ್ ಸಿಂಪಡಣೆಗೆ ಚಾಲನೆ ನೀಡಿ ಮಾತನಾಡಿ, ‘18 ವರ್ಷ ಮೇಲ್ಪಟ್ಟ ಪ್ರತಿ ವ್ಯಕ್ತಿಯು ಮುನ್ನೆಚ್ಚರಿಕೆ ತಪ್ಪದೇ ಕೋವಿಡ್ ಲಸಿಕೆ ಪಡೆಯಬೇಕು. ಲಸಿಕೆ ಬಗ್ಗೆ ವದಂತಿಗೆ ಕಿವಿಗೊಡಬಾರದು. ಕೋವಿಡ್ ಲಸಿಕೆಯಿಂದ ಆರೋಗ್ಯದ ಮೇಲೆ ಯಾವುದೇ ಅಡ್ಡ ಪರಿಣಾಮ ಆಗುವುದಿಲ್ಲ’ ಎಂದು ಕಿವಿಮಾತು ಹೇಳಿದರು.
‘ಮನೆಯ ಅಕ್ಕಪಕ್ಕ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಅಂತರ ಕಾಯ್ದುಕೊಳ್ಳಬೇಕು. ಕೋವಿಡ್ ಆತಂಕದ ಹಿನ್ನೆಲೆಯಲ್ಲಿ ಹೆಚ್ಚಿನ ಜನಸಂದಣಿ ಇರುವ ಸ್ಥಳಗಳಲ್ಲಿ ಮೊದಲ ಹಂತದಲ್ಲಿ ಸ್ಯಾನಿಟೈಸರ್ ಸಿಂಪಡಿಸಲಾಗುತ್ತಿದೆ. ನಗರದ 35 ವಾರ್ಡ್ಗಳಲ್ಲೂ ಹಂತ ಹಂತವಾಗಿ ಸ್ಯಾನಿಟೈಸರ್ ಸಿಂಪಡಿಸುತ್ತೇವೆ’ ಎಂದರು.
ನಗರಸಭೆ ಉಪಾಧ್ಯಕ್ಷ ಪ್ರವೀಣ್ಗೌಡ, ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಮಂಜುನಾಥ್, ಸದಸ್ಯರಾದ ರಾಕೇಶ್, ಗುಣಶೇಖರ್, ಅರ್ಪೂವ, ಪಾವನಿ ಹಾಜರಿದ್ದರು.