ಕೋಲಾರ: ‘ಜಿಲ್ಲೆಯ ಮಾಲೂರು ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಜ.9ರಂದು ಆಸ್ಪತ್ರೆಯ ಎದುರು ಧರಣಿ ಹಮ್ಮಿಕೊಳ್ಳಲಾಗಿದೆ’ ಎಂದು ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ತಿಳಿಸಿದರು.
ನಗರದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಭಾನುವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ‘ಆಸ್ಪತ್ರೆಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆ ದೊರೆಯುತ್ತಿದ್ದರು, ಸೌಕರ್ಯಗಳ ಕೊರತೆಯಿಂದ ರೋಗಿಗಳು ಆಸ್ಪತ್ರೆಗೆ ಬರಲು ಹಿಂಜರಿಯುತ್ತಿದ್ದಾರೆ’ ಎಂದರು.
‘ತಾಲ್ಲೂಕು ಸರ್ಕಾರಿ ಆಸ್ಪತ್ರೆ ನಿರ್ವಹಣೆ ಅಸರ್ಪಕವಾಗಿದ್ದು ಆಸ್ಪತ್ರೆಗೆ ಬರುವ ವಾಹನಗಳಿಂದ ಖಾಸಗಿ ವಾಹನಗಳ ಹೆಚ್ಚಾಗಿ ನಿಂತಿರುತ್ತವೆ. ಮಾಲೂರಿನಿಂದ ಬೆಂಗಳೂರಿಗೆ ಕೆಲಸಕ್ಕೆ ಹೋಗುವವರು ಬೆಳಿಗ್ಗೆ ಇಲ್ಲಿ ನಿಲ್ಲಿಸಿ ಹೋದರೆ ರಾತ್ರಿಗೆ ಬಂದು ತೆಗೆದುಕೊಂಡು ಹೋಗುತ್ತಾರೆ. ಈ ಆಸ್ಪತ್ರೆ ಆವರಣ ವಾಹನ ನಿಲುಗಡೆಯಾಗಿ ಮಾರ್ಪಟ್ಟಿದೆ’ ಎಂದು ದೂರಿದರು.
‘ಆರೋಗ್ಯ ಇಲಾಖೆ ಅಧಿಕಾರಿಗಳ ಸೇವೆ ನಾಲ್ಕು ಗೋಡೆ ಮಧ್ಯಕ್ಕೆ ಸಿಮೀತವಾಗಿದೆ. ವೈದ್ಯರು ನಿಗದಿ ಸಮಯಕ್ಕೆ ಬರುವುದಿಲ್ಲ. ರೋಗಗಿಗಳು ಬೆಳಿಗ್ಗೆ ಬಂದರೆ ಮಧ್ಯಾಹ್ನತನಕ ಕಾತು ಬೇರೆ ಕಡೆ ಹೋಗುತ್ತಾರೆ. ಇಲ್ಲಿನ ವ್ಯವಸ್ಥೆಯನ್ನು ಸರಿಪಡಿಸಲು ಹೋರಾಟ ನಡೆಸಬೇಕಾದ ಅಗತ್ಯವಿದೆ’ ಎಂದು ಹೇಳಿದರು.
ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟೇಶ್ ಮಾತನಾಡಿ, ‘ಆಸ್ಪತ್ರೆಯಲ್ಲಿ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ತಾಲ್ಲೂಕು ವೈದ್ಯಾಧಿಕಾರಿಗಳಿಗೆ ಹಲವು ಭಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ’ ಎಂದು ದೂರಿದರು.
‘ಆಸ್ಪತ್ರೆಯ ವಿರುದ್ಧ ಹಮ್ಮಿಕೊಂಡಿರುವ ಧರಣಿಯಲ್ಲಿ ರೈತರು, ಕಾರ್ಮಿಕರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು’ ಎಂದು ಮನವಿ ಮಾಡಿದರು.
ಸಂಘ ಜಿಲ್ಲಾ ಘಟಕದ ಸಂಚಾಲಕ ಕೆ.ಶ್ರೀನಿವಾಸಗೌಡ, ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್, ಪದಾಧಿಕಾರಿಗಳಾದ ರಾಜು, ಹರೀಶ್, ರಾಮಸ್ವಾಮಿ, ಹನುಮಯ್ಯ, ವೆಂಕಟೇಶಪ್ಪ, ನಾಗೇಶ್, ತಿಮ್ಮಣ್ಣ, ಶ್ರೀನಿವಾಸರೆಡ್ಡಿ, ಗೋಪಾಲಗೌಡ, ನಾರಾಯಣಪ್ಪ, ಆಂಜಿನಪ್ಪ, ರಾಜಣ್ಣ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.