ಕೋಲಾರ: ಜಿಲ್ಲಾ ಸಹಕಾರಿ ಒಕ್ಕೂಟದ ಆಡಳಿತ ಮಂಡಳಿಯ ನಿರ್ದೇಶಕರಾಗಿ ಇ.ಗೋಪಾಲಪ್ಪ ಅವಿರೋಧ ಆಯ್ಕೆಯಾಗಿದ್ದಾರೆ.
ಒಕ್ಕೂಟದ ಆಡಳಿತ ಮಂಡಳಿ ನಿರ್ದೇಶಕ ಆಯ್ಕೆಗೆ ಚುನಾವಣೆ ಘೋಷಣೆಯಾಗಿದ್ದು, ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಕ್ಷೇತ್ರದಿಂದ ಗೋಪಾಲಪ್ಪ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಬಳಿಕ ನಾಮಪತ್ರ ಪರಿಶೀಲನೆ ನಡೆದಿದ್ದು, ಅವರ ಉಮೇದುವಾರಿಕೆ ಪರಿಶೀಲನೆಯಲ್ಲಿ ಸ್ವೀಕೃತಗೊಂಡಿದೆ. ಎದುರಾಳಿಯಾಗಿ ಯಾರೂ ನಾಮಪತ್ರ ಸಲ್ಲಿಸದ ಕಾರಣ ಗೋಪಾಲಪ್ಪ ಅವಿರೋಧ ಆಯ್ಕೆಯಾಗಿದ್ದಾರೆ.
‘ಸಹಕಾರ ಕ್ಷೇತ್ರದಿಂದ ಮಾತ್ರ ರೈತರ ಸಬಲೀಕರಣ ಸಾಧ್ಯ. ಸಹಕಾರ ರಂಗದಲ್ಲಿ ಹೈನೋದ್ಯಮ, ವ್ಯವಸಾಯ ಸೇವಾ ಸಹಕಾರ ಸಂಘಗಳು ಸೇರಿದಂತೆ ಅನೇಕ ಸಹಕಾರ ಸಂಘಗಳು ಕಾರ್ಯ ನಿರ್ವಹಿಸುತ್ತಿವೆ. ಇವುಗಳ ಮೂಲಕ ರೈತರಿಗೆ ದೊರೆಯುವ ಸೌಕರ್ಯಗಳ ಬಗ್ಗೆ ಅರಿವು ಮೂಡಿಸುತ್ತೇನೆ. ಜತೆಗೆ ಫಲಾನುಭವಿಗಳ ಮನೆ ಬಾಗಿಲಿಗೆ ಸೌಕರ್ಯ ತಲುಪಿಸುವ ಕೆಲಸ ಮಾಡುತ್ತೇನೆ’ ಎಂದು ಗೋಪಾಲಪ್ಪ ಭರವಸೆ ನೀಡಿದರು.
‘ರೈತರಿಗೆ ಅತ್ಯಗತ್ಯವಾಗಿ ಬೇಕಿರುವ ರಸಗೊಬ್ಬರ, ಬೆಳೆ ಸಾಲ ಸೌಲಭ್ಯ ಸಹಕಾರ ಸಂಘಗಳಲ್ಲಿ ದೊರೆಯುತ್ತದೆ, ಇತ್ತೀಚಿನ ದಿನಗಳಲ್ಲಿ ಸಂಘಗಳು ಲಾಭದಾಯಕವಾಗಿ ನಡೆಯುತ್ತಿದ್ದು, ರೈತರಿಗೆ ಸೌಕರ್ಯ ಕಲ್ಪಿಸುವ ಪ್ರಯತ್ನ ಮಾಡುತ್ತಿವೆ’ ಎಂದು ಅಭಿಪ್ರಾಯಪಟ್ಟರು.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಗೋವಿಂದಗೌಡ, ನಿರ್ದೇಶಕರಾದ ಕೆ.ವಿ.ದಯಾನಂದ್, ಎಂ.ಎಲ್.ಅನಿಲ್ಕುಮಾರ್, ಸೋಮಣ್ಣ ಹಾಜರಿದ್ದರು.