ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ನಾಗಾಲೋಟ ಮುಂದುವರಿದಿದ್ದು, ಹೊಸದಾಗಿ 828 ಮಂದಿ ಸೋಂಕು ಹರಡಿರುವುದು ಶುಕ್ರವಾರ ದೃಢಪಟ್ಟಿದೆ. ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 4,309ಕ್ಕೆ ಏರಿಕೆಯಾಗಿದೆ.
ಕೋಲಾರ ತಾಲ್ಲೂಕಿನ 312 ಮಂದಿಗೆ, ಮಾಲೂರು ತಾಲ್ಲೂಕಿನ 86 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 170 ಮಂದಿಗೆ, ಕೆಜಿಎಫ್ ತಾಲ್ಲೂಕಿನ 118 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 64 ಮಂದಿಗೆ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 78 ಮಂದಿಗೆ ಸೋಂಕು ತಗುಲಿದೆ.
ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ. 4ಕ್ಕಿಂತ ಹೆಚ್ಚು ಸೋಂಕಿತರಿರುವ ಗ್ರಾಮ ಹಾಗೂ ಬಡಾವಣೆಗಳನ್ನು ಆರೋಗ್ಯ ಇಲಾಖೆಯು ಸೀಲ್ಡೌನ್ ಮಾಡಿದೆ.
ಜಿಲ್ಲೆಯ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 663 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 339 ಮಂದಿ, ಮಾಲೂರು ತಾಲ್ಲೂಕಿನ 157, ಬಂಗಾರಪೇಟೆ ತಾಲ್ಲೂಕಿನ 67, ಕೆಜಿಎಫ್ ತಾಲ್ಲೂಕಿನ 25, ಮುಳಬಾಗಿಲು ತಾಲ್ಲೂಕಿನ 40 ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 35 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.
ಗರುಡಪಾಳ್ಯ ಸೀಲ್ಡೌನ್: ಕೋಲಾರ ತಾಲ್ಲೂಕಿನ ಗರುಡಪಾಳ್ಯ ಗ್ರಾಮದಲ್ಲಿ 30 ಮಂದಿಗೆ ಕೊರೊನಾ ಸೋಂಕು ಹರಡಿರುವುದು ದೃಢಪಟ್ಟಿದ್ದು, ಗ್ರಾಮವನ್ನು ಕಂಟೈನ್ಮೆಂಟ್ ವಲಯವಾಗಿ ಘೋಷಿಸಲಾಗಿದೆ. ಗ್ರಾಮದ ಕೆಲವರಿಗೆ ಕೆಲ ದಿನಗಳ ಸೋಂಕು ತಗುಲಿರುವುದು ಗೊತ್ತಾಗಿತ್ತು. ಆ ಸೋಂಕಿತರ ಸಂಪರ್ಕದಿಂದ ಕುಟುಂಬ ಸದಸ್ಯರು ಹಾಗೂ ಗ್ರಾಮಸ್ಥರಿಗೆ ಸೋಂಕು ಹರಡಿದೆ.
ಹೀಗಾಗಿ ಅಣ್ಣಿಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಗರುಡಪಾಳ್ಯ ಗ್ರಾಮದೆಲ್ಲೆಡೆ ಶುಕ್ರವಾರ ಕೊರೊನಾ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಅಣ್ಣಿಹಳ್ಳಿ ಗ್ರಾ.ಪಂ ಅಧ್ಯಕ್ಷ ಎನ್.ಮಂಜುನಾಥಗೌಡ ಅವರು ಗ್ರಾಮಸ್ಥರಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಿಸಿದರು.
‘ಈ ಹಿಂದೆ ನಗರ ಪ್ರದೇಶಕ್ಕೆ ಸೀಮಿತವಾಗಿದ್ದ ಕೊರೊನಾ ಸೋಂಕು ಇದೀಗ ಹಳ್ಳಿ ಹಳ್ಳಿಗೂ ವ್ಯಾಪಿಸುತ್ತಿದೆ. ಹೀಗಾಗಿ ಗ್ರಾಮಸ್ಥರು ಎಚ್ಚರಿಕೆಯಿಂದ ಇರಬೇಕು. ಬೆಂಗಳೂರು ಸೇರಿದಂತೆ ಹೊರಗಿನಿಂದ ಗ್ರಾಮಕ್ಕೆ ಬಂದವರನ್ನು ಪತ್ತೆ ಹಚ್ಚಿ ಕೋವಿಡ್ ಪರೀಕ್ಷೆ ಮಾಡಿಸಬೇಕು’ ಎಂದು ಮಂಜುನಾಥಗೌಡ ಸಲಹೆ ನೀಡಿದರು.
‘ಗರುಡಪಾಳ್ಯ ಗ್ರಾಮದಲ್ಲಿ ಹೆಚ್ಚಿನ ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕು ಹರಡುವಿಕೆ ತಡೆಗೆ ಗ್ರಾ.ಪಂ ವತಿಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಪ್ರತಿನಿತ್ಯ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ವರದಿ ಪಡೆಯಲಾಗುತ್ತಿದೆ. ಗ್ರಾಮವನ್ನು ಕಂಟೈನ್ಮೆಂಟ್ ವಲಯವಾಗಿ ಮಾಡಿರುವುದರಿಂದ ಗ್ರಾಮಸ್ಥರು ಅನಗತ್ಯವಾಗಿ ಮನೆಯಿಂದ ಹೊರ ಬಂದು ಓಡಾಡುವುದನ್ನು ನಿಲ್ಲಿಸಬೇಕು’ ಎಂದು ಕೋರಿದರು.
ಮಾರ್ಗಸೂಚಿ ಪಾಲಿಸಿ: ‘ಗ್ರಾಮದಲ್ಲಿ ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಬೇಕು. ಇಲ್ಲವಾದರೆ ಮತ್ತಷ್ಟು ಜನರಿಗೆ ಸೋಂಕು ತಗುಲಿ ಪರಿಸ್ಥಿತಿ ಗಂಭೀರವಾಗುತ್ತದೆ. ಕೋವಿಡ್ ವಿಚಾರದಲ್ಲಿ ನಿರ್ಲಕ್ಷ್ಯ ಬೇಡ. ಗ್ರಾಮಸ್ಥರು ಜವಾಬ್ದಾರಿಯುತವಾಗಿ ವರ್ತಿಸಬೇಕು’ ಎಂದು ಮನವಿ ಮಾಡಿದರು.
ಗ್ರಾ.ಪಂ ಆರ್ಥಿಕ ಲೆಕ್ಕ ಪರಿಶೋಧನಾ ಸಮಿತಿ ಉಪಾಧ್ಯಕ್ಷ ಕೆ.ಎಂ.ಸಂಪತ್ಕುಮಾರ್, ಸದಸ್ಯರಾದ ಎಂ.ಗಾಯತ್ರಿ, ನಾಗಮಣಿ, ಪಿಡಿಒ ಸವಿತಾ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.