ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ ಜಿಲ್ಲೆಯ ರೇಷ್ಮೆಗೂಡಿಗೆ ಹೆಚ್ಚಿನ ಬೇಡಿಕೆ

ತರಬೇತಿ ಕಾರ್ಯಾಗಾರದಲ್ಲಿ ರೇಷ್ಮೆ ಇಲಾಖೆ ಉಪ ನಿರ್ದೇಶಕ ಪ್ರಭಾಕರ್‌ ಹೇಳಿಕೆ
Last Updated 24 ಜನವರಿ 2020, 12:33 IST
ಅಕ್ಷರ ಗಾತ್ರ

ಕೋಲಾರ: ‘ಚೀನಾ ರೇಷ್ಮೆ ಆಮದು ತಡೆ ಜತೆಗೆ ಕಡಿಮೆ ವೆಚ್ಚದಲ್ಲಿ ಹೆಚ್ಚು ಲಾಭದಾಯಕವಾಗಿ ರೇಷ್ಮೆ ಕೃಷಿ ನಿರ್ವಹಣೆ ಮಾಡಲು ರೈತರು ತಾಂತ್ರಿಕ ಅರಿವು ಪಡೆಯಬೇಕು’ ಎಂದು ರೇಷ್ಮೆ ಇಲಾಖೆ ಉಪ ನಿರ್ದೇಶಕ ಎಂ.ಕೆ.ಪ್ರಭಾಕರ್‌ ಕಿವಿಮಾತು ಹೇಳಿದರು.

ರೇಷ್ಮೆ ಇಲಾಖೆಯು ‘ಹಿಪ್ಪುನೇರಳೆ ಬೇಸಾಯ ಮತ್ತು ದ್ವಿತಳಿ ರೇಷ್ಮೆ ಹುಳು ಸಾಕಾಣಿಕೆಯಲ್ಲಿ ಸುಧಾರಿತ ತಾಂತ್ರಿಕತೆ’ ಕುರಿತು ತಾಲ್ಲೂಕಿನ ದಿನ್ನೆಹೊಸಹಳ್ಳಿಯಲ್ಲಿ ರೈತರಿಗೆ ಶುಕ್ರವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

‘ರೈತರು ಗುಣಮಟ್ಟದ ರೇಷ್ಮೆಗೂಡು ಉತ್ಪಾದಿಸಿದರೆ ಚೀನಾ ರೇಷ್ಮೆ ಆಮದು ನಿಲ್ಲುತ್ತದೆ. ನೂಲು ಬಿಚ್ಚಾಣಿಕೆದಾರರು ಗುಣಮಟ್ಟದ ಕೊರತೆಯ ನೆಪ ಮಾಡಿಕೊಂಡು ಚೀನಾ ರೇಷ್ಮೆಗೆ ಬೇಡಿಕೆಯೊಡ್ಡುತ್ತಾರೆ. ಸರ್ಕಾರ ವಿದೇಶಿ ರೇಷ್ಮೆ ಆಮದು ಸುಂಕ ಹೆಚ್ಚಿಸಬೇಕು. ದೇಶದ ರೈತರು ಗುಣಮಟ್ಟದ ರೇಷ್ಮೆ ಉತ್ಪಾದಿಸಿದರೆ ನೂಲು ಬಿಚ್ಚಾಣಿಕೆದಾರರು ಸ್ವದೇಶಿ ನೂಲು ಖರೀದಿಸುತ್ತಾರೆ’ ಎಂದರು.

‘ರೇಷ್ಮೆ ಉತ್ಪಾದನೆಯಲ್ಲಿ ದೇಶವು ಜಾಗತಿಕವಾಗಿ 2ನೇ ಸ್ಥಾನದಲ್ಲಿದೆ. ಚೀನಾ ಮೊದಲ ಸ್ಥಾನದಲ್ಲಿದೆ. ಜಿಲ್ಲೆಯ ರೇಷ್ಮೆಗೂಡಿಗೆ ಹೆಚ್ಚಿನ ಬೇಡಿಕೆಯಿದೆ. ರೇಷ್ಮೆ ಇಲಾಖೆಯಲ್ಲಿ ಹಲವು ಯೋಜನೆಗಳಿದ್ದು, ರೈತರು ಇವುಗಳನ್ನು ಸದ್ಬಳಕೆ ಮಾಡಿಕೊಂಡು ಗುಣಮಟ್ಟದ ಹಿಪ್ಪುನೇರಳೆ ಬೆಳೆಯಬೇಕು. ವಿದೇಶಿ ಪೈಪೋಟಿಗೆ ಅನುಗುಣವಾಗಿ ಕೃಷಿಯಲ್ಲಿ ತಾಂತ್ರಿಕತೆ ಅಳವಡಿಸಿಕೊಂಡು ದ್ವಿತಳಿ ರೇಷ್ಮೆಗೂಡು ಉತ್ಪಾದಿಸಬೇಕು’ ಎಂದು ಸಲಹೆ ನೀಡಿದರು.

ರಾಜ್ಯದಲ್ಲೇ ಪ್ರಥಮ: ‘ಚೀನಾ ರೇಷ್ಮೆ ಆಮದಿನಿಂದ ದೇಶದ ರೇಷ್ಮೆ ಬೆಳೆಗಾರರು ಹಾಗೂ ನೂಲು ಬಿಚ್ಚಾಣಿಕೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ವೈಜ್ಞಾನಿಕ ಕೃಷಿ ಪದ್ಧತಿ ಅನುಸರಿಸಿದರೆ ಕಡಿಮೆ ಖರ್ಚಿನಲ್ಲಿ ಹೆಚ್ಚು ಇಳುವರಿ ಪಡೆಯಬಹುದು. ರೇಷ್ಮೆ ಇಲಾಖೆಯು ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಅತಿ ಹೆಚ್ಚು ಮಾನವ ದಿನ ಸೃಜಿಸಿದೆ. ಹಿಪ್ಪುನೇರಳೆ ಬೇಸಾಯ ಅಭಿವೃದ್ಧಿಪಡಿಸಿ ರಾಜ್ಯದಲ್ಲೇ ಪ್ರಥಮ ಸ್ಥಾನಕ್ಕೇರಿದೆ’ ಎಂದು ಸಂತಸ ವ್ಯಕ್ತಪಡಿಸಿದರು.

‘ಜಿಲ್ಲೆಯಲ್ಲಿ ರೇಷ್ಮೆ ಕೃಷಿಗೆ ಉತ್ತಮ ಭವಿಷ್ಯವಿದೆ. ದ್ವಿತಳಿ ಮತ್ತು ಹೈಬ್ರೀಡ್‌ ರೇಷ್ಮೆ ಹುಳು ತಳಿ ಬಳಸಿಕೊಂಡು ಗುಣಮಟ್ಟದ ರೇಷ್ಮೆಗೂಡು ಉತ್ಪಾದಿಸಬೇಕು. ಭವಿಷ್ಯದಲ್ಲಿ ಭಾರತದ ರೇಷ್ಮೆಗೆ ಬೇಡಿಕೆ ಹೆಚ್ಚಲಿದೆ. ರೈತರು ನರೇಗಾದಡಿ ಹಿಪ್ಪುನೇರಳೆ ತೋಟದ ಅಭಿವೃದ್ಧಿಗೆ ಹೆಚ್ಚು ಒತ್ತು ಕೊಡಬೇಕು. ಗುಣಮಟ್ಟದ ಹಿಪ್ಪುನೇರಳೆ ಬೆಳೆಯಲು ಗಮನ ಹರಿಸಬೇಕು’ ಎಂದು ತಿಳಿಸಿದರು.

ಮಣ್ಣು ಪರೀಕ್ಷೆ: ‘ಜಿಲ್ಲೆಯ ರೈತರು ತಂತ್ರಜ್ಞಾನ ಅಳವಡಿಕೆಯಲ್ಲಿ ಮುಂದಿದ್ದಾರೆ. ಹಿಪ್ಪುನೇರಳೆಯು ಬಹುವಾರ್ಷಿಕ ಬೆಳೆಯಾಗಿದೆ. ಮಣ್ಣಿನ ಫಲವತ್ತತೆ ಕಾಪಾಡಲು ಆಗಾಗ್ಗೆ ಮಣ್ಣು ಪರೀಕ್ಷೆ ಮಾಡಿಸಬೇಕು. ಪೋಷಕಾಂಶ ನಿರ್ವಹಣೆಯಲ್ಲಿ ಮಣ್ಣು ಪರೀಕ್ಷೆ ಪ್ರಮುಖ ಪಾತ್ರ ವಹಿಸುತ್ತದೆ. ಸುಣ್ಣಕಟ್ಟು ರೋಗ ಮತ್ತು ಎಲೆ ಸುರುಳಿ ರೋಗ ನಿಯಂತ್ರಿಸಿದರೆ ಹೆಚ್ಚು ಇಳುವರಿ ಪಡೆಯಬಹುದು’ ಎಂದು ಕೇಂದ್ರ ರೇಷ್ಮೆ ಮಂಡಳಿ ವಿಜ್ಞಾನಿಗಳಾದ ಮೋರಿಸನ್ ವಿವರಿಸಿದರು.

‘ಗುಣಮಟ್ಟದ ಹಿಪ್ಪುನೇರಳೆ ಸೊಪ್ಪು ಬೆಳೆಯುವ ಜತೆಗೆ ಸೋಂಕು ನಿವಾರಣೆಗೆ ಆದ್ಯತೆ ನೀಡಬೇಕು. ರೋಗ ಸುಳಿಯದಂತೆ ರೇಷ್ಮೆ ಹುಳು ಸಾಕಾಣಿಕೆ ಮನೆಯಲ್ಲಿ ನಿಗದಿತ ರೀತಿಯಲ್ಲಿ ಉಷ್ಣಾಂಶ ಹಾಗೂ ತೇವಾಂಶ ಕಾಪಾಡಬೇಕು. ಚಳಿಗಾಲದಲ್ಲಿ ಹುಳು ಸಾಕಾಣಿಕೆ ಮನೆಯಲ್ಲಿ ಉಷ್ಣಾಂಶ ಹೆಚ್ಚಿಸಲು ಆಧುನಿಕ ಸಲಕರಣೆ ಬಳಸಬೇಕು’ ಎಂದು ಮಾಹಿತಿ ನೀಡಿದರು.

ಕೇಂದ್ರ ರೇಷ್ಮೆ ಮಂಡಳಿ ವಿಜ್ಞಾನಿ ಅನಿಲ್‌ಕುಮಾರ್, ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಎಂ.ಮಂಜುನಾಥ್‌, ವಿಸ್ತರಣಾಧಿಕಾರಿಗಳಾದ ಎಸ್.ಪಿ.ಜಯಶಂಕರ್, ಎಸ್.ಕೆ.ಶ್ರೀಧರ್, ಎಂ.ಎಸ್.ಕಲ್ಯಾಣಸ್ವಾಮಿ, ಎನ್.ಚಂದ್ರಶೇಖರಗೌಡ, ಪ್ರಗತಿಪರ ರೇಷ್ಮೆ ಬೆಳೆಗಾರರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT