ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕು ಹೆಚ್ಚಳ: 3 ತಾಲ್ಲೂಕಿನಲ್ಲಿ ಕಠಿಣ ಲಾಕ್‌ಡೌನ್‌

ರೂಪುರೇಷೆ ಸಿದ್ಧಪಡಿಸುತ್ತೇವೆ: ಜಿಲ್ಲಾ ಉಸ್ತುವಾರಿ ಸಚಿವ ಅರವಿಂದ ಲಿಂಬಾವಳಿ ಹೇಳಿಕೆ
Last Updated 18 ಮೇ 2021, 12:07 IST
ಅಕ್ಷರ ಗಾತ್ರ

ಕೋಲಾರ: ‘ಜಿಲ್ಲೆಯ ಕೋಲಾರ, ಮಾಲೂರು ಹಾಗೂ ಕೆಜಿಎಫ್ ತಾಲ್ಲೂಕಿನಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಿದ್ದು, ಈ ತಾಲ್ಲೂಕುಗಳಲ್ಲಿ ಲಾಕ್‌ಡೌನ್‌ ಮತ್ತಷ್ಟು ಕಠಿಣಗೊಳಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಅರವಿಂದ ಲಿಂಬಾವಳಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಜತೆ ಮಂಗಳವಾರ ನಡೆದ ವಿಡಿಯೋ ಸಂವಾದದ ಬಳಿಕ ಮಾತನಾಡಿ, ‘ಬೇರೆ ತಾಲ್ಲೂಕುಗಳಿಗೆ ಹೋಲಿಸಿದರೆ ಈ 3 ತಾಲ್ಲೂಕುಗಳಲ್ಲಿ ಸೋಂಕು ಹರಡುವಿಕೆ ಹೆಚ್ಚಿದೆ. ಹೀಗಾಗಿ ಈ ತಾಲ್ಲೂಕುಗಳಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಲಾಕ್‌ಡೌನ್‌ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ರೂಪುರೇಷೆ ಸಿದ್ಧಪಡಿಸುತ್ತೇವೆ’ ಎಂದು ತಿಳಿಸಿದರು.

‘ಪ್ರಧಾನಿ ಮೋದಿಯವರು ಪ್ರತಿನಿತ್ಯ 100ಕ್ಕೂ ಹೆಚ್ಚು ಕೊರೊನಾ ಸೋಂಕಿನ ಪ್ರಕರಣ ವರದಿಯಾಗುತ್ತಿರುವ ದೇಶದ ಆಯ್ಧ 463 ಜಿಲ್ಲೆಗಳ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳ ಜತೆ ಚರ್ಚೆ ನಡೆಸಿ ಸೋಂಕು ತಡೆಗೆ ಕೆಲ ನಿರ್ದೇಶನ ನೀಡಿದ್ದಾರೆ. ರಾಜ್ಯದಲ್ಲಿ ಕೋಲಾರ ಸೇರಿದಂತೆ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಪ್ರಧಾನಿ ಸಭೆಯಲ್ಲಿ ಭಾಗಿಯಾಗಿದ್ದರು’ ಎಂದು ವಿವರಿಸಿದರು.

‘ಜಿಲ್ಲೆಯಲ್ಲಿ ಮನೆಗಳಲ್ಲೇ ಕ್ವಾರಂಟೈನ್‌ ಆಗಿರುವ 5 ಸಾವಿರಕ್ಕೂ ಹೆಚ್ಚು ಸೋಂಕಿತರ ಆರೋಗ್ಯದ ಮೇಲೆ ಹೆಚ್ಚಿನ ನಿಗಾ ವಹಿಸಬೇಕು. ಆರೋಗ್ಯ ಇಲಾಖೆ ಸಿಬ್ಬಂದಿಯು ಪ್ರತಿನಿತ್ಯ ಆ ಸೋಂಕಿತರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಬೇಕು. ಪ್ರತಿ ಗ್ರಾಮದಲ್ಲಿ ರಚನೆಯಾಗಿರುವ ಕಾರ್ಯಪಡೆ ಸಮಿತಿಯ ಸಭೆ ನಡೆಸಿ ಆ ಭಾಗದ ಸದಸ್ಯರು, ಗ್ರಾ.ಪಂ ಸಿಬ್ಬಂದಿಯು ಸೋಂಕಿತರ ಬಗ್ಗೆ ಮಾಹಿತಿ ನೀಡಬೇಕು’ ಎಂದು ಸೂಚಿಸಿದರು.

‘ಸೋಂಕಿತರು ಮನೆಗಳಲ್ಲೇ ಇರುತ್ತಾರೋ ಅಥವಾ ಹೊರ ಬಂದು ಓಡಾಡುತ್ತಾರೋ ಎಂಬುದನ್ನು ಪರಿಶೀಲಿಸಬೇಕು. ಮನೆಯಿಂದ ಹೊರಬರುವ ಸೋಂಕಿತರನ್ನು ಕೋವಿಡ್‌ ಆರೈಕೆ ಕೇಂದ್ರಕ್ಕೆ ಸ್ಥಳಾಂತರಿಸಬೇಕು. ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ಕ್ರಮ ಕೈಗೊಳ್ಳುತ್ತೇವೆ’ ಎಂದು ಮಾಹಿತಿ ನೀಡಿದರು.

ಕೇಂದ್ರಕ್ಕೆ ಅನುಮತಿ: ‘ಗ್ರಾಮ ಮಟ್ಟದ ಕಾರ್ಯಪಡೆಗೆ ಪಕ್ಷ ಬೇಧ ಮರೆತು ಸಹಕರಿಸಬೇಕು. ಕೊರೊನಾ ಮುಕ್ತ ಗ್ರಾಮಗಳ ನಿರ್ಮಾಣಕ್ಕೆ ಸಂಕಲ್ಪ ಮಾಡಬೇಕು. ಖಾಸಗಿಯಾಗಿ ಕೋವಿಡ್ ಆರೈಕೆ ಕೇಂದ್ರ ಆರಂಭಿಸುವ ಇಚ್ಛೆಯಿರುವವರಿಗೆ ಸರ್ಕಾರ ಮತ್ತು ಜಿಲ್ಲಾಡಳಿತ ಅನುಮತಿ ನೀಡಲಿದೆ. ಸ್ವಯಂ ಸೇವಾ ಸಂಸ್ಥೆಗಳು, ಆಶ್ರಮ ಸೇರಿದಂತೆ ಯಾರೇ ಮುಂದೆ ಬಂದರೂ ಅನುಮತಿ ಕೊಡುತ್ತೇವೆ. ಜತೆಗೆ ಸಂಘ ಸಂಸ್ಥೆಗಳು ಆರೋಗ್ಯ ಸೇವೆಗೆ ನಿಯೋಜಿಸಿಕೊಳ್ಳುವ ವೈದ್ಯರು, ಸಿಬ್ಬಂದಿಗೆ ಸರ್ಕಾರ ಗೌರವಧನ ನೀಡುತ್ತದೆ’ ಎಂದರು.

‘ಜಿಲ್ಲೆಯಲ್ಲಿ ಕೋವಿಡ್ ಸಂದರ್ಭದಲ್ಲಿ ಸುಮಾರು 30 ಕಂಪನಿಗಳು ಅಗತ್ಯ ವಸ್ತುಗಳ ಸೇವೆಯಡಿ ಕಾರ್ಯ ನಿರ್ವಹಿಸುತ್ತಿವೆ. ಈ ಕಂಪನಿಗಳ ಎಲ್ಲಾ ನೌಕರರಿಗೆ ಕೋವಿಡ್ ಪರೀಕ್ಷೆ ಮಾಡಬೇಕು. ಕಂಪನಿಗಳಲ್ಲಿ ಹೆಚ್ಚಿನ ಮಂದಿಗೆ ಸೋಂಕು ತಗುಲಿದ್ದರೆ ಅಲ್ಲಿಯೇ ಆರೈಕೆ ಕೇಂದ್ರ ಆರಂಭಿಸಬೇಕು’ ಎಂದು ಸೂಚನೆ ನೀಡಿದರು.

‘ಆರ್‍.ಎಲ್‌.ಜಾಲಪ್ಪ ಆಸ್ಪತ್ರೆಯಲ್ಲಿ -8 ಮಂದಿ ಶಿಲೀಂಧ್ರ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಶಿಲೀಂಧ್ರ ಸೋಂಕಿತರ ಚಿಕಿತ್ಸೆಗೆ ಶೀಘ್ರವೇ 30 ಬೆಡ್‌ ಸಾಮರ್ಥ್ಯದ ವಾರ್ಡ್ ಆರಂಭಿಸಲು ಜಾಲಪ್ಪ ಆಸ್ಪತ್ರೆ ಆಡಳಿತ ಮಂಡಳಿ ಒಪ್ಪಿದೆ. ಬಿಪಿಎಲ್ ಪಡಿತರದಾರರಿಗೆ ಉಚಿತವಾಗಿ ಚಿಕಿತ್ಸೆ, ಔಷಧ ಕೊಡುತ್ತೇವೆ. ಆರೋಗ್ಯ ಇಲಾಖೆಯಿಂದ ಔಷಧಗಳ ವ್ಯವಸ್ಥೆ ಮಾಡಬೇಕಿದೆ. ದೇಶದೆಲ್ಲೆಡೆ ಶಿಲೀಂಧ್ರ ಸೋಂಕಿತರ ಚಿಕಿತ್ಸೆಗೆ ಔಷಧಗಳ ಕೊರತೆಯಿದೆ. ಜಿಲ್ಲೆಗೆ ಔಷಧ ಪೂರೈಸಲು ಶಕ್ತಿ ಮೀರಿ ಪ್ರಯತ್ನ ಮಾಡುತ್ತೇವೆ’ ಎಂದು ಭರವಸೆ ನೀಡಿದರು.

ಪರೀಕ್ಷೆ ಹೆಚ್ಚಳ: ‘ಎಸ್‌ಎನ್‌ಆರ್‌ ಜಿಲ್ಲಾ ಆಸ್ಪತ್ರೆಯಲ್ಲಿ ಸದ್ಯ ದಿನಕ್ಕೆ 1,500 ಮಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದ್ದು, ಈ ಪ್ರಮಾಣವನ್ನು 1,800ಕ್ಕೆ ಹೆಚ್ಚಿಸುತ್ತೇವೆ. ಕೆಜಿಎಫ್‌ನ ಸಂಭ್ರಮ್ ಆಸ್ಪತ್ರೆ ಪ್ರಯೋಗಾಲಯವನ್ನು ಜಿಲ್ಲಾಡಳಿತ ಪಡೆದುಕೊಂಡಿದ್ದು, ಅಲ್ಲಿ 1 ಸಾವಿರ ಮಂದಿಗೆ ಮತ್ತು ಜಾಲಪ್ಪ ಆಸ್ಪತ್ರೆಯಲ್ಲಿ 300 ಮಂದಿಗೆ ಕೋವಿಡ್‌ ಪರೀಕ್ಷೆ ಮಾಡಲಾಗುತ್ತಿದೆ. ಸಾಧ್ಯವಾದರೆ ಪ್ರತಿನಿತ್ಯ 4 ಸಾವಿರ ಮಂದಿಗೆ ಪರೀಕ್ಷೆ ಮಾಡಲು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

‘2ನೇ ಡೋಸ್‌ ಕೋವಿಡ್‌ ಲಸಿಕೆ ಹಾಕಿಸಿಕೊಳ್ಳುವವರಿಗೆ ಮೊದಲ ಆದ್ಯತೆ ನೀಡುತ್ತೇವೆ. ಕೋವ್ಯಾಕ್ಸಿನ್‌ ಲಸಿಕೆ ಹಾಕಿಸಿಕೊಂಡಿರುವವರು ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಂಪರ್ಕಿಸಿದರೆ ಮೂರ್ನಾಲ್ಕು ದಿನದಲ್ಲಿ 2ನೇ ಡೋಸ್‌ ಲಸಿಕೆಯ ವ್ಯವಸ್ಥೆ ಮಾಡಲಾಗುವುದು. 45 ವರ್ಷ ಮೀರಿದ ಎಲ್ಲರಿಗೂ ಕೋವಿಶಿಲ್ಡ್‌ ಲಸಿಕೆ ನೀಡಲಾಗುವುದು. 2ನೇ ಡೋಸ್‌ಗೆ ಕಾಯುತ್ತಿರುವವರಿಗೆ ಮಾತ್ರ ಕೋವ್ಯಾಕ್ಸಿನ್ ನೀಡಲಾಗುವುದು’ ಎಂದರು.

ಜಿಲ್ಲಾಧಿಕಾರಿ ಆರ್.ಸೆಲ್ವಮಣಿ, ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್‌ರೆಡ್ಡಿ, ಕೆಜಿಎಫ್‌ ಪೊಲೀಸ್‌ ಜಿಲ್ಲಾ ವರಿಷ್ಠಾಧಿಕಾರಿ ಇಲಕ್ಕಿಯಾ ಕರುಣಾಗರನ್‌, ಹೆಚ್ಚುವರಿ ಜಿಲ್ಲಾಧಿಕಾರಿ ಪುಷ್ಪಲತಾ, ತಹಶೀಲ್ದಾರ್ ಶೋಭಿತಾ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT