ಕೋಲಾರ: ‘ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಸ್ಪಂದಿಸುತ್ತೇನೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ನೂತನ ಉಪ ನಿರ್ದೇಶಕ (ಡಿಡಿಪಿಐ) ಕೃಷ್ಣಮೂರ್ತಿ ಭರವಸೆ ನೀಡಿದರು.
ಇಲ್ಲಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ನಂತರ ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಸಂಘದ ಸದಸ್ಯರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿ, ‘ಶಿಕ್ಷಕರು ಸಂತಸವಾಗಿದ್ದರೆ ಮಕ್ಕಳು ಖುಷಿ ಆಗಿರುತ್ತಾರೆ. ಅಂತಹ ಶಾಲೆಗಳು ಕಂಗೊಳಿಸುತ್ತವೆ. ಶೈಕ್ಷಣಿಕ ಚಟುವಟಿಕೆಗಳು ಉಲ್ಲಾಸಭರಿತವಾಗಿ ನಡೆಯುತ್ತವೆ’ ಎಂದರು.
‘ತಾಲ್ಲೂಕು ಹಂತದಲ್ಲಿ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಜವಾಬ್ದಾರಿಯನ್ನು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೀಡಲಾಗಿದೆ. ಬಿಇಒಗಳು ಶಿಕ್ಷಕರ ನೆರವಿಗೆ ಧಾವಿಸಬೇಕು. ಈ ನಿಟ್ಟಿನಲ್ಲಿ ಬಿಇಒಗಳಿಗೆ ಮಾರ್ಗದರ್ಶನ ನೀಡಿ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ’ ಎಂದು ತಿಳಿಸಿದರು.
‘ಜಿಲ್ಲೆಯನ್ನು ಶೈಕ್ಷಣಿಕವಾಗಿ ಪ್ರಗತಿ ಪಥದಲ್ಲಿ ಕೊಂಡೊಯ್ಯಲು ಶಿಕ್ಷಕರು ಸಹಕಾರ ನೀಡಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ನೆರವಾಗಬೇಕು. ಶಿಕ್ಷಕರು ಸದಾ ಚಟುವಟಿಕೆಯಿಂದ ಇದ್ದರೆ ಮಾತ್ರ ಮಕ್ಕಳ ಶೈಕ್ಷಣಿಕ ಪ್ರಗತಿ ಸಾಧ್ಯ. ಶಿಕ್ಷಕರು ಶಾಲೆ ಮತ್ತು ಮಕ್ಕಳ ಅಭಿವೃದ್ಧಿಗೆ ಕಾರಣರಾಗಬೇಕು’ ಎಂದು ಕಿವಿಮಾತು ಹೇಳಿದರು.
‘ಅಧಿಕಾರಿಗಳು ಶಿಕ್ಷಕರನ್ನು ಗೌರವಿಸಬೇಕು. ಕಾಲಕಾಲಕ್ಕೆ ಉದ್ಭವಿಸುವ ಸಮಸ್ಯೆಗಳಿಗೆ ಸ್ಪಂದಿಸಿದರೆ ಶಿಕ್ಷಕರು ಸಂತಸಪಡುತ್ತಾರೆ. ಜಿಲ್ಲಾ ಕೇಂದ್ರದಲ್ಲಿ ಶಿಕ್ಷಕರ ಭವನ ನಿರ್ಮಾಣ ಆಗಬೇಕು’ ಎಂದು ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಜಿ.ಶ್ರೀನಿವಾಸ್ ಮನವಿ ಮಾಡಿದರು.
ಶಿಕ್ಷಣ ಸಂಯೋಜಕ ಆರ್.ಶ್ರೀನಿವಾಸನ್, ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಪದಾಧಿಕಾರಿಗಳಾದ ಬಿ.ಶ್ರೀನಿವಾಸ್, ಕೆ.ಶ್ರೀನಿವಾಸ್, ರಾಮಚಂದ್ರಪ್ಪ, ಭಾಗ್ಯಲಕ್ಷ್ಮಿ, ಪರ್ವೀನ್ ಬೇಗಮ್, ವೆಂಕಟೇಶ್, ಜಗನ್ನಾಥ್ ಹಾಜರಿದ್ದರು.