ಶ್ರೀನಿವಾಸಪುರ: ‘ಹೈನುಗಾರಿಕೆ ಜಿಲ್ಲೆಯ ರೈತರ ಜೀವನಾಡಿಯಾಗಿದೆ. ರೈತರು ಉತ್ತಮ ಗುಣಮಟ್ಟದ ಹಾಲು ಉತ್ಪಾದಿಸಿ ಅಧಿಕ ಲಾಭ ಗಳಿಸಬೇಕು’ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಎಂ. ಶೀನಪ್ಪ ಹೇಳಿದರು.
ತಾಲ್ಲೂಕಿನ ಗುಂಡಮನತ್ತ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ನಿರ್ಮಾಣಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹ 1.50 ಲಕ್ಷ ಮೌಲ್ಯದ ಚೆಕ್ ವಿತರಿಸಿ ಮಾತನಾಡಿದರು.
ಹಾಲು ಉತ್ಪಾದಕರ ಸಹಕಾರ ಸಂಘಗಳು ಮೂಲಸೌಕರ್ಯ ಹೊಂದಬೇಕು. ಕ್ಷೀರೋತ್ಪಾದಕರ ಹಿತರಕ್ಷಣೆಗಾಗಿ ಶ್ರಮಿಸಬೇಕು ಎಂದು ಹೇಳಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮಗಳ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿ ಜಾರಿಗೆ ತರಲಾಗಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಕೃಪೆಯಿಂದ ಎಲ್ಲ ಯೋಜನೆಗಳೂ ಯಶಸ್ವಿಯಾಗಿ ನಡೆಯುತ್ತಿವೆ. ಫಲಾನುಭವಿಗಳು ಅವುಗಳ ಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು.
ಸ್ಥಳೀಯ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಜಿ.ವಿ. ನಾಗರಾಜಪ್ಪ ಚೆಕ್ ಸ್ವೀಕರಿಸಿ ಮಾತನಾಡಿ, ಸಂಘದ ಕಟ್ಟಡ ನಿರ್ಮಾಣಕ್ಕೆ ಆರ್ಥಿಕ ನೆರವು ನೀಡಿರುವ ವೀರೇಂದ್ರ ಹೆಗ್ಗಡೆ ಅವರ ಉಪಕಾರವನ್ನು ಎಂದೂ ಮರೆಯಲಾಗದು. ಅವರು ಮಾಡುತ್ತಿರುವ ಜನಸೇವೆ ಮಾದರಿಯಾಗಿದೆ ಎಂದು ಹೇಳಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಘಟಕದ ಯೋಜನಾಧಿಕಾರಿ ಎಸ್. ಸುರೇಶ್ ಗೌಡ, ಸ್ಥಳೀಯ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾದ ಜಿ.ಎಂ. ನಾರಾಯಣಸ್ವಾಮಿ, ಜಿ.ಎಂ. ಶ್ರೀನಿವಾಸಪ್ಪ, ಮುನಿರಾಜು, ನಾಗೇಶಪ್ಪ, ರಾಮಚಂದ್ರಗೌಡ ಇದ್ದರು.