ಕೋಲಾರ: ಜಿಲ್ಲೆಯ ಹಲವೆಡೆ ಶುಕ್ರವಾರ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಮುಂಗಾರು ಹಂಗಾಮಿನ ಬಿತ್ತನೆಗಾಗಿ ಮಳೆ ನಿರೀಕ್ಷೆಯಲ್ಲಿದ್ದ ರೈತರ ಮೊಗದಲ್ಲಿ ಸಂತಸ ಮೂಡಿದೆ.
ಕಳೆದೊಂದು ವಾರದಿಂದ ಜಿಲ್ಲೆಯಲ್ಲಿ ಬಿಸಿಲ ತಾಪ ಹೆಚ್ಚಿತ್ತು. ಶುಕ್ರವಾರ ಇಡೀ ದಿನ ಶಕೆಯ ಅನುಭವವಿತ್ತು. ಸಂಜೆ 5 ಗಂಟೆ ಸುಮಾರಿಗೆ ಆರಂಭವಾದ ಮಳೆ ಸುಮಾರು 45 ನಿಮಿಷ ಎಡಬಿಡದೆ ಸುರಿಯಿತು. ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನರಿಗೆ ಮಳೆಯು ಹಿತಾನುಭವ ನೀಡಿತು. ಉತ್ತಮ ಮಳೆಗೆ ಜಮೀನುಗಳು ಹದವಾದವು.
ಮತ್ತೊಂದೆಡೆ ವರುಣ ದೇವ ರೈತರಿಗೆ ಕಣ್ಣೀರು ತರಿಸಿದ್ದು, ಟೊಮೆಟೊ, ಕೋಸು, ಬೀನ್ಸ್, ದಪ್ಪ ಮೆಣಸಿನಕಾಯಿ ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ತೋಟಗಾರಿಕೆ ಬೆಳೆಗಳು ಮಳೆಗೆ ನೆಲಕಚ್ಚಿವೆ. ಕೊಯ್ಲಿಗೆ ಬಂದಿದ್ದ ಮಾವಿನ ಕಾಯಿಗಳು ಮಳೆಯ ತೀವ್ರತೆಗೆ ನೆಲಕ್ಕೆ ಉರುಳಿದ್ದು, ರೈತರ ಜಮೀನುಗಳಲ್ಲಿ ಮಳೆ ನೀರು ಕೆರೆಯಂತೆ ನಿಂತಿದೆ. ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದ ಮಾವು ಬೆಳೆಗಾರರು ಧಾರಾಕಾರ ಮಳೆಯಿಂದ ಕಂಗಾಲಾಗಿದ್ದಾರೆ.
ಜನಜೀವನ ಅಸ್ತವ್ಯಸ್ತ: ಆಕಾಶಕ್ಕೆ ತೂತು ಬಿದ್ದಂತೆ ಸುರಿದ ಮಹಾ ಮಳೆಗೆ ಜಿಲ್ಲಾ ಕೇಂದ್ರದಲ್ಲಿ ಜನಜೀವನ ಅಸ್ತವ್ಯಸ್ತವಾಯಿತು. ಮಳೆಯಿಂದಾಗಿ ಚರಂಡಿ ಹಾಗೂ ಮ್ಯಾನ್ಹೋಲ್ಗಳು ಕ್ಷಣ ಮಾತ್ರದಲ್ಲಿ ಭರ್ತಿಯಾಗಿ ಕೊಳಚೆ ನೀರು ರಸ್ತೆಗಳ ಮೇಲೆ ಹರಿಯಿತು.
ಚರಂಡಿ, ರಾಜಕಾಲುವೆ, ಉದ್ಯಾನ, ಮೈದಾನಗಳು ಸಂಪೂರ್ಣ ಜಲಾವೃತವಾಗಿದ್ದು, ತಗ್ಗು ಪ್ರದೇಶದ ಹಲವು ಬಡಾವಣೆಗಳಲ್ಲಿ ಮನೆಗಳಿಗೆ ಮಳೆ ಹಾಗೂ ರಾಜಕಾಲುವೆ ನೀರು ನುಗ್ಗಿ ಸಾಕಷ್ಟು ಅವಾಂತರ ಸೃಷ್ಟಿಸಿದೆ.
ನೀರಿನಿಂದ ಪೀಠೋಪಕರಣಗಳು, ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದೆ. ಫ್ರಿಡ್ಜ್, ವಾಷಿಂಗ್ ಮೆಷಿನ್, ನೀರೆತ್ತುವ ಮೋಟರ್ನಂತಹ ವಿದ್ಯುತ್ ಉಪಕರಣಗಳು ಸುಟ್ಟು ಹೋಗಿವೆ. ಮನೆಯಲ್ಲಿದ್ದ ಬಟ್ಟೆ, ಹಾಸಿಗೆ, ಅಕ್ಕಿ, ರಾಗಿ, ಬೇಳೆ ಕಾಳು ಮೂಟೆಗಳು ನೀರಿನಲ್ಲಿ ಮುಳುಗಿವೆ. ನಿವಾಸಿಗಳು ಮಳೆ ನೀರನ್ನು ಮನೆಯಿಂದ ಹೊರ ಹಾಕುವುದರಲ್ಲೇ ರಾತ್ರಿ ಕಳೆದರು.
ಚರಂಡಿ, ರಾಜಕಾಲುವೆಗಳಲ್ಲಿ ಕಸ ಕಟ್ಟಿಕೊಂಡಿದ್ದರಿಂದ ನೀರಿನ ಹರಿವಿಗೆ ಅಡ್ಡಿಯಾಗಿ ಅಕ್ಕಪಕ್ಕದ ಮನೆಗಳಿಗೆ ನುಗ್ಗಿದೆ. ಈ ಸಂಬಂಧ ಸ್ಥಳೀಯರು ನಗರಸಭೆ ನಿಯಂತ್ರಣ ಕೊಠಡಿಗೆ ಕರೆ ಮಾಡಿ ದೂರು ನೀಡಿದರೂ ಸಿಬ್ಬಂದಿ ಸಮಸ್ಯೆಗೆ ಸ್ಪಂದಿಸಲಿಲ್ಲ. ನಗರಸಭೆ ಸಿಬ್ಬಂದಿಯನ್ನು ಕಾದು ಹೈರಾಣಾದ ಸ್ಥಳೀಯರು ಸ್ವತಃ ಚರಂಡಿಗೆ ಇಳಿದು ಸ್ವಚ್ಛಗೊಳಿಸಿದರು. ಮ್ಯಾನ್ಹೋಲ್ಗಳಲ್ಲಿ ಕಟ್ಟಿಕೊಂಡಿದ್ದ ಕಸ ಹೊರತೆಗೆದರು.
ಸಂಪರ್ಕ ಕಡಿತ: ಮಳೆಯಿಂದಾಗಿ ಹಲವು ಬಡಾವಣೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತು. ಮಳೆಗೆ ಜಿಲ್ಲಾ ಕೇಂದ್ರದ ರಸ್ತೆಗಳ ಚಿತ್ರಣವೇ ಬದಲಾಯಿತು. ರಸ್ತೆ ಗುಂಡಿಗಳಲ್ಲಿ ಮಳೆ ನೀರು ತುಂಬಿಕೊಂಡು ರಸ್ತೆಗಳು ರಾಡಿಯಾದವು. ರೈಲ್ವೆ ಕೆಳ ಸೇತುವೆಗಳು ಹಾಗೂ ತಗ್ಗು ಪ್ರದೇಶದ ರಸ್ತೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ನೀರು ನಿಂತಿದ್ದು, ಅಕ್ಕಪಕ್ಕದ ಬಡಾವಣೆಗಳಿಗೆ ಸಂಪರ್ಕ ಕಡಿತಗೊಂಡಿದೆ.
ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಜೂನ್ 6ರವರೆಗೆ ಮಳೆಯಾಗಲಿದ್ದು, ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಾಗ ಕಡ್ಡಾಯವಾಗಿ ಮುನ್ನೆಚ್ಚರಿಕೆ ಕ್ರಮ ಅನುಸರಿಸಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.