ಮುಳಬಾಗಿಲು: ಸದಾಶಿವ ಆಯೋಗದ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಲು ಒತ್ತಾಯಿಸಿ ಅಬಕಾರಿ ಸಚಿವ ಎಚ್. ನಾಗೇಶ್ ಅವರಿಗೆ ಮಾದಿಗ ಮೀಸಲಾತಿ ಹೋರಾಟ ಸಮಿತಿ ತಾಲ್ಲೂಕು ಘಟಕದ ಸದಸ್ಯರು ಮನವಿ ಸಲ್ಲಿಸಿದರು.
ಮಾದಿಗ ಹೋರಾಟ ಸಮಿತಿಯ ಕಾರ್ಯಕರ್ತರು ಒಳ ಮೀಸಲಾತಿಗಾಗಿ 25 ವರ್ಷಗಳಿಂದ ಹೋರಾಟ ನಡೆಸುತ್ತಿದ್ದಾರೆ. ಪರಿಶಿಷ್ಟ ಜಾತಿಯಲ್ಲಿ ಅತಿ ಹೆಚ್ಚು ಜನಸಂಖ್ಯೆ ಇರುವ ಈ ಸಮುದಾಯ ಸಾಮಾಜಿಕ, ಆರ್ಥಿಕ, ರಾಜಕೀಯ, ಶೈಕ್ಷಣಿಕವಾಗಿ ಹಿಂದುಳಿದಿದೆ. ಸರ್ಕಾರಿ ಸೌಲಭ್ಯಗಳಿಂದ ವಂಚಿತವಾಗುತ್ತಿದೆ ಎಂದು ಆರೋಪಿಸಿದರು.
ಆಗಸ್ಟ್ 27ರಂದು ಸುಪ್ರೀಂಕೋರ್ಟ್ ಒಳ ಮೀಸಲಾತಿಯನ್ನು ಅಧಿವೇಶನದಲ್ಲಿ ಮಂಡಿಸಬಹುದೆಂದು ಆದೇಶಿಸಿದೆ. ರಾಜ್ಯ ಸರ್ಕಾರ ಶೀಘ್ರ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಉಪಾದ್ಯಕ್ಷ ಆರ್.ವೇಣು, ಜಿಲ್ಲಾಧ್ಯಕ್ಷ ಚಂದ್ರಪ್ಪ, ತಾಲ್ಲೂಕು ಅಧ್ಯಕ್ಷ ಮೋತಕಪಲ್ಲಿ ರಾಮಪ್ಪ, ಶ್ರೀನಿವಾಸಪುರ ತಾಲ್ಲೂಕು ಅಧ್ಯಕ್ಷ ಜಿ. ಶಂಕರ್, ಮುಖಂಡರಾದ ರವಿಕುಮಾರ್, ನಾರಾಯಣಸ್ವಾಮಿ ಕೃಷ್ಣಪ್ಪ ಉಪಸ್ಥಿತರಿದ್ದರು.