ಕೋಲಾರ: ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ವೇಣುಗೋಪಾಲ್ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ ನೇತೃತ್ವದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಎನ್ಡಿಎ ಅಭ್ಯರ್ಥಿಯ ಸಮನ್ವಯ ಬೈಠಕ್ ಸಭೆಯನ್ನು ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಡಾ.ವೇಣುಗೋಪಾಲ್ ಮಾತನಾಡಿ, ‘ಕಾರ್ಯಕರ್ತರು ಸಕ್ರಿಯವಾಗಿ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಭ್ಯರ್ಥಿಯ ಗೆಲುವಿಗೆ ಸಹಕಾರ ನೀಡಬೇಕು. ತಾಲ್ಲೂಕುವಾರು ಬಿಜೆಪಿ– ಜೆಡಿಎಸ್ ಪ್ರಮುಖರ ಪಟ್ಟಿಯನ್ನು ಮಾಡಿಕೊಂಡು ಪ್ರಚಾರ ಮಾಡಬೇಕು. ಮತದಾರ ಶಿಕ್ಷಕರನ್ನು ಭೇಟಿ ಮಾಡಿ ಅಭ್ಯರ್ಥಿ ವೈಎ.ನಾರಾಯಣಸ್ವಾಮಿ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವಂತೆ ಮನವರಿಕೆ ಮಾಡಬೇಕು’ ಎಂದರು.
ವೆಂಕಟಶಿವಾರೆಡ್ಡಿ ಮಾತನಾಡಿ, ‘ಮೇ 27ರಂದು ಬೆಳಿಗ್ಗೆ 11 ಗಂಟೆಗೆ ನಗರದ ನಾರಾಯಣಿ ಕಲ್ಯಾಣ ಮಂಟಪದಲ್ಲಿ ಮತದಾರ ಶಿಕ್ಷಕರ ಸಮಾವೇಶ ನಡೆಯಲಿದ್ದು, ರಾಜ್ಯ ಜೆಡಿಎಸ್ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ, ಎನ್.ಡಿ.ಎ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಭಾಗವಹಿಸಲಿದ್ದಾರೆ’ ಎಂದರು.
ಸಂಸದ ಎಸ್.ಮುನಿಸ್ವಾಮಿ, ಜಿಲ್ಲಾ ಸಂಚಾಲಕ ಮಾಗೇರಿ ನಾರಾಯಣಸ್ವಾಮಿ, ಲೋಕಸಭೆಯ ಅಭ್ಯರ್ಥಿ ಮಲ್ಲೇಶ್ ಬಾಬು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಓಂ ಶಕ್ತಿ ಚಲಪತಿ, ಮಹೇಶ್, ಹರಿಬಾಬು ಇದ್ದರು.