ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೌರವಧನ ಹೆಚ್ಚಳಕ್ಕೆ ಒತ್ತಾಯ: ಧರಣಿ

ಸರ್ಕಾರಕ್ಕೆ ಅಂಗನವಾಡಿ ನೌಕರರ ಬಗ್ಗೆ ಕಾಳಜಿಯಿಲ್ಲ: ಆಕ್ರೋಶ
Last Updated 12 ಆಗಸ್ಟ್ 2021, 13:18 IST
ಅಕ್ಷರ ಗಾತ್ರ

ಕೋಲಾರ: ಗೌರವಧನ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಇಲ್ಲಿ ಗುರುವಾರ ಜಿಲ್ಲಾ ಪಂಚಾಯಿತಿ ಎದುರು ಧರಣಿ ನಡೆಸಿದರು.

‘ಕೋವಿಡ್ ಆತಂಕದ ನಡುವೆಯೂ ಅಂಗನವಾಡಿ ನೌಕರರು ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಆದರೆ, ಸರ್ಕಾರ ಅಂಗನವಾಡಿ ನೌಕರರ ಹಿತ ಕಾಯುವಲ್ಲಿ ವಿಫಲವಾಗಿದೆ. ಸರ್ಕಾರಕ್ಕೆ ನೌಕರರ ಬಗ್ಗೆ ಸ್ವಲ್ಪವೂ ಕಾಳಜಿಯಿಲ್ಲ’ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.

‘ಅಂಗನವಾಡಿ ನೌಕರರಿಗೆ ನೀಡುತ್ತಿರುವ ಗೌರವಧನ ತುಂಬಾ ಕಡಿಮೆಯಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಗೌರವಧನ ನೌಕರರ ಜೀವನ ನಿರ್ವಹಣೆಗೆ ಸಾಲುತ್ತಿಲ್ಲ. ಕಾಂಗ್ರೆಸ್‌ ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ಗೌರವಧನ ಪರಿಷ್ಕರಿಸಿಲ್ಲ’ ಎಂದು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಸಿ.ಶಿವಣ್ಣ ಅಸಮಾಧಾನ ವ್ಯಕ್ತಪಡಿಸಿದರು.

‘ಅಂಗನವಾಡಿ ನೌಕರರು ಕೋವಿಡ್‌ ಸಂಕಷ್ಟದಲ್ಲೂ ಯಾವುದೇ ಷರತ್ತು ವಿಧಿಸದೆ ಕಾರ್ಯ ನಿರ್ವಹಿಸಿದ್ದಾರೆ. ಕೊರೊನಾ ಸೋಂಕಿನಿಂದ ರಾಜ್ಯದಲ್ಲಿ ಸಾಕಷ್ಟು ಅಂಗನವಾಡಿ ನೌಕರರು ಮೃತಪಟ್ಟಿದ್ದಾರೆ. ಅಲ್ಲದೇ, ಹಲವು ನೌಕರರಿಗೆ ಕೊರೊನಾ ಸೋಂಕು ತಗುಲಿ ಗುಣಮುಖರಾಗಿದ್ದಾರೆ. ಆದರೆ, ಸರ್ಕಾರ ನೌಕರರ ಬೇಡಿಕೆ ಈಡೇರಿಸಲು ಮೀನಮೇಷ ಎಣಿಸುತ್ತಿದೆ’ ಎಂದು ಕಿಡಿಕಾರಿದರು.

ಗುಣಮಟ್ಟ ಕಳಪೆ: ‘ಜಿಲ್ಲೆಯ ಅಂಗನವಾಡಿಗಳಲ್ಲಿ ಗರ್ಭಿಣಿಯರು ಮತ್ತು ಮಕ್ಕಳಿಗೆ ವಿತರಿಸುತ್ತಿರುವ ಆಹಾರ ಪದಾರ್ಥಗಳ ಗುಣಮಟ್ಟ ಕಳಪೆಯಾಗಿದೆ. ಸರ್ಕಾರ ನಿಗದಿಪಡಿಸಿದ ಪ್ರಮಾಣಕ್ಕಿಂತ ಕಡಿಮೆ ಪ್ರಮಾಣದಲ್ಲಿ ಆಹಾರ ಪದಾರ್ಥಗಳನ್ನು ಕೊಡಲಾಗುತ್ತಿದೆ. ಈ ಅಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಶಾಮೀಲಾಗಿದ್ದಾರೆ’ ಎಂದು ಧರಣಿನಿರತರು ಆರೋಪಿಸಿದರು.

‘ಈ ಹಿಂದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆಯಾಗಿದ್ದ ಶಶಿಕಲಾ ಜೊಲ್ಲೆ ಅವರು ಅಂಗನವಾಡಿಗಳಿಗೆ ಮೊಟ್ಟೆ ಖರೀದಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆಸಿರುವ ಸಂಗತಿ ಬಯಲಾಗಿದೆ. ಆದರೂ ನೂತನ ಸಚಿವ ಸಂಪುಟದಲ್ಲಿ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ಮೊಟ್ಟೆ ಖರೀದಿ ಅಕ್ರಮದ ಬಗ್ಗೆ ಉನ್ನತ ತನಿಖೆ ನಡೆಸಿ ಶಶಿಕಲಾ ಜೊಲ್ಲೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.

ಹಣದ ಕೊರತೆ: ‘ಮೊಟ್ಟೆ, ತರಕಾರಿ, ಆಹಾರ ಪದಾರ್ಥ ಖರೀದಿಸಲು ಹಣದ ಕೊರತೆಯಿದೆ. ನೌಕರರು ತಮ್ಮ ಗೌರವಧನದಲ್ಲಿ ಮುಕ್ಕಾಲು ಭಾಗವನ್ನು ಆಹಾರ ಪದಾರ್ಥಗಳ ಖರೀದಿಗೆ ಮೀಸಲಿಡುವಂತಾಗಿದೆ. ಬಾಕಿ ಗೌರವಧನ ಮತ್ತು ಬಿಲ್‌ ಪಾವತಿಸುವಂತೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಗೌರವಧನ ಹೆಚ್ಚಿಸಬೇಕು ಮತ್ತು ಸುರಕ್ಷತಾ ಸಲಕರಣೆ ನೀಡಬೇಕು. ನೌಕರರಿಗೆ ವಿಮೆ ಸೌಲಭ್ಯ ಕಲ್ಪಿಸಬೇಕು’ ಎಂದು ಮನವಿ ಮಾಡಿದರು.

ಸಮಿತಿಯ ರಾಜ್ಯ ಘಟಕದ ಸಹ ಕಾರ್ಯದರ್ಶಿ ವಿ.ಜಮುನಾರಾಣಿ, ಸಂಚಾಲಕಿ ನಾಗವೇಣಮ್ಮ, ಖಜಾಂಚಿ ಡಿ.ಎನ್‌.ಗಂಗರತ್ನಮ್ಮ, ಪ್ರಜಾಸೇವಾ ಸಮಿತಿ ರಾಜ್ಯ ಘಟಕದ ಎಸ್‌.ನಾರಾಯಣಸ್ವಾಮಿ, ರೈತ ಸಂಘ (ನಂಜುಂಡಸ್ವಾಮಿ ಬಣ) ರಾಜ್ಯ ಯುವ ಘಟಕದ ಅಧ್ಯಕ್ಷ ರಾಮುಶಿವಣ್ಣ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT