ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಸರಣಿ ಮುಂದುವರಿದಿದ್ದು, ಶುಕ್ರವಾರ ಕೋಲಾರದ ಟಮಕ ಬಡಾವಣೆಯ ಸೋಂಕಿತ ವಯೋವೃದ್ಧರೊಬ್ಬರು ಮೃತಪಟ್ಟಿದ್ದಾರೆ.
ಆರ್.ಎಲ್ ಜಾಲಪ್ಪ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರಿಗೆ ಮಧುಮೇಹ ಸೇರಿದಂತೆ ವಿವಿಧ ಬಗೆಯ ಆರೋಗ್ಯ ಸಮಸ್ಯೆಗಳಿದ್ದವು. ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದ ಇವರ ದೇಹ ಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಾ ಸಾಗಿತ್ತು. ಅಂತಿಮವಾಗಿ ಶುಕ್ರವಾರ ಕೊನೆಯುಸಿರೆಳೆದರು. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಇದರ ಬೆನ್ನೆಲ್ಲೇ ಜಿಲ್ಲೆಯಲ್ಲಿ ಹೊಸದಾಗಿ 32 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 14 ಮಂದಿಗೆ ಸೋಂಕು ಹರಡಿದೆ. ಉಳಿದಂತೆ ಬಂಗಾರಪೇಟೆ ತಾಲ್ಲೂಕಿನಲ್ಲಿ 7 ಮಂದಿಗೆ, ಶ್ರೀನಿವಾಸಪುರ ತಾಲ್ಲೂಕಿನಲ್ಲಿ 4 ಮಂದಿಗೆ, ಮಾಲೂರು ತಾಲ್ಲೂಕಿನಲ್ಲಿ ಮೂವರಿಗೆ, ಕೆಜಿಎಫ್ ಮತ್ತು ಮುಳಬಾಗಿಲು ತಾಲ್ಲೂಕಿನಲ್ಲಿ ತಲಾ ಇಬ್ಬರಿಗೆ ಸೋಂಕು ಬಂದಿದೆ.
ಕೋಲಾರ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ 4 ಮಂದಿಗೆ, ಹೊರ ಜಿಲ್ಲೆಗೆ ಹೋಗಿ ಬಂದಿದ್ದ ನಾಲ್ವರಿಗೆ, ಸೋಂಕಿತರ ಸಂಪರ್ಕದಿಂದ 4 ಮಂದಿಗೆ ಸೋಂಕು ಹರಡಿದೆ. 61 ವರ್ಷದ ವೃದ್ಧ ಹಾಗೂ 53 ವರ್ಷದ ಮಹಿಳೆಗೆ ಸೋಂಕು ಹರಡಿದ್ದು, ಸೋಂಕಿನ ಮೂಲ ಪತ್ತೆಯಾಗಿಲ್ಲ.
ಬಂಗಾರಪೇಟೆ ತಾಲ್ಲೂಕಿನಲ್ಲಿ ಸೋಂಕಿತ ವ್ಯಕ್ತಿಯ ಸಂಖ್ಯೆ 21,658ರ ಸಂಪರ್ಕದಿಂದ ಇಬ್ಬರಿಗೆ, ಹೊರ ಜಿಲ್ಲೆಗೆ ಬಂದಿದ್ದ ಇಬ್ಬರಿಗೆ, ವಿಷಮ ಶೀತ ಜ್ವರದಿಂದ ಬಳಲುತ್ತಿರುವ ಪುರುಷರೊಬ್ಬರಿಗೆ ಸೋಂಕು ತಗುಲಿದೆ. ಮಹಿಳೆ ಮತ್ತು ಪುರುಷರೊಬ್ಬರಿಗೆ ಸೋಂಕು ಬಂದಿದ್ದು, ಸೋಂಕಿನ ಮೂಲದ ಬಗ್ಗೆ ವೈದ್ಯಕೀಯ ಸಿಬ್ಬಂದಿ ಪರಿಶೀಲನೆ ಮುಂದುವರಿಸಿದ್ದಾರೆ.
ಆರೋಗ್ಯ ಕಾರ್ಯಕರ್ತೆಗೆ ಸೋಂಕು: ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಆರೋಗ್ಯ ಕಾರ್ಯಕರ್ತೆಯೊಬ್ಬರಿಗೆ, ಸೋಂಕಿತ ವ್ಯಕ್ತಿಯ ಸಂಪರ್ಕದಿಂದ ಪುರುಷರೊಬ್ಬರಿಗೆ, ಹೊರ ಜಿಲ್ಲೆಗೆ ಹೋಗಿದ್ದ ವ್ಯಕ್ತಿಗೆ ಸೋಂಕು ಇರುವುದು ಖಚಿತವಾಗಿದೆ. 39 ವರ್ಷದ ಪುರುಷರೊಬ್ಬರಿಗೆ ಸೋಂಕು ಬಂದಿದ್ದು, ಸೋಂಕಿನ ಮೂಲ ಪತ್ತೆಯಾಗಿಲ್ಲ.
ಕೆಜಿಎಫ್ ಮತ್ತು ಮಾಲೂರು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ 5 ಮಂದಿಗೆ, ಮುಳಬಾಗಿಲು ತಾಲ್ಲೂಕಿನಲ್ಲಿ 50 ವರ್ಷದ ಪುರುಷ ಮತ್ತು 19 ವರ್ಷದ ಯುವಕರೊಬ್ಬರಿಗೆ ಸೋಂಕು ಹರಡಿದ್ದು, ಸೋಂಕಿನ ಮೂಲ ಪತ್ತೆಯಾಗಿಲ್ಲ.
ಸೋಂಕಿತ ಮನೆ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಸೀಲ್ಡೌನ್ ಮಾಡಲಾಗಿದೆ. ಅಲ್ಲದೇ, ಸುರಕ್ಷತಾ ಕ್ರಮವಾಗಿ ಇಡೀ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಕ್ವಾರಂಟೈನ್ ಮಾಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.